×
Ad

2-3 ತಿಂಗಳಲ್ಲಿ ಸ್ಥಳೀಯಾಡಳಿತ ಸಂಸ್ಥೆಗಳ ಚುನಾವಣೆ ನಡೆಸಲು ಕ್ರಮ: ಬೋಸರಾಜು

ಕುಂದಾಪುರ ಬ್ಲಾಕ್ ಕಾಂಗ್ರೆಸ್ ನೂತನ ಕಚೇರಿ ಕಟ್ಟಡಕ್ಕೆ ಶಂಕುಸ್ಥಾಪನೆ

Update: 2026-05-13 21:06 IST

ಕುಂದಾಪುರ, ಮೇ 13: ಸ್ಥಳೀಯಾಡಳಿತ ಸಂಸ್ಥೆಗಳ ಚುನಾವಣೆಯಲ್ಲಿ ವಿಳಂಬ ಆಗುತ್ತಿರುವ ಬಗ್ಗೆ ಪಂಚಾಯತ್ ರಾಜ್ ಸಚಿವರು ಸಭೆ ನಡೆಸಿದ್ದು, 2-3 ತಿಂಗಳಿನಲ್ಲಿ ಸ್ಥಳೀಯಾಡಳಿತ ಸಂಸ್ಥೆಗಳ ಚುನಾವಣೆ ನಡೆಸಲು ಎಲ್ಲಾ ಕ್ರಮ ಕೈಗೊಳ್ಳಲಾಗಿದೆ. ಮೀಸಲಾತಿ ಬಗ್ಗೆ ಪ್ರಯತ್ನ ಮುಂದುವರಿದಿದೆ ಎಂದು ಸಣ್ಣ ನೀರಾವರಿ, ಮಾಹಿತಿ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್.ಬೋಸರಾಜು ಹೇಳಿದ್ದಾರೆ.

ಕುಂದಾಪುರದ ಜ್ಯೂನಿಯರ್ ಕಾಲೇಜು ಹತ್ತಿರದ ಕಾಂಗ್ರೆಸ್ ಪಕ್ಷದ ನಿವೇಶನದಲ್ಲಿ ಕುಂದಾಪುರ ಬ್ಲಾಕ್ ಕಾಂಗ್ರೆಸ್ ನೂತನ ಕಚೇರಿ ಕಟ್ಟಡದ ಶಂಕುಸ್ಥಾಪನೆಯನ್ನು ಬುಧವಾರ ನೆರವೇರಿಸಿ ಅವರು ಮಾತನಾಡುತಿದ್ದರು. ಐಎಸ್‌ಆರ್ ಮುಖಾಂತರ ತೊಂದರೆ ಕೊಡುವ ಕೆಲಸ ಕೇಂದ್ರ ಸರಕಾರ ಮಾಡುತ್ತಿದ್ದು, ಈ ಬಗ್ಗೆ ಎಚ್ಚರದಿಂದರಬೇಕು. ಈ ಬಗ್ಗೆ ಜಿಲ್ಲಾಧಿಕಾರಿಗಳಿಗೆ ಜವಾಬ್ದಾರಿಯುತವಾಗಿ ಕೆಲಸ ಮಾಡುವಂತೆ ಸೂಚನೆ ನೀಡಲಾಗಿದೆ’ ಎಂದರು.

ರಾಜ್ಯದಲ್ಲಿ ವಿವಿಧ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಕಾಂಗ್ರೆಸ್ ಪಕ್ಷದ ಕಚೇರಿ ಪ್ರಾರಂಭಿಸಿಲು ಕಾನೂನು ಪ್ರಕಾರ ಜಾಗವನ್ನು ಪಡೆಯುವ ಕೆಲಸ ಮಾಡಲಾಗುತ್ತಿದೆ. ಬಿಜೆಪಿಯವರು ಸಿಕ್ಕಿದ ಸ್ವಲ್ಪ ಸಮಯದಲ್ಲೇ ಇಡೀ ರಾಜ್ಯದಲ್ಲಿರುವ ಜಾಗಗಳನ್ನು ಅವರು ಅತಿಕ್ರಮಣ ಮಾಡಿಕೊಂಡಿವೆ. ಆರೆಸ್ಸೆಸ್ ಹಾಗೂ ಅದರ ಅಂಗಸಂಸ್ಥೆಗಳಿಗೆ ನೂರಾರು ಎಕ್ರೆ ಜಾಗ ನೀಡಿ ಅವರಿಗೆ ಅನುಕೂಲ ಮಾಡಿಕೊಟ್ಟಿದೆ. ಕಾಂಗ್ರೆಸ್ ಬಗ್ಗೆ ಅವರಿಗೆ ಭಯ ಇದೆ. ಪಾರ್ಲಿಮೆಂಟ್‌ನಲ್ಲಿ 400 ಸೀಟ್ ಪಡೆದುಕೊಂಡ ಬಿಜೆಪಿ 200ಕ್ಕೆ ಇಳಿದಿದೆ. ಕಾಂಗ್ರೆಸ್ ಪಕ್ಷಕ್ಕೆ ಬೆಳೆಯುವ ಅವಕಾಶ ಇದೆ. ಜನರ ಪ್ರೀತಿ, ವಿಶ್ವಾಸ ಗಳಿಸುವ ಸಾಕಷ್ಟು ಅವಕಾಶ ಇದೆ ಎಂದು ಹೇಳಿದರು.

ರಾಜ್ಯದಲ್ಲಿ ಸಿದ್ಧರಾಮಯ್ಯ ಮತ್ತು ಡಿಕೆಶಿ ನೇತೃತ್ವದ ಸರಕಾರ ಗ್ಯಾರಂಟಿ ಯೋಜನೆಗಳಿಗೆ 60 ಸಾವಿರ ಕೋಟಿ ರೂ. ಖರ್ಚು ಮಾಡುತ್ತಿದೆ. ಯಾವುದೇ ಭ್ರಷ್ಟಾಚಾರಕ್ಕೆ ಅವಕಾಶ ಮಾಡಿಕೊಡದೆ ಯೋಜನೆಗಳನ್ನು ಜಾರಿಗೊಳಿಸ ಲಾಗುತ್ತಿದೆ. ಬಿಜೆಪಿಯವರಿಗೆ ಮಾತನಾಡಲು ಬೇರೆ ವಿಷಯಗಳಿಲ್ಲ, ಅಪಪ್ರಚಾರ ಮಾಡುವುದು, ಜನರ ದಾರಿ ತಪ್ಪಿಸುವ ಕೆಲಸ ಮಾಡುತ್ತಿದೆ. ಯೋಜನೆಗಳಲ್ಲಿ, ಅಭಿವೃದ್ಧಿ ಕೆಲಸಗಳಲ್ಲಿ ಯಾವುದೇ ಜಾತಿ, ಧರ್ಮ, ಪಕ್ಷ ನೋಡದೆ ಕೆಲಸ ಮಾಡುತ್ತಿದ್ದೇವೆ ಎಂದರು.

ಚುನಾವಣೆಗೂ ಮುನ್ನ ದೇಶ ಸಮೃದ್ಧಿಯಾಗಿದೆ ಎಂದು ಹೇಳುವ ಪ್ರಧಾನ ಮಂತ್ರಿಗಳು, ಚುನಾವಣೆ ಮುಗಿದ ಬಳಿಕ ಉಳಿತಾಯ ಬಗ್ಗೆ ಮಾತನಾಡುತ್ತಾರೆ. ಬಿಜೆಪಿಯವರ ರಾಜಕೀಯ ಕುತಂತ್ರಗಳಿಗೆ ಸರಿಯಾದ ಉತ್ತರ ಕೊಡುವ ಸಂದರ್ಭ ಬರುತ್ತಿದೆ. ದಕ್ಷಿಣ ರಾಜ್ಯಗಳಿಗೆ ಮೋಸ ಮಾಡುವ ಉದ್ದೇಶದಿಂದ ಕ್ಷೇತ್ರ ಪುನರ್ ವಿಂಗಡನೆ ಮಾಡುವ ಪ್ರಯತ್ನ ನಡೆಯುತ್ತಿದೆ ಎಂದು ಅವರು ಆರೋಪಿಸಿದರು.

ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ, ಮಾಜಿ ಸಚಿವ ಕೆ. ಜಯಪ್ರಕಾಶ ಹೆಗ್ಡೆ ಮತ್ತು ಮುಖಂಡ ದಿನೇಶ್ ಹೆಗ್ದೆ ಮೊಳಹಳ್ಳಿ ಮಾತನಾಡಿದರು. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ ಕುಮಾರ ಕೊಡವೂರು, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಂ.ಎ.ಗಫೂರ್, ಮುಖಂಡರಾದ ದೇವಕಿ ಸಣ್ಣಯ್ಯ, ಕಿಶನ್ ಹೆಗ್ಡೆ, ರಾಜು ಪೂಜಾರಿ, ಶಿವರಾಮ ಶೆಟ್ಟಿ ಮಲ್ಯಾಡಿ, ಶಂಕರ ಕುಂದರ್, ಉದಯ ಕುಮಾರ್ ಶೆಟ್ಟಿ ಮುನಿಯಾಲು, ಜ್ಯೋತಿ ಹೆಬ್ಬಾರ್, ವಿನೋದ ಕ್ರಾಸ್ಟೊ, ಹರೀಶ ಕಿಣಿ, ಬಿ. ಹಿರಿಯಣ್ಣ, ಸದಾನಂದ ಶೆಟ್ಟಿ, ಸತೀಶ ಕಿಣಿ, ಮುಸ್ತಾಕ್ ಅಹಮ್ಮದ್, ವಿಕಾಸ್ ಹೆಗ್ಡೆ, ಕೃಷ್ಣದೇವ ಕಾರಂತ, ಪ್ರಸನ್ನ ಕುಮಾರ್, ಪಕ್ಷದ ಮುಖಂಡರು ಮೊದಲಾದವರು ಉಪಸ್ಥಿತರಿದ್ದರು.

ಕುಂದಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಚ್.ಹರಿಪ್ರಸಾದ ಶೆಟ್ಟಿ ಕಾನ್ಮಕ್ಕಿ ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು.

‘ಮಹಿಳೆಯರಿಗೆ 2013ರಲ್ಲಿ ಶೇ.50 ಮೀಸಲಾತಿ ನೀಡುವ ಬಿಲ್ ಮಂಡಿಸಲಾಗಿದ್ದು, ರಾಜ್ಯಸಭೆಯಲ್ಲಿ ಅಂಗೀಕಾರವಾಗಿದೆ. ಕಾಂಗ್ರೆಸ್ ಪಕ್ಷ ಹೆಚ್ಚಿನ ಮಹಿಳೆಯರಿಗೆ ಅವಕಾಶ ಮಾಡಿಕೊಟ್ಟಿದೆ. ಬಿಜೆಪಿಯವರು ಪ್ರತಿಯೊಂದರಲ್ಲಿ ರಾಜಕಾರಣ ಮಾಡುತ್ತಿದ್ದು, ಜನರಲ್ಲಿ ತಪ್ಪು ಕಲ್ಪನೆ ಮೂಡಿಸುತ್ತಿದೆ. ಅಭಿವೃದ್ಧಿ ಬಗ್ಗೆ ಅವರಿಗೆ ಯಾವುದೇ ಆಸೆ ಇಲ್ಲ ’

-ಎನ್.ಎಸ್.ಬೋಸರಾಜು, ಸಚಿವರು

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News