ಉಡುಪಿಯಲ್ಲಿ ಸಂಭ್ರಮದ ಶ್ರೀಕೃಷ್ಣ ಜನ್ಮಾಷ್ಟಮಿ
ಉಡುಪಿ, ಸೆ.4: ಉಡುಪಿ ಶ್ರೀಕೃಷ್ಣ ಮಠದಲ್ಲಿ ಶುಕ್ರವಾರ ಶ್ರೀಕೃಷ್ಣ ಜನ್ಮಾಷ್ಟಮಿಯನ್ನು ಸಂಭ್ರಮದಿಂದ ಆಚರಿಸಲಾಯಿತು.
ಪರ್ಯಾಯ ಶೀರೂರು ಮಠದ ಶ್ರೀವೇದವರ್ಧನ ತೀರ್ಥ ಸ್ವಾಮೀಜಿ ಕೃಷ್ಣದೇವರಿಗೆ ಯಶೋಧೆಕೃಷ್ಣನ ವಿಶೇಷ ಅಲಂಕಾರ ಮಾಡಿ ಮಹಾಪೂಜೆ ನೆರವೇರಿಸಿದರು. ಮಧ್ಯಾರಾತ್ರಿ ಸ್ವಾಮೀಜಿ ಕೃಷ್ಣಾರ್ಘ್ಯ ಪ್ರದಾನ ಮಾಡಿದರು. ಬಳಿಕ ಭಕ್ತರು ಅರ್ಘ್ಯ ಪ್ರದಾನ ಮಾಡಿದರು.
ಬೆಳಗ್ಗೆಯಿಂದಲೇ ರಾಜ್ಯ, ಹೊರರಾಜ್ಯಗಳಿಂದ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಉಡುಪಿ ಕೃಷ್ಣ ಮಠಕ್ಕೆ ಆಗಮಿಸಿ, ದೇವರ ದರ್ಶನ ಪಡೆದರು. ಮಠದ ರಥಬೀದಿ, ರಾಜಾಂಗಣ ಪಾರ್ಕಿಂಗ್ ಪ್ರದೇಶ ಸೇರಿದಂತೆ ಮಠದ ಇಡೀ ಪರಿಸರದಲ್ಲಿ ವೇಷಧಾರಿಗಳು, ಜನಜಾತ್ರೆಯಿಂದ ಸಂಭ್ರಮದ ವಾತಾ ವರಣ ಕಂಡುಬಂತು.
ಅಷ್ಟಮಿಯ ಹಿನ್ನೆಲೆಯಲ್ಲಿ ಶ್ರೀಕೃಷ್ಣ ಮಠದ ಗರ್ಭಗುಡಿ, ಮಠದ ಸುತ್ತುಪೌಳಿ, ಚಂದ್ರಶಾಲೆ, ತೀರ್ಥ ಮಂಟಪ, ಮಧ್ವಮಂಟಪ, ಸುಬ್ರಹ್ಮಣ್ಯ ಗುಡಿ, ನವಗ್ರಹ ಗುಡಿ ಸಹಿತ ಇಡೀ ಕೃಷ್ಣ ಮಠಕ್ಕೆ ಹೂವಿನ ಅಲಂಕಾರ ಮಾಡಲಾ ಗಿತ್ತು. ಪರ್ಯಾಯ ಶಿರೂರು ಸ್ವಾಮೀಜಿ ಭೋಜನ ಶಾಲೆಯಲ್ಲಿ ಕೃಷ್ಣನಿಗೆ ಸಮರ್ಪಿಸುವ ಲಡ್ಡಿಗೆ ಮತ್ತು ಚಕ್ಕುಲಿ ತಯಾರಿಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಠದ ದಿವಾನ ಉದಯ ಕುಮಾರ್ ಸರಳತ್ತಾಯ ಉಪಸ್ಥಿತರಿದ್ದರು.
ಮುದ್ದುಕೃಷ್ಣರ ಕಲರವ: ಶ್ರೀಕೃಷ್ಣಮಠದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ವಿಶೇಷ ಕೃಷ್ಣವೇಷ ಸ್ಪರ್ಧೆಗಳು ನಡೆದವು. ಬೆಳಗ್ಗೆಯಿಂದ ಮಠದ ಪರಿಸರದಲ್ಲಿ ಕೃಷ್ಣ ವೇಷಧಾರಿ ಪುಟಾಣಿಗಳ ಕಲರವ ಮನಸೂರೆಗೊಳ್ಳುತ್ತಿತ್ತು.
ಮಧ್ವಮಂಟಪದಲ್ಲಿ 1 ವರ್ಷದೊಳಗಿನ ಮಕ್ಕಳಿಗೆ ಬೆಣ್ಣೆಕೃಷ್ಣ ಸ್ಪರ್ಧೆ, ರಾಜಾಂಗಣದಲ್ಲಿ 1 ರಿಂದ 3 ವರ್ಷ ಮಕ್ಕಳಿಗೆ ಮುದ್ದುಕೃಷ್ಣ ಸ್ಪರ್ಧೆ, 3 ರಿಂದ 5 ವರ್ಷ ಮಕ್ಕಳಿಗೆ ಅನ್ನಬ್ರಹ್ಮದಲ್ಲಿ ಬಾಲಕೃಷ್ಣ ಸ್ಪರ್ಧೆ, 5 ರಿಂದ 8 ವರ್ಷ ಮಕ್ಕಳಿಗೆ ಅನ್ನಧರ್ಮದಲ್ಲಿ ಕಿಶೋರಕೃಷ್ಣ ಸ್ಪರ್ಧೆ ಆಯೋಜಿಸಲಾಗಿತ್ತು. ಸ್ಪರ್ಧೆಯಲ್ಲಿ ಭಾಗವಹಿಸಿದ ಮಕ್ಕಳಿಗೆ ಪ್ರಮಾಣ ಪತ್ರ ಹಾಗೂ ಕೃಷ್ಣ ಪ್ರಸಾದ ವಿತರಿಸಲಾಯಿತು.
ವೇಷಗಳ ಮೆರುಗು: ಶ್ರೀಕೃಷ್ಣಮಠ ರಥಬೀದಿ ಸೇರಿದಂತೆ ನಗರದಲ್ಲೆಡೆ ಹುಲಿವೇಷ, ಬಾಲಕೃಷ್ಣ, ರಕ್ಕಸ ಸೇರಿದಂತೆ ನಾನಾಬಗೆಯ ವೇಷಧಾರಿಗಳು ಗಮನ ಸೆಳೆದರು.
ನಗರದ ಬೀದಿಗಳಲ್ಲಿ ಪ್ರಮುಖ ಹುಲಿವೇಷ ತಂಡಗಳು, ಯಕ್ಷಗಾನದ ವಿವಿಧ ವೇಷಗಳು, ರಕ್ಕಸ ವೇಷಗಳು, ಟ್ಯಾಬ್ಲೋ ತಂಡಗಳ ಅಬ್ಬರ ಜೋರಾಗಿದ್ದವು. ಅಂಗಡಿ, ಮುಂಗಟ್ಟು, ಹೊಟೆಲ್ಗಳಲ್ಲಿ ಹುಲಿ ಕುಣಿತ ಪ್ರದರ್ಶನ ನೀಡುತ್ತಿದ್ದಾರೆ. ಯುವಕ-ಯುವತಿಯರು ತಾಸೆ ಸದ್ದಿಗೆ ಕುಣಿದು ಸಂಭ್ರಮಿಸಿದರು.
ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಉಡುಪಿಯ ರಥಬೀದಿ, ಕೃಷ್ಣ ಮಠ ಪರಿಸರ ಮತ್ತು ನಗರದಲ್ಲಿ ಹೆಚ್ಚುವರಿ ಪೊಲೀಸ್ ಭದ್ರತೆಯನ್ನು ಒದಗಿಸಲಾಗಿದೆ. ಹೊರಠಾಣೆಯಲ್ಲಿ ಸಹಾಯವಾಣಿಯನ್ನು ತೆರೆಯಲಾಗಿದ್ದು, ಸಿಸಿಟಿವಿ ಕಣ್ಗಾವಲಿರಿಸಲಾಗಿದೆ. ರಥಬೀದಿಯನ್ನು ಸಂಪರ್ಕಿಸುವ 8 ಗೇಟುಗಳಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ.