ಜೂನ್ 2ರಿಂದ ಯುವ ಯಕ್ಷ ಕಲಾವಿದರಿಗೆ ಮಾರ್ಗದರ್ಶಿ ಶಿಬಿರ
ಉಡುಪಿ, ಜೂ.1: ವೃತ್ತಿ ಮೇಳದಲ್ಲಿರುವ ಯುವ ಕಲಾವಿದರಿಗೆ ನಾಲ್ಕು ದಿನಗಳ ಮಾರ್ಗದರ್ಶಿ ಶಿಬಿರವನ್ನು ಉಡುಪಿಯ ಯಕ್ಷಗಾನ ಕಲಾರಂಗವು ಆಯೋಜಿಸಿದೆ. ಈ ಸನಿವಾಸ ಶಿಬಿರ ಜೂನ್ 2ರಿಂದ 5 ರವರೆಗೆ ಸಂಸ್ಥೆಯ ಐವೈಸಿ ಕಟ್ಟಡದಲ್ಲಿ ಜರುಗಲಿದೆ.
ಯಕ್ಷಗಾನದ ಹಿರಿಯ ವಿದ್ವಾಂಸ ಡಾ. ಎಂ. ಪ್ರಭಾಕರ ಜೋಶಿ ಅವರು ಜೂನ್ 2ರ ಮಂಗಳವಾರ ಬೆಳಗ್ಗೆ 10:30ಕ್ಕೆ ಶಿಬಿರವನ್ನು ಉದ್ಘಾಟಿಸಲಿದ್ದಾರೆ. ಸಂಸ್ಥೆಯ ಅಧ್ಯಕ್ಷರಾದ ಶಿಬಿರದ ಪ್ರಾಯೋಜಕ ಎಂ.ಗಂಗಾಧರ ರಾವ್ ಅಧ್ಯಕ್ಷತೆ ವಹಿಸಲಿದ್ದಾರೆ.
ಸಮಾರಂಭದಲ್ಲಿ ಯಕ್ಷಗಾನ ವಿದ್ವಾಂಸ ದಿವಾಕರ ಹೆಗಡೆ ಕೆರೆಹೊಂಡ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಪ್ರಸಂಗಕರ್ತ ಪವನ್ ಕಿರಣ್ಕೆರೆ ಸಂಯೋಜನೆಯಲ್ಲಿ ನಡೆಯುವ ಶಿಬಿರದಲ್ಲಿ ವಿವಿಧ ಮೇಳಗಳ 35 ಯುವ ಕಲಾವಿದರು ಪಾಲ್ಗೊಳ್ಳಲಿದ್ದು, 25ಕ್ಕೂ ಅಧಿಕ ಸಂಪನ್ಮೂಲ ವ್ಯಕ್ತಿಗಳು ಭಾಗವಹಿಸುವರು.
ಕಲಾರಂಗ ಪ್ರಶಸ್ತಿ: ಜೂನ್ 5ರ ಶುಕ್ರವಾರ ಸಂಜೆ 4:00ಗಂಟೆಗೆ ಯಕ್ಷಗಾನ ಕಲಾರಂಗದ ಐವೈಸಿ ಸಭಾಂಗಣದಲ್ಲಿ ಯಕ್ಷಗಾನ ಮಾರ್ಗದರ್ಶಿ ಶಿಬಿರದ ಸಮಾರೋಪ ಹಾಗೂ ತಲ್ಲೂರು ಕನಕಾ ಅಣ್ಣಯ್ಯ ಶೆಟ್ಟಿ ಸ್ಮರಣಾರ್ಥ ಯಕ್ಷಗಾನ ಕಲಾರಂಗ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ.
ಸುಳ್ಯದ ಹಿರಿಯ ವಿದ್ವಾಂಸ ಡಾ.ಚಂದ್ರಶೇಖರ ದಾಮ್ಲೆ ಅವರಿಗೆ ಹೊರನಾಡು ದೇವಸ್ಥಾನದ ಧರ್ಮಕರ್ತೃ ಡಾ.ಜಿ.ಭೀಮೇಶ್ವರ ಜೋಶಿ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಹಿರಿಯ ವಿದ್ವಾಂಸ ಡಾ.ಬಿ.ಎ.ವಿವೇಕ ರೈ ಅಭಿನಂದನಾ ನುಡಿಯನ್ನಾಡಲಿದ್ದಾರೆ. ಕರ್ನಾಟಕ ಯಕ್ಷಗಾನ ಅಕಾಡೆಮಿಯ ಅಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಕಲಾರಂಗದ ಕಾರ್ಯದರ್ಶಿ ಮುರಲಿ ಕಡೆಕಾರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.