ಶಾಲಾ- ಕಾಲೇಜು ವಿದ್ಯಾರ್ಥಿಗಳಿಗೆ ಯುವ ಸಂಸತ್ತು ಸಭೆ:ಸ್ವರೂಪ ಟಿ.ಕೆ
ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ
ಉಡುಪಿ, ಸೆ.11: ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ಶಾಲಾ-ಕಾಲೇಜು ವಿದ್ಯಾರ್ಥಿಗಳ ತಾಲೂಕು ಮಟ್ಟದ ಯುವ ಸಂಸತ್ತು ಸಭೆಗೆ ಸೆಪ್ಟಂಬರ್ 15ರಂದು ಚಾಲನೆ ನೀಡಲಾಗುವುದು ಎಂದು ಡಿಸಿ ಸ್ವರೂಪ ಟಿ. ಕೆ ಹೇಳಿದ್ದಾರೆ.
ಮಣಿಪಾಲ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಯುವ ಸಂಸತ್ತು ಸಭೆಯ ಕುರಿತ ಮಾಹಿತಿ ಗಳನ್ನು ನೀಡುತ್ತಾ ಅವರು ಈ ವಿಷಯ ತಿಳಿಸಿದರು.
ಪ್ರಜಾಪ್ರಭುತ್ವ ತತ್ವದ ಅನುಸರಣೆಯಲ್ಲಿ ರಾಜ್ಯವು ದೇಶಕ್ಕೆ ಮಾದರಿ ಯಾಗಿದೆ. ಐತಿಹಾಸಿಕ ಪ್ರಜಾಪ್ರಭುತ್ವ ಚಲನಶೀಲತೆಯನ್ನು ಮತ್ತಷ್ಟು ವಿಸ್ತರಿಸುವ ಹಾಗೂ ಯುವ ಸಮುದಾಯಕ್ಕೆ ದೇಶದ ಸಂಸದೀಯ ವ್ಯವಸ್ಥೆಯನ್ನು ಪರಿಚಯಿಸುವ ಉದ್ದೇಶದಿಂದ ಜಿಲ್ಲೆಯ ಶಾಲಾ ಹಾಗೂ ಕಾಲೇಜು ಮಕ್ಕಳಿಗೆ ಯುವ ಸಂಸತ್ತು ಸಭೆಯನ್ನು ತಾಲೂಕು ಹಾಗೂ ಜಿಲ್ಲಾ ಮಟ್ಟದಲ್ಲಿ ಆಯೋಜಿಸಲಾಗುತ್ತಿದೆ ಎಂದರು.
ಸೆಪ್ಟಂಬರ್ 15ರಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಯನ್ನು ಆಯೋಜಿಸಬೇಕು. ಶಿಷ್ಟಾಚಾರ ದಂತೆ ಜನಪ್ರತಿನಿಧಿಗಳನ್ನು ಆಹ್ವಾನಿಸ ಬೇಕು. ಸೆ.16ರಿಂದ ತಾಲೂಕು ಮಟ್ಟದ ಯುವ ಸಂಸತ್ತು ಸಭೆಗಳ ಸ್ಫರ್ಧೆಗಳು ಆರಂಭವಾಗಲಿದ್ದು, ಅಕ್ಟೋಬರ್ 10ರ ಒಳಗೆ ತಾಲೂಕು ಮಟ್ಟದ ಸ್ಪರ್ಧೆ ಗಳನ್ನು ಪೂರ್ಣಗೊಳಿಸ ಬೇಕು. ಉತ್ತಮ ವಾಕ್ ಚಾತುರ್ಯ ಇರುವ ಮಕ್ಕಳನ್ನು ಪ್ರೇರೇಪಿಸಿ, ಸ್ಪರ್ಧೆಯಲ್ಲಿ ಭಾಗವಹಿಸುವಂತೆ ಮಾಡಬೇಕು ಎಂದ ಜಿಲ್ಲಾಧಿಕಾರಿಗಳು, ಸಂಸತ್ತು/ ವಿಧಾನಸಭೆ ಮಾದರಿಯಲ್ಲಿ ಸಭಾಂಗಣವನ್ನು ಸಿದ್ಧಪಡಿಸಿ ಯುವ ಸಂಸತ್ತು ಸಭೆಗಳನ್ನು ಆಯೋಜಿಸಬೇಕು ಎಂದರು.
ಜಿಲ್ಲಾ ಮಟ್ಟದಲ್ಲಿ ನಡೆಯುವ ಯುವ ಸಂಸತ್ತು ಸಭೆಗೆ ಪ್ರತಿ ತಾಲೂಕಿನಿಂದ ಆಯ್ದ ವಿದ್ಯಾರ್ಥಿಗಳನ್ನು ಕಳುಹಿಸಿಕೊಡ ಬೇಕು. ಅ.11ರಿಂದ 30ರ ಒಳಗೆ ಜಿಲ್ಲಾ ಯುವ ಸಂಸತ್ತು ಸಭೆಗಳನ್ನು ಆಯೋಜಿಸಬೇಕು. ಅತ್ಯುತ್ತಮವಾಗಿ ಚರ್ಚೆ ಯಲ್ಲಿ ಪಾಲ್ಗೊಂಡ ಪ್ರತಿ ವಿಧಾನಸಭಾ ಕ್ಷೇತ್ರದಿಂದ ಒಬ್ಬ ವಿದ್ಯಾರ್ಥಿ ಯನ್ನು ಆಯ್ಕೆ ಮಾಡಿ, ರಾಜ್ಯ ಮಟ್ಟದ ಯುವ ಸಂಸತ್ತು ಸಭೆಗೆ ಕಳುಹಿಸಿ ಕೊಡಲಾಗುವುದು ಎಂದರು.
ಸಂವಿಧಾನ ದಿನಾಚರಣೆ ದಿನವಾದ ನವೆಂಬರ್ 26ರಂದು ಎಲ್ಲಾ 224 ವಿಧಾನಸಭಾ ಕ್ಷೇತ್ರದಿಂದ ಆಯ್ಕೆಯಾಗಿ ಬಂದ ವಿದ್ಯಾರ್ಥಿಗಳನ್ನು ಒಳಗೊಂಡ ರಾಜ್ಯ ಮಟ್ಟದ ಯುವ ಸಂಸತ್ ಸಭೆಯು ಬೆಂಗಳೂರಿನಲ್ಲಿ ನಡೆಯಲಿದೆ ಎಂದ ಹೇಳಿದ ಅವರು, ಸರಕಾರದ ನಿರ್ದೇಶನದಂತೆ ತಾಲೂಕು ಹಾಗೂ ಜಿಲ್ಲಾ ಮಟ್ಟದ ಯುವ ಸಂಸತ್ತು ಸಭೆಯನ್ನು ಜಿಲ್ಲಾ ವಕೀಲರ ಸಂಘದ ಸಮನ್ವಯದೊಂದಿಗೆ ಅಚ್ಚುಕಟ್ಟಾಗಿ ನಡೆಸಬೇಕು ಎಂದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ್, ಎಎಸ್ಪಿ ಸುಧಾಕರ್ ನಾಯಕ್, ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಡಾ. ಉದಯ್ ಶೆಟ್ಟಿ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಅನಿತಾ ಮಡ್ಲೂರು, ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು, ತಾಲೂಕು ತಹಶೀಲ್ದಾರ್, ಇಓಗಳು ಉಪಸ್ಥಿತರಿದ್ದರು.