ಕೇಂದ್ರದ ನೀತಿಗಳ ವಿರುದ್ಧ ಕಾರ್ಮಿಕರಿಂದ ಜೈಲ್ ಭರೋ: ರಸ್ತೆ ತಡೆಗೆ ಯತ್ನಿಸಿದ ಪ್ರತಿಭಟನಕಾರರು ವಶಕ್ಕೆ-ಬಿಡುಗಡೆ
ಉಡುಪಿ, ಆ.10: ಕೇಂದ್ರ ಸರಕಾರದ ರೈತ, ಕಾರ್ಮಿಕ ಹಾಗೂ ಕೂಲಿಕಾರರ ವಿರೋಧಿ ನೀತಿಗಳನ್ನು ವಿರೋಧಿಸಿ ಸಿಐಟಿಯು ನೇತೃತ್ವದಲ್ಲಿ ರೈತ-ಕಾರ್ಮಿಕ-ಕೂಲಿಕಾರರು ಸೋಮವಾರ ಉಡುಪಿ ನಗರದ ಪ್ರಧಾನ ಅಂಚೆ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಸಿಐಟಿಯು ರಾಜ್ಯ ಕಾರ್ಯದರ್ಶಿ ಸುರೇಶ್ ಕಲ್ಲಾಗರ, ನಾಲ್ಕು ಕಾರ್ಮಿಕ ಸಂಹಿತೆಗಳನ್ನು ಜಾರಿಗೊಳಿಸುವ ಮೂಲಕ ಕೇಂದ್ರ ಸರಕಾರ ಕಾರ್ಮಿಕರನ್ನು ಗುಲಾಮಗಿರಿ ಯತ್ತ ತಳ್ಳುತ್ತಿದೆ. ರಾಜ್ಯ ಸರಕಾರ ಪರಿಷ್ಕರಿಸಿರುವ ಕನಿಷ್ಠ ವೇತನವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು. ಕಾರ್ಮಿಕ ವರ್ಗವನ್ನು ಬಲಿಕೊಟ್ಟು ಬಂಡವಾಳಶಾಹಿಗಳ ಸೂಪರ್ ಲಾಭಕ್ಕೆ ಅವಕಾಶ ಮಾಡಿಕೊಡುವ ನೀತಿಗಳನ್ನು ಕೈಬಿಡಬೇಕು ಎಂದು ಆಗ್ರಹಿಸಿದರು.
ದೇಶದ ಯುವಜನರನ್ನು ಗುತ್ತಿಗೆ ಹಾಗೂ ಹೊರಗುತ್ತಿಗೆ ಪದ್ಧತಿಯ ಮೂಲಕ ಶೋಷಿಸುವ ನೀತಿಗಳು ಮುಂದೊಂದು ದಿನ ಜೆನ್-ಝಿ ಯುವ ಜನರ ಹೋರಾಟದ ಮಾದರಿಯಲ್ಲಿ ಬೃಹತ್ ಪ್ರತಿಭಟನೆಯಾಗಿ ಸ್ಫೋಟಗೊಳ್ಳುವ ಸಾಧ್ಯತೆ ಇದೆ ಎಂದು ಅವರು ಎಚ್ಚರಿಸಿದರು.
ಜಿಲ್ಲೆಯ ಹಲವು ಕ್ಷೇತ್ರಗಳಲ್ಲಿ ದುಡಿಯುತ್ತಿರುವ ಹೊರಗುತ್ತಿಗೆ ನೌಕರರಿಗೆ ಏಜೆನ್ಸಿಗಳು ತಿಂಗಳುಗಟ್ಟಲೆ ವೇತನ ಬಾಕಿ ಉಳಿಸಿಕೊಂಡಿದ್ದರೂ ಜಿಲ್ಲಾಡಳಿತ ಸೂಕ್ತ ಕ್ರಮ ಕೈಗೊಂಡಿಲ್ಲ. ಜಿಲ್ಲಾ ಗ್ರಂಥಾಲಯಗಳ ಸಿಬ್ಬಂದಿಗೆ ನಾಲ್ಕು ತಿಂಗಳಿಂದ ವೇತನ ನೀಡದೆ ಅಮಾನವೀಯವಾಗಿ ದುಡಿಸಿಕೊಳ್ಳುತ್ತಿದ್ದಾರೆ ಎಂದು ಅವರು ಆರೋಪಿಸಿದರು.
ರೈತರು, ಕಾರ್ಮಿಕರು ಹಾಗೂ ಕೂಲಿಕಾರರ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸದಿದ್ದರೆ, 1942ರ ಆಗಸ್ಟ್ 8ರಂದು ಬ್ರಿಟಿಷರ ವಿರುದ್ಧ ಮೊಳಗಿದ ಕ್ವಿಟ್ ಇಂಡಿಯಾ ಚಳವಳಿಯ ಸ್ಫೂರ್ತಿಯಲ್ಲಿ, ಕಾರ್ಪೊರೇಟ್ ಕಂಪೆನಿಗಳ ಜನವಿರೋಧಿ ನೀತಿಗಳ ವಿರುದ್ಧ ಕಾರ್ಪೊರೇಟ್ ಕಂಪೆನಿಗಳೇ ದೇಶ ಬಿಟ್ಟು ತೊಲಗಿ ಎಂಬ ಘೋಷಣೆಯೊಂದಿಗೆ ಹೋರಾಟವನ್ನು ಇನ್ನಷ್ಟು ತೀವ್ರಗೊಳಿ ಸಲಾಗುವುದು ಎಂದು ಅವರು ಹೇಳಿದರು.
ಸಿಐಟಿಯು ಉಡುಪಿ ಜಿಲ್ಲಾಧ್ಯಕ್ಷ ಶಶಿಧರ ಗೊಲ್ಲ ಮಾತನಾಡಿ, ಬೀಡಿ, ಕಟ್ಟಡ ಹಾಗೂ ಕಾರ್ಖಾನೆ ಕಾರ್ಮಿಕರು ಎದುರಿಸುತ್ತಿರುವ ಸಮಸ್ಯೆಗಳನ್ನು ಕೇಂದ್ರ ಸರಕಾರ ಕೂಡಲೇ ಪರಿಹರಿಸಬೇಕು. ಹೊರರಾಜ್ಯದಿಂದ ಬೀಡಿ ಖರೀದಿ ಕೈಬಿಟ್ಟು ಕರ್ನಾಟಕದ ಕಾರ್ಮಿಕರಿಂದಲೇ ಬೀಡಿಯನ್ನು ಖರೀದಿಸ ಬೇಕು. ಇದರಿಂದ ಇಲ್ಲಿನ ಕಾರ್ಮಿಕರಿಗೆ ಅನುಕೂಲ ಮಾಡಲು ಸಾಧ್ಯವಾಗುತ್ತದೆ ಎಂದು ಹೇಳಿದರು.
ಕರ್ನಾಟಕ ಪ್ರಾಂತ ಕೃಷಿಕೂಲಿಕಾರರ ಸಂಘದ ಜಿಲ್ಲಾಧ್ಯಕ್ಷ ಸೈಯ್ಯದ್ ಅಲಿ, ರೈತರಿಗೆ ಬೆಂಬಲ ಬೆಲೆ ಖಾತರಿಪಡಿಸಬೇಕು ಹಾಗೂ ರಾಜ್ಯದ ವಿವಿಧೆಡೆ ನಡೆಸುತ್ತಿರುವ ಬಲವಂತದ ಭೂಸ್ವಾಧೀನ ಪ್ರಕ್ರಿಯೆಯನ್ನು ಕೂಡಲೇ ಕೈಬಿಡಬೇಕು ಎಂದು ಆಗ್ರಹಿಸಿದರು.
ಸಿಐಟಿಯು ಜಿಲ್ಲಾ ಕೋಶಾಧಿಕಾರಿ ಕವಿರಾಜ್ ಎಸ್.ಕಾಂಚನ್ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರತಿಭಟನೆಯಲ್ಲಿ ಮುಖಂಡರಾದ ಸುಭಾಶ್ಚಂದ್ರ ನಾಯಕ್, ಉಮೇಶ್ ಕುಂದರ್, ಸುನೀತಾ ಶೆಟ್ಟಿ, ನಳಿನಿ, ನಾಗರಾಜ್ ಕಾಂಚನ್, ಸರೋಜ, ಪ್ರಭಾಕರ್ ಕುಂದರ್, ಮೋಹನಚಂದ್ರ, ನಾಗೇಶ್, ರಮೇಶ್, ವಾಮನ ಪೂಜಾರಿ, ಮುರಳಿ, ರಂಗನಾಥ್ ಸಾರಿಕ್, ಶಾರದಾ, ಶರ್ಮಿಳಾ ಮೊದಲಾದವರು ಉಪಸ್ಥಿತರಿದ್ದರು.
ಬಳಿಕ ಪ್ರತಿಭಟನಕಾರರು ಅಂಚೆ ಕಚೇರಿ ಸಮೀಪದ ತ್ರಿವೇಣಿ ಸರ್ಕಲ್ಗೆ ತೆರಳಿ ರಸ್ತೆ ತಡೆ ನಡೆಸಲು ಯತ್ನಿಸಿದರು. ಕೂಡಲೇ ಪೊಲೀಸರು ಪ್ರತಿಭಟನ ಕಾರರನ್ನು ತಡೆದು ವಶಕ್ಕೆ ಪಡೆದು ಬಳಿಕ ಬಿಡುಗಡೆಗೊಳಿಸಿದರು. ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು.
‘ಯುಪಿಎ ಸರಕಾರ ಅವಧಿಯಲ್ಲಿ ಎಡಪಕ್ಷಗಳ ಒತ್ತಾಯ ಹಾಗೂ ಬೆಂಬಲದ ಹಿನ್ನೆಲೆಯಲ್ಲಿ ಗ್ರಾಮೀಣ ಜನರ ಆದಾಯ ಹೆಚ್ಚಿಸಲು ಜಾರಿಗೊಂಡ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಗೆ ಬದಲಾಗಿ ಕೇಂದ್ರ ಸರ್ಕಾರ ಜಾರಿಗೊಳಿಸಲು ಮುಂದಾಗಿರುವ ವಿಬಿಜಿ ಗ್ರಾಮ್ ಜಿ ಯೋಜನೆಗೆ ಸಮರ್ಪಕ ಅನುದಾನ ನೀಡದೆ ಗ್ರಾಮೀಣ ಬಡವರ ಹಕ್ಕುಗಳನ್ನು ದುರ್ಬಲಗೊಳಿಸಲಾಗುತ್ತಿದೆ’
-ಸುರೇಶ್ ಕಲ್ಲಾಗರ್, ಕಾರ್ಯದರ್ಶಿ, ಸಿಐಟಿಯು ಕರ್ನಾಟಕ