ಕುಂದಾಪುರ, ಸೆ.4: ಕೋಡಿ ಬ್ಯಾರೀಸ್ ಪ್ರಥಮ ದರ್ಜೆ ಕಾಲೇಜು ಹಾಗೂ ಬ್ಯಾರೀಸ್ ಶಿಕ್ಷಣ ಮಹಾವಿದ್ಯಾಲಯವು ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಕುಂದಾಪುರದ ಸಹಯೋಗದಲ್ಲಿ ಯುವ ರೆಡ್‌ಕ್ರಾಸ್ ಘಟಕಗಳ ವತಿಯಿಂದ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ ಹಾಗೂ ರಕ್ತದಾನ ಶಿಬಿರ ಗುರುವಾರ ಬಿಹೈವ್ ಕನ್ವೆನ್ಷನ್ ಹಾಲ್‌ನಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಉದ್ಘಾಟಿಸಿದ ಇಂಡಿಯನ್ ರೆಡ್ಕ್ರಾಸ್ ಸೊಸೈಟಿಯ ಕುಂದಾಪುರದ ಅಧ್ಯಕ್ಷ ಜಯಕರ್ ಶೆಟ್ಟಿ ಮಾತನಾಡಿ, ರಕ್ತದಾನವು ಕೇವಲ ಸಾಮಾಜಿಕ ಸೇವೆಯಲ್ಲ. ಜೀವವೊಂದನ್ನು ಉಳಿಸುವ ಮಹತ್ವದ ಮಾನವೀಯ ಕಾರ್ಯವಾಗಿದೆ. ಯುವಜನರು ಸಮಾಜಮುಖಿ ಸೇವಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು. ವಿದ್ಯಾರ್ಥಿಗಳಲ್ಲಿ ಸೇವಾ ಮನೋಭಾವ, ಸಾಮಾಜಿಕ ಜವಾಬ್ದಾರಿ ಹಾಗೂ ಮಾನವೀಯ ಮೌಲ್ಯಗಳನ್ನು ಬೆಳೆಸುವಲ್ಲಿ ಯುವ ರೆಡ್‌ಕ್ರಾಸ್ ಘಟಕದ ಪಾತ್ರ ಮಹತ್ವದ್ದಾಗಿದೆ ಎಂದರು.

ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳ ವಿಶ್ವಸ್ಥ ಮಂಡಳಿಯ ಸದಸ್ಯ ಆಸೀಫ್ ಬ್ಯಾರಿ ಪ್ರಾಸ್ತಾವಿಕವಾಗಿ ಮಾತನಾಡಿ, ಪ್ರತಿಯೊಬ್ಬರೂ ತಮ್ಮ ಬಗ್ಗೆ ಮಾತ್ರ ಯೋಚಿಸದೆ ಸಮಾಜಕ್ಕೆ ಏನಾದರೂ ಕೊಡುಗೆ ನೀಡುವ ಮನೋಭಾವ ಬೆಳೆಸಿಕೊಳ್ಳಬೇಕು. ನಾವು ನೀಡುವ ರಕ್ತ ಯಾರಿಗೆ ತಲುಪುತ್ತದೆ ಎಂಬುದು ತಿಳಿಯದಿದ್ದರೂ, ಅದು ಅಗತ್ಯ ವಿರುವವರ ಜೀವವನ್ನು ಉಳಿಸ ಬಹುದು. ರಕ್ತದಾನವು ದೇವರ ಕೆಲಸಕ್ಕೆ ಸಮಾನವಾದ ಅತ್ಯುತ್ತಮ ಕಾಯಕ ವಾಗಿದ್ದು, ಇಂತಹ ಸೇವಾ ಮನೋಭಾವ ಕ್ಯಾಂಪಸ್ನಲ್ಲಿ ಇನ್ನಷ್ಟು ಬೆಳೆಯಲಿ ಎಂದು ಹಾರೈಸಿದರು.

ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಕೆ.ಎಂ.ಅಬ್ದುಲ್ ರೆಹಮಾನ್ ಬ್ಯಾರಿ ಮಾತನಾಡಿ, ರಕ್ತದಾನ ಮಾಡುವುದು ಎಂದರೆ ಜೀವ ಉಳಿಸುವುದು. ದೇಶ ಸೇವೆಯಲ್ಲಿ ಇದು ಅತ್ಯಂತ ಪ್ರಮುಖವಾದ ಮೊದಲ ಹೆಜ್ಜೆಯಾಗಿದೆ ಎಂದರು.

ಈ ಸಂದರ್ಭದಲ್ಲಿ ಕುಂದಾಪುರದ ಯುವ ರೆಡ್‌ಕ್ರಾಸ್ ಸಂಯೋಜಕ ಸತ್ಯನಾರಾಯಣ ಪುರಾಣಿಕ್ ವಿದ್ಯಾರ್ಥಿಗಳ ಸಮ್ಮುಖದಲ್ಲಿ ಪ್ರಮಾಣವಚನ ಬೋಧಿಸಿದರು. ಕಾರ್ಯಕ್ರಮದ ಅಂಗವಾಗಿ ನಡೆದ ರಕ್ತದಾನ ಶಿಬಿರದಲ್ಲಿ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಉತ್ಸಾಹದಿಂದ ಪಾಲ್ಗೊಂಡು ರಕ್ತದಾನ ಮಾಡಿದರು.

ಕಾರ್ಯಕ್ರಮದಲ್ಲಿ ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳ ನಿರ್ದೇಶಕಿ ಅಶ್ವಿನಿ ಶೆಟ್ಟಿ, ಬ್ಯಾರೀಸ್ ಶಿಕ್ಷಣ ಮಹಾ ವಿದ್ಯಾಲಯದ ಪ್ರಾಂಶುಪಾಲ ಡಾ. ಫಿರ್ದೋಸ್, ಬ್ಯಾರೀಸ್ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಶಬೀನಾ ಹಂಝಾ, ಉಪ ಪ್ರಾಂಶುಪಾಲರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ, ಯುವ ರೆಡ್ಕ್ರಾಸ್ ಘಟಕದ ವಿದ್ಯಾರ್ಥಿ ಸಂಯೋಜಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಯುವ ರೆಡ್‌ಕ್ರಾಸ್ ಘಟಕದ ಸಿಬ್ಬಂದಿ ಸಂಯೋಜಕ ಅಹಮದ್ ಖಲೀಲ್ ಹಾಗೂ ವಿದ್ಯಾರ್ಥಿ ಸಂಯೋಜಕರಾದ ವಹಾಬ್ ಮತ್ತು ಹಮ್ದಾನ್ ಕಾರ್ಯಕ್ರಮ ಸಂಯೋಜಿಸಿದರು. ಗಣಕ ವಿಭಾಗದ ಉಪನ್ಯಾಸಕಿ ಸಹರಾ ನಿರೂಪಿಸಿ, ವಾಣಿಜ್ಯ ವಿಭಾಗದ ಉಪನ್ಯಾಸಕಿ ಆಶಿದಾ ಭಾನು ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor