ಕುಂದಾಪುರ, ಸೆ.19: ಶಾಲಾ ಶಿಕ್ಷಣ ಇಲಾಖೆ ಹಾಗೂ ಬ್ಯಾರೀಸ್ ಪದವಿ ಪೂರ್ವ ಕಾಲೇಜು ಇವರ ಸಹಯೋಗದಲ್ಲಿ ತಾಲೂಕು ಮಟ್ಟದ ಬಾಲಕ- ಬಾಲಕಿಯರ ಫುಟ್ಬಾಲ್ ಪಂದ್ಯಾವಳಿ ಶುಕ್ರವಾರ ಕೋಡಿಯ ಬ್ಯಾರೀಸ್ ನಾಲೆಡ್ಜ್ ಕ್ಯಾಂಪಸ್‌ನಲ್ಲಿ ಜರುಗಿತು.

ಕುಂದಾಪುರ ತಾಲೂಕಿನ ಒಟ್ಟು 14 ಪದವಿ ಪೂರ್ವ ಕಾಲೇಜುಗಳು ಈ ಪಂದ್ಯಾವಳಿಯಲ್ಲಿ ಭಾಗವಹಿಸಿದ್ದವು. ಬಾಲಕ ಹಾಗೂ ಬಾಲಕಿಯರ ವಿಭಾಗದಲ್ಲಿ ವಿದ್ಯಾರ್ಥಿಗಳು ಉತ್ಸಾಹದಿಂದ ಪಾಲ್ಗೊಂಡು ತಮ್ಮ ಕ್ರೀಡಾ ಪ್ರತಿಭೆಯನ್ನು ಪ್ರದರ್ಶಿಸಿದರು.

ಮಂಗಳೂರು ವಿಶ್ವವಿದ್ಯಾನಿಲಯದ ಅಥ್ಲೆಟಿಕ್ಸ್‌ನಲ್ಲಿ ಚಿನ್ನದ ಪದಕ ವಿಜೇತ, ಪ್ರಸ್ತುತ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ದೈಹಿಕ ಶಿಕ್ಷಣ ನಿರ್ದೇಶಕ ರಾಗಿರುವ ಡಾ.ರಾಮಚಂದ್ರ ಪಾಟ್ಕರ್ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ, ಕ್ರೀಡೆಯು ವಿದ್ಯಾರ್ಥಿಗಳ ದೈಹಿಕ ಹಾಗೂ ಮಾನಸಿಕ ಬೆಳವಣಿಗೆಗೆ ಅತ್ಯಂತ ಮುಖ್ಯವಾಗಿದೆ. ಕ್ರೀಡೆಯಲ್ಲಿ ಭಾಗವಹಿಸುವುದರಿಂದ ಶಿಸ್ತು, ಸಮಯಪಾಲನೆ, ತಂಡದ ಮನೋಭಾವ ಹಾಗೂ ನಾಯಕತ್ವದ ಗುಣಗಳನ್ನು ಬೆಳೆಸಿಕೊಳ್ಳಬಹುದು ಎಂದರು.

ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಯ ಟ್ರಸ್ಟಿ ಡಾ. ಆಸಿಫ್ ಬ್ಯಾರಿ ಅವರು ಮಾತನಾಡಿ, ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಆಸಕ್ತಿ ವಹಿಸುವುದರ ಜೊತೆಗೆ ವಿದ್ಯಾಭ್ಯಾಸದ ಕಡೆಗೂ ಹೆಚ್ಚಿನ ಗಮನ ಹರಿಸಬೇಕು. ಕ್ರೀಡೆಯು ದೈಹಿಕ ಆರೋಗ್ಯ ಮತ್ತು ಆತ್ಮವಿಶ್ವಾಸವನ್ನು ಬೆಳೆಸಿದರೆ, ವಿದ್ಯಾಭ್ಯಾಸವು ಜ್ಞಾನ, ವಿವೇಚನಾ ಶಕ್ತಿ ಹಾಗೂ ಉತ್ತಮ ಭವಿಷ್ಯವನ್ನು ರೂಪಿಸುತ್ತದೆ. ಆದ್ದರಿಂದ ಕ್ರೀಡೆ ಮತ್ತು ವಿದ್ಯಾಭ್ಯಾಸ ಎರಡಕ್ಕೂ ಸಮಾನ ಪ್ರಾಮುಖ್ಯತೆ ನೀಡಿ, ಸಮಯವನ್ನು ಸಮರ್ಪಕವಾಗಿ ನಿರ್ವಹಿಸಿಕೊಂಡು ಮುನ್ನಡೆಯಬೇಕು ಎಂದರು.

ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಅಬ್ದುಲ್ ರೆಹಮಾನ್ ಬ್ಯಾರಿ ಅವರು ಮಾತನಾಡಿ, ಪ್ರತಿಯೊಂದು ಸ್ಪರ್ಧೆಯಲ್ಲಿಯೂ ಎಲ್ಲರೂ ಗೆಲ್ಲಲು ಸಾಧ್ಯವಿಲ್ಲ. ಆದ್ದರಿಂದ ಗೆಲುವಿನ ಸಂದರ್ಭದಲ್ಲಿ ವಿನಯವನ್ನು ಹಾಗೂ ಸೋಲಿನ ಸಂದರ್ಭದಲ್ಲಿ ಧೈರ್ಯವನ್ನು ಹೊಂದುವುದು ಮುಖ್ಯ. ಕ್ರೀಡಾ ಮನೋಭಾವದಿಂದ ಸ್ಪರ್ಧಿಸಿ, ತಮ್ಮ ಪ್ರತಿಭೆಯನ್ನು ಬೆಳೆಸಿಕೊಳ್ಳಬೇಕು ಎಂದರು.

ಕುಂದಾಪುರ ತಾಲೂಕಿನ ಕ್ರೀಡಾ ಸಂಯೋಜಕ ರಾಮ ಶೆಟ್ಟಿ, ಎಸ್.ವಿ ಕಾಲೇಜ್ ಗಂಗೊಳ್ಳಿ ಇಲ್ಲಿಯ ದೈಹಿಕ ನಿರ್ದೇಶಕ ಉಮೇಶ್ ಶೆಟ್ಟಿ, ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಯ ನಿರ್ದೇಶಕಿ ಅಶ್ವಿನಿ ಶೆಟ್ಟಿ, ಬಿ.ಎಡ್ ಹಾಗೂ ಡಿ.ಎಡ್ ಪ್ರಾಂಶುಪಾಲರಾದ ಫಿರ್ದೋಸ್, ಪದವಿ ಕಾಲೇಜಿನ ಪ್ರಾಂಶುಪಾಲರಾದ ಶಬೀನಾ, ಪದವಿ ಪೂರ್ವ ಕಾಲೇಜಿನ ಅಕಾಡೆಮಿಕ್ ಡೀನ್ ಪೂರ್ಣಿಮಾ ಶೆಟ್ಟಿ ಉಪಸ್ಥಿತರಿದ್ದರು.

ಬ್ಯಾರೀಸ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಝಿಯಾನ ಸ್ವಾಗತಿಸಿದರು. ಉಪನ್ಯಾಸಕಿ ಲಮೀಝ್ ಕಾರ್ಯಕ್ರಮ ನಿರೂಪಿಸಿ, ದೈಹಿಕ ಶಿಕ್ಷಣ ನಿರ್ದೇಶಕ ಸೌರಭ್ ವಂದಿಸಿದರು.

ಸಮಾರೋಪ: ತಾಲೂಕು ಮಟ್ಟದ ಬಾಲಕ-ಬಾಲಕಿಯರ ಫುಟ್ಬಾಲ್ ಪಂದ್ಯಾವಳಿಯ ಬಾಲಕರ ವಿಭಾಗದಲ್ಲಿ ಕುಂದಾಪುರ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಪ್ರಥಮ ಸ್ಥಾನ, ಕೋಡಿ ಬ್ಯಾರೀಸ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ದ್ವಿತೀಯ ಸ್ಥಾನವನ್ನು ಪಡೆದುಕೊಂಡರು.

ಬಾಲಕಿಯರ ವಿಭಾಗದಲ್ಲಿ ಕುಂದಾಪುರ ವೆಂಕಟರಮಣ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿನಿಯರು ಪ್ರಥಮ ಸ್ಥಾನ ಹಾಗೂ ಕುಂದಾಪುರ ಆರ್.ಎನ್. ಶೆಟ್ಟಿ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿನಿಯರು ದ್ವಿತೀಯ ಸ್ಥಾನ ಪಡೆದುಕೊಂಡರು.

ಕ್ರೀಡಾಕೂಟದ ಸಮಾರೋಪ ಸಮಾರಂಭದ ಕಾರ್ಯಕ್ರಮವನ್ನು ಮನಃಶಾಸ್ತ್ರ ಉಪನ್ಯಾಸಕ ಸಚಿತ್ ಶೆಟ್ಟಿ ನಿರೂಪಿಸಿದರು. ಅಕಾಡೆಮಿಕ್ ಡೀನ್ ಪೂರ್ಣಿಮಾ ಶೆಟ್ಟಿ ಸ್ವಾಗತಿಸಿದರು. ದೈಹಿಕ ಶಿಕ್ಷಣ ಶಿಕ್ಷಕ ಇಲಿಯಾಸ್ ವಂದಿಸಿದರು.



 


Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor