ಉಡುಪಿ: 140 ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್ ವಿತರಣೆ
ಉಡುಪಿ: ಆಧುನಿಕ ತಂತ್ರಜ್ಞಾನಗಳನ್ನು ಬಳಸಿಕೊಂಡು ವಿದ್ಯಾರ್ಥಿಗಳು ಸಾಧನೆಯ ಶಿಖರವನ್ನು ಏರಬೇಕಾದ ಅನಿವಾರ್ಯತೆ ಇದೆ ಎಂದು ಮಿಲಾಗ್ರಿಸ್ ಶಿಕ್ಷಣ ಸಂಸ್ಥೆಗಳ ಸಂಚಾಲಕ ವಂ.ಫರ್ಡಿನಾಂಡ್ ಗೊನ್ಸಾಲ್ವಿಸ್ ಹೇಳಿದ್ದಾರೆ.
ಕಲ್ಯಾಣಪುರ ಮಿಲಾಗ್ರಿಸ್ ಕಾಲೇಜಿನ ಆವರಣದಲ್ಲಿ ಗುರುವಾರ ಕಾಲೇಜಿನ 140 ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್ ವಿತರಿಸಿ ಅವರು ಮಾತನಾಡುತಿದ್ದರು.
ವಿದ್ಯಾರ್ಥಿಗಳಿಗೆ ಇಂದು ಕಲಿಯಲು ಸಾಕಷ್ಟು ಅವಕಾಶಗಳಿದ್ದು ಲಭ್ಯವಿರುವ ಸಂಪನ್ಮೂಲಗಳನ್ನು ಸರಿಯಾಗಿ ಬಳಸಿಕೊಂಡು ವ್ಯಕ್ತಿತ್ವ ವಿಕಸನಗೊಳಿಸಬೇಕು. ಇದರೊಂದಿಗೆ ಹೊಸ ಕಲಿಕಾ ತಂತ್ರಜ್ಞಾನಕ್ಕೆ ಪೂರಕವಾಗುವ ಸಾಧನಗಳನ್ನು ಬಳಸಿಕೊಳ್ಳುವುದರ ಮೂಲಕ ಇನ್ನಷ್ಟು ಪರಿಣಾಮಕಾರಿಯಾಗಿ ಶಿಕ್ಷಣ ಪಡೆಯಲು ಸಹಕಾರಿಯಾಗುತ್ತದೆ. ಈ ನಿಟ್ಟಿನಲ್ಲಿ ಕಾಲೇಜು ಪ್ರತಿಯೊಬ್ಬ ವಿದ್ಯಾರ್ಥಿಗಳಿಗೂ ಲ್ಯಾಪ್ ಟಾಪ್ ವಿತರಿಸುವುದರ ಮೂಲಕ ಅವರ ಕಲಿಕಾ ಆಸಕ್ತಿಗೆ ಬೆಂಬಲವಾಗಿ ನಿಂತಿದೆ ಎಂದರು.
ಸೈಲಾಸ್ ಪಿಯು ಕಾಲೇಜಿನ ಪ್ರಾಂಶುಪಾಲ ಡಾ.ಜಾರ್ಜ್ ಕೆ., ಕಲ್ಯಾಣಪುರ ಗ್ರಾಪಂ ಅಧ್ಯಕ್ಷ ನಾಗರಾಜ್, ಕಾಲೇಜಿನ ಪ್ರಾಂಶುಪಾಲ ಡಾ.ವಿನ್ಸೆಂಟ್ ಆಳ್ವಾ, ಸಹ ಪ್ರಾಂಶುಪಾಲ ಸೋಫಿಯಾ ಡಾಯಸ್, ಪಿಯು ಕಾಲೇಜಿನ ಪ್ರಾಂಶುಪಾಲ ರಿಚ್ಚಾರ್ಡ್ ಜೀವನ್ ಮೋರಾಸ್, ಸಿಬಂದಿ ಸಂಯೋಜಕಿ ಸುಷ್ಮಾ ಶೆಟ್ಟಿ, ಐಕ್ಯೂಎಸಿ ಸಂಯೋಜಕ ರಾದ ಶಾಲೆಟ್ ಮಥಾಯಸ್, ರಾಧಿಕಾ ಪಾಟ್ಕರ್ ಉಪಸ್ಥಿತರಿದ್ದರು.
ಶಾಲೆಟ್ ಮಥಾಯಸ್ ಸ್ವಾಗತಿಸಿದರು. ಸುಷ್ಮಾ ಶೆಟ್ಟಿ ವಂದಿಸಿದರು. ಚೈತ್ರಾ ಕಾರ್ಯಕ್ರಮ ನಿರೂಪಿಸಿದರು