×
Ad

ಬೀದಿನಾಯಿಗಳ ಆಶ್ರಯ ತಾಣಕ್ಕೆ ಜಿಲ್ಲೆಯ 6 ಕಡೆ ಜಾಗದ ಗುರುತು: ಉಡುಪಿ ಡಿಸಿ ಸ್ವರೂಪಾ ಟಿ.ಕೆ.

‘ಸುಪ್ರೀಂ ಕೋರ್ಟ್‌ನ ಆದೇಶ ಮಾನವೀಯ ನೆಲೆಯಲ್ಲಿ ಅನುಷ್ಠಾನ’

Update: 2026-03-07 19:22 IST

ಉಡುಪಿ, ಮಾ.7: ದೇಶದ ಸರ್ವೋಚ್ಛ ನ್ಯಾಯಾಲಯದ ಆದೇಶದಂತೆ ಬೀದಿನಾಯಿಗಳ ಆಶ್ರಯ ತಾಣ ನಿರ್ಮಾಣಕ್ಕೆ ಪ್ರತಿ ತಾಲೂಕಿನಲ್ಲಿಯೂ ಅಗತ್ಯವಿರುವ ಭೂಮಿಯ ಗುರುತಿಸುವ ಪ್ರಕ್ರಿಯೆ ನಡೆಯುತಿದ್ದು, ಈಗಾಗಲೇ ಉಡುಪಿ ನಗರ ವ್ಯಾಪ್ತಿಯಲ್ಲಿ 9 ಎಕ್ರೆ, ಕುಂದಾಪುರದ ಕಂದಾವರ ಡಂಪಿಂಗ್ ಯಾರ್ಡ್ ಬಳಿ 1.5 ಎಕ್ರೆ, ಕಾರ್ಕಳದಲ್ಲಿ 1 ಎಕ್ರೆ, ಕಾಪುವಿನ ಶಿರ್ವದಲ್ಲಿ 3 ಎಕ್ರೆ, ಬೈಂದೂರಿನಲ್ಲಿ 1 ಎಕ್ರೆ ಹಾಗೂ ಸಾಲಿಗ್ರಾಮದ ಗಿಳಿಯಾರಿ ನಲ್ಲಿ 3 ಎಕರೆ ಜಾಗವನ್ನು ಗುರುತಿಸಲಾಗಿದೆ ಎಂದು ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ. ತಿಳಿಸಿದ್ದಾರೆ.

ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ನಡೆದ ಬೀದಿ ನಾಯಿಗಳ ಹಾವಳಿ ತಡೆಗಟ್ಟುವ ಕುರಿತಂತೆ ನಡೆದ ಜಿಲ್ಲಾ ಮಟ್ಟದ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.

ಬೀದಿ ನಾಯಿಗಳ ಹಾವಳಿ ತಡೆಗಟ್ಟುವ ನಿಟ್ಟಿನಲ್ಲಿ ದೇಶದ ಸರ್ವೋಚ್ಚ ನ್ಯಾಯಾಲಯ ಹೊರಡಿಸಿರುವ ಆದೇಶ ದಲ್ಲಿರುವ ಮಾರ್ಗಸೂಚಿಗಳನ್ನು ಮಾನವೀಯ ಹಾಗೂ ವೈಜ್ಞಾನಿಕ ದೃಷ್ಟಿಕೋನದಿಂದ ಅನುಷ್ಠಾನ ಮಾಡಬೇಕು ಎಂದು ಅವರು ಅಧಿಕಾರಿಗಳಿಗೆ ಸೂಚನೆಗಳನ್ನು ನೀಡಿದರು.

ರೇಬೀಸ್ ಕಾಯಿಲೆ, ಸಂಶಯಾಸ್ಪದ ರೋಗ ಪೀಡಿತ ಅಥವಾ ಆಕ್ರಮಣಕಾರಿ ನಡತೆ ಇರುವ ನಾಯಿಗಳನ್ನು ಹಿಡಿದು ಈ ಆಶ್ರಯ ತಾಣಗಳಿಗೆ ಬಿಡಲು ಅನುಕೂಲವಾಗುವಂತೆ ಈಗಾಗಲೇ ಗುರುತಿಸಿರುವ ಜಾಗದಲ್ಲಿ, ಎಸ್‌ಓಪಿ ಅನ್ವಯ ಅಗತ್ಯವಿರುವ ಆಹಾರ, ನೀರು, ನೆರಳು, ಪಶು ವೈದ್ಯಕೀಯ ಚಿಕಿತ್ಸೆಗಳನ್ನು ಒದಗಿಸುವ ಆಶ್ರಯ ತಾಣ ಗಳನ್ನು ಕೂಡಲೇ ನಿರ್ಮಾಣ ಮಾಡುವುದರೊಂದಿಗೆ ‘ಡಾಗ್ ಶೆಲ್ಟರ್’ ಎಂಬ ಬೋರ್ಡನ್ನು ಅಲ್ಲಿ ಅಳವಡಿಸುವಂತೆ ಜಿಲ್ಲಾಧಿಕಾರಿ ತಿಳಿಸಿದರು.

ಜನಸಾಮಾನ್ಯರಿಗೆ ಬೀದಿ ನಾಯಿಗಳಿಂದ ಉಂಟಾಗುವ ಉಪಟಳಗಳನ್ನು ತಪ್ಪಿಸುವ ಉದ್ದೇಶದಿಂದ ಸುಪ್ರೀಂ ಕೋರ್ಟ್ ಕೆಲವೊಂದು ಮಾರ್ಗದರ್ಶನ ಗಳನ್ನು ಸೂಚಿಸಿದೆ. ಇವುಗಳನ್ನು ಜಿಲ್ಲಾ ವ್ಯಾಪ್ತಿಯಲ್ಲಿ ಕಟ್ಟುನಿಟ್ಟಾಗಿ ಅನುಷ್ಠಾನ ಗೊಳಿಸುವುದರೊಂದಿಗೆ ಬೀದಿ ನಾಯಿಗಳಿಂದ ಉಂಟಾಗುವ ತೊಂದರೆಗಳನ್ನು ನಿಯಂತ್ರಿಸಬೇಕು ಎಂದೂ ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಸರ್ವೋಚ್ಛ ನ್ಯಾಯಾಲಯದ ಆದೇಶಂತೆ ಸಂಬಂಧಪಟ್ಟ ಇಲಾಖೆಗಳು ಹಾಗೂ ಸ್ಥಳೀಯ ಸಂಸ್ಥೆಗಳು ಬೀದಿನಾಯಿ ಗಳ ಹಾವಳಿ ನಿಯಂತ್ರಣಕ್ಕೆ ಅವುಗಳನ್ನು ಆಶ್ರಯ ತಾಣಗಳಿಗೆ ಸ್ಥಳಾಂತರಿಸಬೇಕು. ಜೊತೆಗೆ ಎಬಿಸಿ ಕಾರ್ಯಕ್ರಮ ಗಳನ್ನು ತೀವ್ರಗೊಳಿಸಲು, ರೇಬೀಸ್ ಹರಡದಂತೆ ತಡೆಗಟ್ಟಲು ಲಸಿಕಾ ಕಾರ್ಯಕ್ರಮ ಸೇರಿದಂತೆ ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಹಾಗೂ ಸಾರ್ವಜನಿಕರ ಸುರಕ್ಷತೆಗೆ ಆದ್ಯತೆ ನೀಡುವಂತೆ ಸೂಚಿಸಿದ್ದು, ಇದು ಪರಿಣಾಮಕಾರಿಯಾಗಿ ಅನುಷ್ಠಾನವಾಗಬೇಕು ಎಂದರು.

ಆಹಾರ ನೀಡಲು ಜಾಗ ಗುರುತು: ಸ್ಥಳೀಯ ಸಂಸ್ಥೆಗಳು ಹಾಗೂ ಗ್ರಾಮ ಪಂಚಾಯತ್‌ಗಳ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಸಂಖ್ಯೆಗೆ ಅನುಗುಣವಾಗಿ ಆಹಾರ ವಿತರಣೆಗೆ ಸ್ಥಳಗಳನ್ನು ಗುರುತಿಸಬೇಕು. ನಿಗದಿತ ಜಾಗದಲ್ಲಿ ಮಾತ್ರ ಆಹಾರ ನೀಡಬೇಕು. ಆಹಾರ ವಿತರಣಾ ತಾಣಗಳನ್ನು ಹೊರತುಪಡಿಸಿ ಇತರೆ ಯಾವುದೇ ಸಾರ್ವಜನಿಕ ಸ್ಥಳಗಳಲ್ಲಿ ಆಹಾರ ಪೂರೈಕೆ ಮಾಡದಂತೆ ಸುಪ್ರೀಂಕೋರ್ಟ್ ಆದೇಶದಲ್ಲಿ ಸೂಚಿಸಿದೆ. ಇದು ಉಲ್ಲಂಘನೆಯಾಗ ದಂತೆ ನೋಡಿಕೊಳ್ಳುವುದು ಪ್ರತಿ ನೋಡಲ್ ಅಧಿಕಾರಿಯ ಜವಾಬ್ದಾರಿಯಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಜಿಲ್ಲೆಯ ನಗರ ಹಾಗೂ ಸ್ಥಳೀಯ ಸಂಸ್ಥೆಯವರು ಬೀದಿನಾಯಿಗಳ ಸ್ಥಳಾಂತರ ಹಾಗೂ ಸ್ವಚ್ಛತೆಗೆ ಆದ್ಯತೆ ನೀಡ ಬೇಕು. ಜಿಲ್ಲೆಯಲ್ಲಿ ಬೀದಿ ನಾಯಿಗಳ ನಿಯಂತ್ರಣ ಕುರಿತು ಸಹಾಯವಾಣಿ ಸ್ಥಾಪಿಸಿ, ಜನರ ದೂರು ಗಳನ್ನು ಗಂಭೀರವಾಗಿ ಪರಿಗಣಿಸಬೇಕು ಎಂದರು.

ನಾಯಿಗಳ ದತ್ತುಗೆ ನೋಂದಣಿ: ಜಿಲ್ಲೆಯಲ್ಲಿ ‘ಡಾಗ್ ಅಡಾಪ್ಷನ್’ ಕುರಿತು ಜಾಗೃತಿ ಮೂಡಿಸಬೇಕು. ಇತರೆ ಕೆಲವು ಜಿಲ್ಲೆಗಳಲ್ಲಿಯೂ ಸಹ ಬೀದಿನಾಯಿಗಳ ಡಾಗ್ ಶೋ ಮಾಡಲು ನೋಂದಣಿ ಮಾಡಿಕೊಂಡಿದ್ದಾರೆ, ಡಾಗ್ ಶೋ ಮಾಡಿದಲ್ಲಿ ಜನರು ಹೆಚ್ಚಿನ ಸಂಖ್ಯೆಯಲ್ಲಿ ನಾಯಿಗಳನ್ನು ದತ್ತು ಸ್ವೀಕಾರ ಮಾಡಿಲಿದ್ದಾರೆ ಎಂದ ಅವರು, ಜಿಲ್ಲೆಯಲ್ಲಿ ಡಾಗ್ ಅಡಾಪ್ಷನ್ ಮಾಡಿಕೊಂಡವರ ವಿವರ ನೀಡುವಂತೆ ಸೂಚಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಎಸ್.ಎಸ್ ಕಾದ್ರೋಳ್ಳಿ, ಪಶುಪಾಲನಾ ಇಲಾಖೆಯ ಉಪನಿರ್ದೇಶಕ ಡಾ.ಎಂ.ಸಿ ರೆಡ್ಡಪ್ಪ, ಪೌರಾಯುಕ್ತ ಮಹಾಂತೇಶ ಹಂಗರಗಿ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

ಉಡುಪಿಯಲ್ಲಿ 440 ಬೀದಿನಾಯಿಗಳು ಪತ್ತೆ

ಜಿಲ್ಲೆಯ ನಗರ ಭಾಗದಲ್ಲಿರುವ ಸರಕಾರಿ ಮತ್ತು ಖಾಸಗಿ ವಿದ್ಯಾಸಂಸ್ಥೆಗಳು, ಸರಕಾರಿ ಕಚೇರಿಗಳು, ಬಸ್ ಹಾಗೂ ರೈಲ್ವೆ ನಿಲ್ದಾಣ, ಆಸ್ಪತ್ರೆಗಳು ಹಾಗೂ ಕ್ರೀಡಾಂಗಣ ಸೇರಿದಂತೆ ಒಟ್ಟು 253 ಸಂಸ್ಥೆಗಳ ವ್ಯಾಪ್ತಿಯಲ್ಲಿ ಒಟ್ಟು 440 ಬೀದಿನಾಯಿಗಳನ್ನು ಗುರುತಿಸಲಾಗಿದೆ ಎಂದು ಜಿಲ್ಲಾಧಿಕಾರಿ ಸ್ವರೂಪ ತಿಳಿಸಿದರು.

ಈ ಎಲ್ಲಾ ಸಂಸ್ಥೆಗಳ ಗೇಟ್‌ಗಳ ಮೇಲೆ ಸಂಬಂಧಪಟ್ಟ ನೋಡೆಲ್ ಅಧಿಕಾರಿಗಳ ಹೆಸರು, ಮೊಬೈಲ್ ನಂಬರ್ ಹಾಗೂ ಇಲ್ಲಿ ನಾಯಿಗಳು ಕಂಡಲ್ಲಿ ನೋಡೆಲ್ ಅಧಿಕಾರಿಗಳನ್ನು ಸಂಪರ್ಕಿಸಿ ಎಂಬ ಫಲಕಗಳನ್ನು ಪ್ರತೀ ಸಂಸ್ಥೆ ಗಳಲ್ಲಿ ಅಳವಡಿಸಿರುವ ಕುರಿತ ವಿವರಗಳನ್ನು ಜಿಪಿಎಸ್ ಫೋಟೋ ದೊಂದಿಗೆ ಎರಡು ದಿನದೊಳಗೆ ನೀಡುವಂತೆ ಹಾಗೂ ಗ್ರಾಮೀಣ ಪ್ರದೇಶ ದಲ್ಲಿಯೂ ನೇಮಕ ಮಾಡಲಾದ ನೋಡೆಲ್ ಅಧಿಕಾರಿಗಳ ವಿವರವನ್ನು ಸಲ್ಲಿಸುವಂತೆ ಜಿಲ್ಲಾಧಿಕಾರಿ ಸೂಚಿಸಿದರು.




 


Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News