ಮಹಿಳೆಯರು ಕೌಶಲ್ಯ ತರಬೇತಿ ಪಡೆದರೆ ಉದ್ಯಮದಲ್ಲಿ ಪ್ರಗತಿ ಸಾಧ್ಯ: ಸಿಇಒ ಪ್ರತೀಕ್ ಬಾಯಲ್
ಬ್ರಹ್ಮಾವರ, ಆ.10: ವಿಕಸಿತ ಭಾರತದ ಸಂಕಲ್ಪ ಯಶಸ್ವಿಗೊಳ್ಳಬೇಕಾದರೆ, ಮಹಿಳೆಯರು ಕೌಶಲ್ಯಾಧಾರಿತ ತರಬೇತಿಗಳನ್ನು ಪಡೆಯಬೇಕು. ಅದರಿಂದ ಅವರು ಉದ್ಯಮದಲ್ಲಿ ಪ್ರಗತಿ ಸಾಧಿಸಿ ಸ್ವಾವಲಂಬಿಗಳಾಗಿ ಉದ್ಯಮ ಗಳನ್ನು ಅಭಿವೃದ್ಧಿ ಪಡಿಸಿ ಕುಟುಂಬ ಹಾಗೂ ಸಮಾಜದ ಆರ್ಥಿಕ ಪ್ರಗತಿಗೆ ಕೊಡುಗೆ ನೀಡಲು ಸಾಧ್ಯವಾಗುತ್ತದೆ ಎಂದು ಉಡುಪಿ ಜಿಲ್ಲಾ ಪಂಚಾಯತ್ನ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ ಹೇಳಿದ್ದಾರೆ.
ಬ್ರಹ್ಮಾವರದ ಹೇರೂರಿನಲ್ಲಿರುವ ಗ್ರಾಮಾಭಿವೃದ್ಧಿ ಮತ್ತು ಸ್ವ ಉದ್ಯೋಗ ತರಬೇತಿ (ರುಡ್ಸೆಟ್) ಸಂಸ್ಥೆ ವತಿಯಿಂದ ಆಯೋಜಿಸಲಾಗಿದ್ದ ಅಗರಬತ್ತಿ ತಯಾರಿಕೆ ತರಬೇತಿ ಶಿಬಿರದಲ್ಲಿ ಇಂದು ನಡೆದ ಸಮಾರೋಪ ಸಮಾರಂಭ ದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಶಿಬಿರಾರ್ಥಿಗಳಿಗೆ ಪ್ರಮಾಣಪತ್ರ ಗಳನ್ನು ವಿತರಿಸಿ ಅವರು ಮಾತನಾಡುತಿದ್ದರು.
ಕೇವಲ ತರಬೇತಿ ಪಡೆಯುವುದರಿಂದ ಮಾತ್ರ ಉದ್ದೇಶ ಈಡೇರುವುದಿಲ್ಲ. ತರಬೇತಿಯ ಮೂಲಕ ಪಡೆದ ಜ್ಞಾನ ಮತ್ತು ಕೌಶಲ್ಯವನ್ನು ಉದ್ಯಮದಲ್ಲಿ ಅಳವಡಿಸಿಕೊಂಡು, ಅದನ್ನು ನಿರಂತರವಾಗಿ ಅಭಿವೃದ್ಧಿಪಡಿಸುವುದು ಮುಖ್ಯ. ಆಗ ಮಾತ್ರ ಇಂತಹ ತರಬೇತಿಗಳು ಯಶಸ್ವಿಯಾಗುತ್ತವೆ ಎಂದು ಅವರು ತಿಳಿಸಿದರು.
ಒಬ್ಬ ಪುರುಷ ಶಿಕ್ಷಣ ಪಡೆದರೆ ಅದು ವೈಯಕ್ತಿಕ ಬೆಳವಣಿಗೆಗೆ ಸೀಮಿತ ವಾಗಬಹುದು. ಆದರೆ ಒಬ್ಬ ಮಹಿಳೆ ಶಿಕ್ಷಣ ಮತ್ತು ಕೌಶಲ್ಯವನ್ನು ಪಡೆದರೆ, ಇಡೀ ಕುಟುಂಬವೇ ಸಬಲಗೊಳ್ಳುತ್ತದೆ ಎಂದು ಅವರು ಅಭಿಪ್ರಾಯಪಟ್ಟರು.
ವಯಸ್ಸು ಹಾಗೂ ಆಸಕ್ತಿಯ ಆಧಾರದ ಮೇಲೆ ವಿವಿಧ ಗುಂಪುಗಳನ್ನು ರಚಿಸಿ, ಸಣ್ಣ ಪ್ರಮಾಣದ ಉದ್ಯಮಗಳನ್ನು ಪ್ರಾರಂಭಿಸಲು ಉತ್ತೇಜನ ನೀಡಲಾಗುತ್ತಿದೆ. ಇದಕ್ಕೆ ಪೂರಕವಾಗಿ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಮಿಷನ್ (ಎನ್ಆರ್ಎಲ್ಎಂ) ವತಿಯಿಂದ ವಿವಿಧ ರೀತಿಯ ಸಹಕಾರ ಮತ್ತು ನೆರವು ಒದಗಿಸಲಾಗುತ್ತಿದೆ. ಸರಕಾರದ ವಿವಿಧ ಸೌಲಭ್ಯಗಳನ್ನು ಸಮರ್ಪಕವಾಗಿ ಬಳಸಿಕೊಂಡು, ಆರ್ಥಿಕವಾಗಿ ಸಬಲರಾ ಗುವಂತೆ ಅವರು ಶಿಬಿರಾರ್ಥಿಗಳಿಗೆ ಕಿವಿಮಾತು ಹೇಳಿದರು.
ರುಡ್ಸೆಟ್ ಸಂಸ್ಥೆಯ ನಿರ್ದೇಶಕ ಡಾ. ಬೊಮ್ಮಯ್ಯ ಎಂ. ಅವರು ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ವಿ ಕೇರ್ ಸೊಸೈಟಿಯ ವ್ಯವಸ್ಥಾಪಕ ರಾಘವೇಂದ್ರ ಹಾಗೂ ಇತರರು ಉಪಸ್ಥಿತರಿದ್ದರು.
ಉಪನ್ಯಾಸಕಿ ಚೈತ್ರ ಕೆ. ಕಾರ್ಯಕ್ರಮ ನಿರೂಪಿಸಿದರೆ, ಶಾಂತಪ್ಪ ಸ್ವಾಗತಿಸಿದರು. ಹಿರಿಯ ಸಹಾಯಕ ರವಿ ವಂದಿಸಿದರು.
ಜಿಲ್ಲಾಧಿಕಾರಿ ಭೇಟಿ: ಇದಕ್ಕೆ ಮುನ್ನ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಅವರು ಒಟ್ಟು 12 ದಿನಗಳ ಕಾಲ ನಡೆದ ತರಬೇತಿ ಶಿಬಿರಕ್ಕೆ ಭೇಟಿ ನೀಡಿ ತರಬೇತಿಯ ಪ್ರಗತಿ ಪರಿಶೀಲಿಸಿದಲ್ಲದೇ ಶಿಬಿರಾರ್ಥಿಗಳೊಂದಿಗೆ ಸಂವಾದ ನಡೆಸಿ ಹಲವು ಸಲಹೆಗಳನ್ನು ನೀಡಿದರು.