ಮಹಿಳೆಯರ ಆತ್ಮವಿಶ್ವಾಸಕ್ಕೆ ಶಿಕ್ಷಣವೇ ಶಕ್ತಿ: ನಾಗವೇಣಿ ಮಂಚಿ

Update: 2026-08-22 18:33 IST

ಉಡುಪಿ, ಆ.22: ಮಹಿಳೆಯರು ಬೌದ್ಧಿಕ ಹಾಗೂ ಮಾನಸಿಕ ದಾಸ್ಯದಿಂದ ಹೊರಬರಬೇಕು. ಶಿಕ್ಷಣದಿಂದ ಆತ್ಮ ವಿಶ್ವಾಸ ಮತ್ತು ಆತ್ಮಬಲವನ್ನು ಗಳಿಸಿಕೊಳ್ಳಲು ಸಾಧ್ಯ ಎಂದು ಕನ್ನಡ ಲೇಖಕಿ ನಾಗವೇಣಿ ಮಂಚಿ ಹೇಳಿದ್ದಾರೆ.

ಅಜ್ಜರಕಾಡು ಡಾ.ಜಿ.ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರದ ಮಾನವಿಕ ಸಂಘದ ವತಿಯಿಂದ ಶನಿವಾರ ಆಯೋಜಿಸಲಾದ ಮಹಿಳೆ, ಶಿಕ್ಷಣ ಮತ್ತು ಸಬಲೀಕರಣ’ ವಿಷಯ ಕುರಿತ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡುತಿದ್ದರು.

ಶಿಕ್ಷಣವು ಅವಕಾಶಗಳ ಬಾಗಿಲುಗಳನ್ನು ತೆರೆಯುತ್ತದೆ. ಮಹಿಳೆ ತನ್ನ ಹಕ್ಕು ಮತ್ತು ಬಾಧ್ಯತೆಗಳನ್ನು ಅರಿತು ಕೊಳ್ಳಲು, ಜ್ಞಾನ, ಉದ್ಯೋಗ ಹಾಗೂ ಜಾಗೃತಿಯನ್ನು ಪಡೆಯಲು ಶಿಕ್ಷಣ ನೆರವಾಗುತ್ತದೆ. ಶಿಕ್ಷಣ ಎಂದರೆ ಕೇವಲ ಅಂಕ ಗಳಿಸುವುದಲ್ಲ; ಬದುಕನ್ನು ಕಟ್ಟಿಕೊಳ್ಳುವ ದೃಢತೆಯನ್ನು ನೀಡುವುದು ಶಿಕ್ಷಣದ ಉದ್ದೇಶ ಎಂದರು.

ಜೀವನದಲ್ಲಿ ಎದುರಾಗುವ ಸಮಸ್ಯೆಗಳನ್ನು ಸಕಾರಾತ್ಮಕವಾಗಿ ಸ್ವೀಕರಿಸಿ, ಅವುಗಳನ್ನು ಅನುಭವಗಳಾಗಿ ಪರಿವರ್ತಿಸಿಕೊಳ್ಳಬೇಕು. ಸ್ವಯಂ ನಿಯಂತ್ರಣ ವನ್ನು ಬೆಳೆಸಿಕೊಳ್ಳುವುದೂ ಸಹ ಮಹಿಳೆಯರ ಸ್ವಾವಲಂಬನೆಗೆ ಅಗತ್ಯ ಕೌಟುಂಬಿಕ ಬದುಕಿನ ಬಗ್ಗೆ ಹಿಂಜರಿಕೆ ಬೇಡ ಎಂದು ಅವರು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲೆ ಪ್ರೊ.ನಿಕೇತನಾ ಮಾತನಾಡಿ, ಮಹಿಳಾ ಸಬಲೀಕರಣವು ಸಾಮೂಹಿಕ ಪ್ರಯತ್ನದಿಂದ ಮಾತ್ರ ಸಾಧ್ಯ. ಈ ನಿಟ್ಟಿನಲ್ಲಿ ಸಮಾಜದ ಎಲ್ಲ ವರ್ಗದ ಜನರು ಒಗ್ಗಟ್ಟಿನಿಂದ ಕೈಜೋಡಿಸಬೇಕು ಎಂದರು.

ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥೆ ವಿದ್ಯಾ ಡಿ. ಪ್ರಾಸ್ತಾವಿಕವಾಗಿ ಮಾತ ನಾಡಿದರು. ವಿದ್ಯಾರ್ಥಿ ಕ್ಷೇಮಪಾಲನಾಧಿ ಕಾರಿ ಡಾ.ರಾಜೇಂದ್ರ ಕೆ., ಮನಃಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕಿ ರಮ್ಯಾ ಹಾಗೂ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥೆ ಡಾ.ಸಫಿಯಾ ಉಪಸ್ಥಿತರಿದ್ದರು.

ಇತಿಹಾಸ ವಿಭಾಗದ ಮುಖ್ಯಸ್ಥ ಡಾ.ನವೀನ್ ಕೊಣಾಜೆ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ರಾಜ್ಯಶಾಸ್ತ್ರ ವಿಭಾಗದ ಆಶಾ ಅತಿಥಿಗಳನ್ನು ಪರಿಚಯಿಸಿದರು. ಸಹ ಪ್ರಾಧ್ಯಾಪಕ ಮಂಜುನಾಥ ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News