×
Ad

ದ್ವಿತೀಯ ಪಿಯುಸಿ ಪರೀಕ್ಷೆಗೆ 16,060 ಪರೀಕ್ಷಾರ್ಥಿಗಳು: ಉಡುಪಿ ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ

Update: 2024-02-22 19:50 IST

ಉಡುಪಿ: ಜಿಲ್ಲೆಯಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಗಳು ಮುಂದಿನ ಮಾರ್ಚ್ 1ರಿಂದ 22ರವರೆಗೆ ಒಟ್ಟು 28 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಇವುಗಳಲ್ಲಿ ಈ ಸಲ ಒಟ್ಟು 16,060 ಪರೀಕ್ಷಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದು ಉಡುಪಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ತಿಳಿಸಿದ್ದಾರೆ.

ಮಣಿಪಾಲ ರಜತಾದ್ರಿಯಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಪಿಯುಸಿ ಪರೀಕ್ಷೆಯ ಪೂರ್ವ ಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.

ಈ ಬಾರಿ ಜಿಲ್ಲೆಯ 28 ಪರೀಕ್ಷಾ ಕೇಂದ್ರಗಳಲ್ಲಿ ಹೊಸದಾಗಿ ಪರೀಕ್ಷೆ ಬರೆಯುವ 15,413 ವಿದ್ಯಾರ್ಥಿಗಳೊಂದಿಗೆ ಖಾಸಗಿ 433 ಮಂದಿ ಹಾಗೂ 214 ಮಂದಿ ಮರು ಪರೀಕ್ಷೆ ಬರೆಯುವವರು ಸೇರಿದಂತೆ ಒಟ್ಟು 16,060 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದು ಅವರು ತಿಳಿಸಿದರು.

ಈ ಪರೀಕ್ಷೆಗಳು ಮಾರ್ಚ್ 1ರಿಂದ 22ರವರೆಗೆ ಬೆಳಗ್ಗೆ 10:15ಕ್ಕೆ ಪ್ರಾರಂಭಗೊಂಡು ಅಪರಾಹ್ನ 1:30ರವರೆಗೆ ನಡೆಯಲಿದೆ. ವಿಜ್ಞಾನ ವಿಭಾಗ ದಲ್ಲಿ 7,745 ವಿದ್ಯಾರ್ಥಿಗಳು, ವಾಣಿಜ್ಯ ವಿಭಾಗದಲ್ಲಿ 6,564 ವಿದ್ಯಾರ್ಥಿ ಗಳು ಹಾಗೂ ಕಲಾ ವಿಭಾಗದಲ್ಲಿ 1,054 ವಿದ್ಯಾರ್ಥಿಗಳು ಹೊಸದಾಗಿ ಪರೀಕ್ಷೆ ಬರೆಯಲಿದ್ದಾರೆ ಎಂದರು.

ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಶಿಸ್ತುಬದ್ಧವಾಗಿ ಪರೀಕ್ಷೆಗಳನ್ನು ನಡೆಸಿ, ಯಾವುದೇ ಗೊಂದಲಗಳಿಗೆ ಆಸ್ಪದ ನೀಡದಂತೆ ಎಚ್ಚರವಹಿಸಬೇಕು ಎಂದವರು ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.

ವಿದ್ಯಾರ್ಥಿಗಳು ಪರೀಕ್ಷಾ ತರಗತಿಗಳಲ್ಲಿ ಸುಲಲಿತವಾಗಿ ಪರೀಕ್ಷೆಯನ್ನು ಬರೆಯಲು ಪೂರಕ ವಾತಾವರಣ ಕಲ್ಪಿಸಲು ಅಗತ್ಯ ಪೂರ್ವಸಿದ್ಧತೆಗಳನ್ನು ಮಾಡಿಕೊಳ್ಳಬೇಕು. ಪ್ರಶ್ನೆಪತ್ರಿಕೆ ವಿತರಿಸುವ ತಂಡ, ಪರೀಕ್ಷಾ ಕೇಂದ್ರದ ವೀಕ್ಷಕರ ನೇಮಕ, ಪ್ರಶ್ನೆಪತ್ರಿಕೆ ಪಾಲಕರ ತಂಡ, ಜಿಲ್ಲಾ ಮಾರ್ಗಾಧಿಕಾರಿಗಳ ತಂಡ, ಪರೀಕ್ಷಾ ಪರೀಕ್ಷಕರ ಸಂಚಾರ ಜಾಗೃತ ದಳ ಸೇರಿ ದಂತೆ ಎಲ್ಲಾ ನಿಯೋಜಿತ ತಂಡಗಳನ್ನು ನೇಮಿಸಲಾಗುವುದು ಎಂದರು.

ಕೆಎಸ್ಸಾರ್ಟಿಸಿ ಬಸ್: ಪರೀಕ್ಷಾ ಕೇಂದ್ರಗಳಿಗೆ ವಿದ್ಯಾರ್ಥಿಗಳು ನಿಗದಿತ ಕಾಲಾವಧಿಯೊಳಗೆ ಹಾಜರಾಗಲು ಅನುಕೂಲವಾ ಗುವಂತೆ ಸಾರಿಗೆ ವ್ಯವಸ್ಥೆಯನ್ನು ಕೆಎಸ್ಸಾರ್ಟಿಸಿ ಹಾಗೂ ಸಾರಿಗೆ ಇಲಾಖೆಯ ಅಧಿಕಾರಿಗಳು ಕೈಗೊಳ್ಳಬೇಕೆಂದು ಸೂಚನೆ ನೀಡಿದರು.

ಪರೀಕ್ಷಾ ಕೇಂದ್ರಗಳಿಗೆ ಪ್ರಶ್ನೆಪತ್ರಿಕೆಗಳನ್ನು ಜಿಲ್ಲಾ ಖಜಾನೆಯಿಂದ ಪಡೆದು ಪರೀಕ್ಷಾ ಕೇಂದ್ರಗಳಿಗೆ ಸಕಾಲದಲ್ಲಿ ವಿತರಿಸಬೇಕು. ಪ್ರಶ್ನೆ ಪತ್ರಿಕೆಯ ಬಂಡಲ್ ಗಳನ್ನು ಬಿಚ್ಚುವಾಗ ಹಾಗೂ ಉತ್ತರ ಪತ್ರಿಕೆಗಳನ್ನು ಸ್ವೀಕರಿಸಿ, ಬಂಡಲ್ ಮಾಡುವಾಗ ಸಿಸಿಟಿವಿ ವೀಕ್ಷಣೆಯಲ್ಲಿಯೇ ನಿರ್ವಹಿಸಬೇಕು ಎಂದು ಸ್ಪಷ್ಟ ಸೂಚನೆ ನೀಡಿದರು.

ಪರೀಕ್ಷೆ ಅಕ್ರಮಗಳಾದ ಪ್ರಶ್ನೆ ಪತ್ರಿಕೆ ಸೋರಿಕೆ, ಅವುಗಳ ಖರೀದಿ ಮತ್ತು ಮಾರಾಟ, ಮೊಬೈಲ್ ಫೋನ್ ಅಥವಾ ಎಲೆಕ್ಟ್ರಾನಿಕ್ ಉಪಕರಣಗಳ ಮುಖಾಂತರ ಪ್ರಶ್ನೆಪತ್ರಿಕೆ ಸೋರಿಕೆಗೆ ವಿದ್ಯಾರ್ಥಿ ಹಾಗೂ ವ್ಯಕ್ತಿಗಳೊಂದಿಗೆ ಸಹಕರಿಸು ವುದು, ಪ್ರಶ್ನೆಪತ್ರಿಕೆ ಬಗ್ಗೆ ವದಂತಿ ಹರಡುವುದು, ಅಕ್ರಮಕ್ಕೆ ಪ್ರೇರೇಪಿಸುವುದು ಮತ್ತು ಪ್ರೋತ್ಸಾಹಿಸುವುದು ಕಂಡುಬಂದಲ್ಲಿ ಅಂಥವರ ವಿರುದ್ಧ ಕಾನೂನಿನ ಕ್ರಮ ಕೈಗೊಳ್ಳಲಾಗುವುದು. ಯಾರೊಬ್ಬರೂ ಪರೀಕ್ಷಾ ಕೇಂದ್ರಕ್ಕೆ ಮೊಬೈಲ್ ತೆಗೆದು ಕೊಂಡು ಹೋಗುವಂತಿಲ್ಲ ಎಂದರು.

ಸಾಮಾಜಿಕ ಜಾಲತಾಣಗಳಲ್ಲಿ ಹಳೆಯ ಪ್ರಶ್ನೆಪತ್ರಿಕೆಗಳನ್ನು ಅಥವಾ ಕೈಬರಹ ಪ್ರಶ್ನೆಗಳನ್ನು ರವಾನಿಸಿ, ವದಂತಿಗಳನ್ನು ಹಬ್ಬಿಸಿ, ವಿದ್ಯಾರ್ಥಿಗಳು, ಪೋಷಕರು ಹಾಗೂ ಜನಸಾಮಾನ್ಯರಲ್ಲಿ ಗೊಂದಲ ಸೃಷ್ಟಿಸಿದರೆ ಅಂತಹವರ ವಿರುದ್ಧ ಸೈಬರ್ ಕ್ರೈಂ ಅಡಿಯಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.

ಪರೀಕ್ಷಾ ಕೇಂದ್ರಗಳ ಸುತ್ತಲೂ ಜೆರಾಕ್ಸ್ ಅಂಗಡಿಗಳನ್ನು ಮುಚ್ಚಲು ಹಾಗೂ 200ಮೀ. ವ್ಯಾಪ್ತಿಯ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಲಾಗುವುದು ಎಂದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಮಮತಾದೇವಿ ಜಿ.ಎಸ್, ಎಎಸ್‌ಪಿ ಸಿದ್ದಲಿಂಗಪ್ಪ, ಸಹಾಯಕ ಕಮೀಷನರ್ ರಶ್ಮಿ ಎಸ್, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಮಾರುತಿ, ಡಿಡಿಪಿಐ ಗಣಪತಿ ಕೆ., ಜಿಲ್ಲಾ ಮಟ್ಟದ ಅನುಷ್ಠಾನಾಧಿ ಕಾರಿಗಳು, ತಹಶೀಲ್ದಾರರು, ವಿವಿಧ ಕಾಲೇಜುಗಳ ಪ್ರಾಂಶುಪಾಲರು ಉಪಸ್ಥಿತರಿದ್ದರು.




Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News