ಕರಾವಳಿಯಲ್ಲಿ ಹೈಕೋರ್ಟ್‌ನ ಸಂಚಾರಿ ಪೀಠ ಸ್ಥಾಪನೆಗೆ ಆಗ್ರಹ; ಆ.22ರಂದು ಉಡುಪಿಯಲ್ಲಿ ಸಮಾಲೋಚನಾ ಸಭೆ

Update: 2026-08-19 22:05 IST

ಉಡುಪಿ, ಆ.19: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳನ್ನು ಒಳಗೊಂಡ ರಾಜ್ಯದ ಕರಾವಳಿ ಭಾಗದಲ್ಲಿ ಕರ್ನಾಟಕ ಹೈಕೋರ್ಟ್ ಸಂಚಾರಿ ಪೀಠವನ್ನು ಸ್ಥಾಪಿಸುವಂತೆ ಒತ್ತಾಯಿಸಿ ಸಂಘಟಿತ ಹೋರಾಟ ರೂಪಿಸುವ ನಿಟ್ಟಿನಲ್ಲಿ ಯು-ಆ್ಯಕ್ಟ್ ಹಾಗೂ ಕರಾವಳಿ ಹೈಕೋರ್ಟ್ ಪೀಠ ಹೋರಾಟ ಸಮಿತಿ ವತಿಯಿಂದ ಆಗಸ್ಟ್ 22ರಂದು ಉಡುಪಿಯಲ್ಲಿ ಸಮಾಲೋಚನಾ ಸಭೆಯೊಂದನ್ನು ಕರೆದಿದೆ ಎಂದು ಸಮಿತಿಯ ಸ್ಥಾಪಕ ಹಾಗೂ ನ್ಯಾಯವಾದಿ ಪ್ರೇಮ್‌ಪ್ರಸಾದ್ ಶೆಟ್ಟಿ ಹೇಳಿದ್ದಾರೆ.

ಉಡುಪಿ ಪ್ರೆಸ್‌ಕ್ಲಬ್‌ನಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಈ ಮಾಹಿತಿ ನೀಡಿದ ಅವರು, ಅ.22ರ ಶನಿವಾರ ಅಪರಾಹ್ನ 3:00 ಗಂಟೆಗೆ ಎಂಜಿಎಂ ಕಾಲೇಜಿನ ರವೀಂದ್ರ ಮಂಟಪದಲ್ಲಿ ಸಭೆಯನ್ನು ಆಯೋಜಿಸಲಾಗಿದೆ. ಕರಾವಳಿ ಭಾಗ ದಲ್ಲಿ ಹೈಕೋರ್ಟ್ ಸಂಚಾರಿ ಪೀಠದ ಸ್ಥಾಪನೆಯ ಅಗತ್ಯತೆ ಕುರಿತು ಸಭೆಯಲ್ಲಿ ಚರ್ಚಿಸಿ ಸರಕಾರದ ಮುಂದೆ ಸಂಘಟಿತ ಹಕ್ಕೊತ್ತಾಯ ಮಂಡಿಸಲಾಗುವುದು ಎಂದರು.

ಕರಾವಳಿಯಿಂದ ಹೈಕೋರ್ಟ್‌ನಲ್ಲಿ ಅಧಿಕ ವ್ಯಾಜ್ಯಗಳು ದಾಖಲಾಗುತ್ತಿವೆ. ಇದಕ್ಕಾಗಿ ಪ್ರಕರಣಗಳ ವಿಚಾರಣೆಗೆ ಬೆಂಗಳೂರಿನಲ್ಲಿರುವ ಹೈಕೋರ್ಟ್‌ಗೆ ತೆರಳಲು 900ರಿಂದ 1,000 ಕಿ.ಮೀ.ಗೂ ಅಧಿಕ ದೂರ ಪ್ರಯಾಣಿಸ ಬೇಕಾಗಿದೆ. ಮಳೆಗಾಲದಲ್ಲಿ ಸಾರ್ವಜನಿಕರು, ಮಹಿಳೆಯರು ಹಾಗೂ ಕಕ್ಷಿದಾರರಿಗೆ ಹೆಚ್ಚಿನ ತೊಂದರೆಯಾಗುತ್ತಿದೆ. ಕರಾವಳಿಯಲ್ಲಿ ಪೀಠ ಸ್ಥಾಪನೆಯಾದರೆ ಕಡಿಮೆ ವೆಚ್ಚದಲ್ಲಿ ತ್ವರಿತ ನ್ಯಾಯ ದೊರೆಯಲಿದೆ ಎಂದು ಅವರು ಹೇಳಿದರು.

22ರ ಸಭೆಯಲ್ಲಿ ವಕೀಲರು, ಪತ್ರಕರ್ತರು, ಸಾಮಾಜಿಕ ಹಾಗೂ ಉದ್ಯಮ ಸಂಘಟನೆಗಳು, ವಿದ್ಯಾರ್ಥಿ ಮತ್ತು ಕಾರ್ಮಿಕ ಸಂಘಟನೆಗಳು, ಮಾಜಿ ಸೈನಿಕರು, ಆಟೋ ಚಾಲಕರು ಸೇರಿದಂತೆ ವಿವಿಧ ಕ್ಷೇತ್ರಗಳ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ. ಹೋರಾಟವನ್ನು ವಕೀಲರಿಗೆ ಸೀಮಿತಗೊಳಿಸದೆ ಇಡೀ ಕರಾವಳಿ ಜನತೆಯ ಧ್ವನಿಯಾಗಿಸುವ ಉದ್ದೇಶವಿದೆ ಎಂದು ಪ್ರೇಮ್‌ಪ್ರಸಾದ್ ಶೆಟ್ಟಿ ವಿವರಿಸಿದರು.

ಸುದ್ದಿಗೋಷ್ಠಿಯಲ್ಲಿ ಸಮಿತಿಯ ಪ್ರಮುಖರಾದ ಪೌರ್ಣಮಿ ಪ್ರೇಮ್, ವಿಜಯ್ ಡಿಸೋಜಾ, ಮಾಧವ ಕಾಮತ್, ಸರಿತಾ ಬಿ., ಸುರೇಶ್ ಕಾಮತ್ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News