×
Ad

ಬಡಗುಬೆಟ್ಟು ಸೊಸೈಟಿಯಿಂದ ಕನ್ನಡ ಮಾಧ್ಯಮ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, 15 ಲಕ್ಷ ಮೌಲ್ಯದ ಪರಿಕರ ವಿತರಣೆ

Update: 2026-06-24 22:14 IST

ಉಡುಪಿ: ಸಹಕಾರ ಕ್ಷೇತ್ರದಲ್ಲಿ ಸತತ ಸಾಧನೆಯ ಮೂಲಕ ರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡಿರುವ ಉಡುಪಿಯ ಪ್ರತಿಷ್ಠಿತ ಬಡಗುಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಲಿ. ತನ್ನ ಸಾಮಾಜಿಕ ಕಳಕಳಿಯ ಧ್ಯೇಯದಡಿ ಜಿಲ್ಲೆಯ ಸುಮಾರು 50 ಕನ್ನಡ ಮಾಧ್ಯಮ ಶಾಲಾ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ವಿವಿಧ ಸೌಲಭ್ಯಗಳ ವಿತರಣಾ ಕಾರ್ಯಕ್ರಮ ಜೂನ್ 27ರಂದು ಶನಿವಾರ ಬೆಳಗ್ಗೆ 10:30ಕ್ಕೆ ಉಡುಪಿ ಪುರಭವನದಲ್ಲಿ ನಡೆಯಲಿದೆ.

ಉಡುಪಿ ಪ್ರೆಸ್ ಕ್ಲಬ್‌ನಲ್ಲಿ ಇಂದು ಕರೆದ ಸುದ್ದಿಗೋಷ್ಠಿಯಲ್ಲಿ ಬಡಗುಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ ಈ ವಿಷಯ ತಿಳಿಸಿದರು.

ಈ ಬಾರಿ ಎಸೆಸೆಲ್ಸಿ ಪರೀಕ್ಷೆಯಲ್ಲಿ ಕನ್ನಡ ಮಾಧ್ಯಮದಲ್ಲಿ ಓದಿ 600ಕ್ಕಿಂತ ಅಧಿಕ ಅಂಕಗಳನ್ನು ಗಳಿಸಿದ 29 ವಿದ್ಯಾರ್ಥಿಗಳಿಗೆ ತಲಾ 10,000ರೂ.ನಂತೆ ಪ್ರೋತ್ಸಾಹಧನವನ್ನು ವಿತರಿಸಲಾಗುವುದು. ಅಲ್ಲದೇ ಸುಮಾರು 50 ಕನ್ನಡ ಮಾಧ್ಯಮ ಶಾಲೆಗಳ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ, ಶೈಕ್ಷಣಿಕ ಪರಿಕರಗಳ ವಿತರಣೆಯೊಂದಿಗೆ ಪ್ರತಿಭಾ ಪುರಸ್ಕಾರವೂ ಇರುತ್ತದೆ ಎಂದರು.

ಕಾರ್ಯಕ್ರಮವನ್ನು ಬೆಳಗ್ಗೆ 10:30ಕ್ಕೆ ರಾಜ್ಯದ ಮಾಜಿ ಸಚಿವ ಹಾಗೂ ಭಾರತ್ ಸ್ಕೌಟ್ ಆ್ಯಂಡ್ ಗೈಡ್ಸ್‌ನ ಕರ್ನಾಟಕ ರಾಜ್ಯ ಮುಖ್ಯ ಆಯುಕ್ತ ಪಿ.ಜಿ.ಆರ್. ಸಿಂಧ್ಯಾ ಅವರು ಉದ್ಘಾಟಿಸಲಿದ್ದಾರೆ. ಜಯಕರ ಶೆಟ್ಟಿ ಇಂದ್ರಾಳಿ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಸಂಸದ ಕೋಟ ಶ್ರೀನಿವಾಸ ಪೂಜಾರಿ, ಶಾಸಕ ಯಶಪಾಲ್ ಸುವರ್ಣ, ಉಡುಪಿ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ (ಡಯಟ್)ನ ಪ್ರಾಂಶುಪಾಲರಾದ ಡಾ.ಅಶೋಕ ಕಾಮತ್, ಸಹಕಾರ ಸಂಘಗಳ ಸಹಾಯಕ ನಿಬಂಧಕ ಸುಧೀರ್ ಕುಮಾರ್ ಜೆ. ಉಪಸ್ಥಿತರಿರುವರು ಎಂದರು.

ಸಂಪನ್ಮೂಲ ವ್ಯಕ್ತಿಯಾಗಿರುವ ದಾಮೋದರ ಶರ್ಮ ಬಾರಕೂರು ಇವರಿಂದ ಬೆಳಗ್ಗೆ 9:30ರಿಂದ ಶಾಲಾ ವಿದ್ಯಾರ್ಥಿಗಳಿಗೆ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಜಿಲ್ಲೆಯ ಕನ್ನಡ ಮಾಧ್ಯಮ ಶಾಲೆಗಳ ಪ್ರತಿಭಾವಂತ ವಿದ್ಯಾರ್ಥಿಗಳನ್ನು , ಗ್ರಾಮೀಣ ಭಾಗದ ವಿದ್ಯಾರ್ಥಿಗಳನ್ನು ಗುರುತಿಸಿ, ಪ್ರೋತ್ಸಾಹಿಸುವ ನಿಟ್ಟಿನಲ್ಲಿ ನಡೆಯುವ ಸಮಾರಂಭದಲ್ಲಿ ಸುಮಾರು 15 ಲಕ್ಷ ರೂ.ಗಳಿಗೂ ಅಧಿಕ ಮೊತ್ತದ ಸ್ಕಾಲರ್‌ಶಿಪ್ ಹಾಗೂ ಇತರ ಪರಿಸರಗಳನ್ನು ನೀಡಲಾಗುತ್ತಿದೆ ಎಂದು ಜಯಕರ ಶೆಟ್ಟಿ ಇಂದ್ರಾಳಿ ತಿಳಿಸಿದರು.

ಪರಿಸರ ಸಂರಕ್ಷಣೆಯ ನಿಟ್ಟಿನಲ್ಲಿ ಗಿಡನೆಡುವ ಸಂಕಲ್ಪ, ಹಸಿರು ಪರಿಸರ ನಿರ್ಮಿಸುವ ಪರಿಕಲ್ಪನೆಯೊಂದಿಗೆ ಶಾಲಾ ವಿದ್ಯಾರ್ಥಿಗಳಿಗೆ ಸಸಿ ವಿತರಣೆ ಕಾರ್ಯಕ್ರಮವೂ ಇದರೊಂದಿಗೆ ನಡೆಯಲಿದೆ ಎಂದು ಜಯಕರ ಶೆಟ್ಟಿ ಇಂದ್ರಾಳಿ ವಿವರಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಸೊಸೈಟಿಯ ಪ್ರಧಾನ ವ್ಯವಸ್ಥಾಪಕ ರಾಜೇಶ್ ವಿ. ಶೇರಿಗಾರ್ ಸಹಾಯಕ ಪ್ರಧಾನ ವ್ಯವಸ್ಥಾಪಕ ಪ್ರವೀಣ್‌ಕುಮಾರ್ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News