×
Ad

ಜೂ.26ರಂದು ರಾಜಾಂಗಣದಲ್ಲಿ ರಾಜ್ಯದ ಪ್ರತಿಭಾವಂತ ಸ್ಕೌಟ್ಸ್-ಗೈಡ್ಸ್ ವಿದ್ಯಾರ್ಥಿಗಳಿಗೆ ಸನ್ಮಾನ

Update: 2026-06-24 22:16 IST

ಉಡುಪಿ, ಜೂ.24: ಈ ಬಾರಿಯ ಎಸೆಸೆಲ್ಸಿ ಪರೀಕ್ಷೆಯಲ್ಲಿ ಶೇ.90ಕ್ಕಿಂತ ಅಧಿಕ ಅಂಕಗಳನ್ನು ಪಡೆದ ರಾಜ್ಯದ ಪ್ರತಿಭಾವಂತ ಸ್ಕೌಟ್ಸ್ ಮತ್ತು ಗೈಡ್ಸ್, ರೋವರ್ಸ್‌ ಮತ್ತು ರೇಂಜರ್ ವಿದ್ಯಾರ್ಥಿಗಳನ್ನು ಜೂ.26ರ ಶುಕ್ರವಾರ ಉಡುಪಿ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಗುವುದು ಎಂದು ಭಾರತ್ ಸ್ಕೌಟ್ ಮತ್ತು ಗೈಡ್ಸ್ ಕರ್ನಾಟಕ ಉಡುಪಿ ಜಿಲ್ಲಾ ಸಂಸ್ಥೆಯ ಜಿಲ್ಲಾ ಮುಖ್ಯ ಆಯುಕ್ತ ಜಯಕರ ಶೆಟ್ಟಿ ಇಂದ್ರಾಳಿ ತಿಳಿಸಿದ್ದಾರೆ.

ಉಡುಪಿಯಲ್ಲಿಂದು ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್‌ನ ರಾಜ್ಯದ ಮುಖ್ಯ ಆಯುಕ್ತರಾದ ಪಿ.ಜಿ.ಆರ್. ಸಿಂಧ್ಯಾ ಅವರು ಕಳೆದ ಎಂಟು ವರ್ಷಗಳಿಂದ ಸಂಸ್ಥೆಯ ಪ್ರತಿಭಾವಂತ ವಿದ್ಯಾರ್ಥಿ ಗಳನ್ನು ಗುರುತಿಸಿ, ಪ್ರೋತ್ಸಾಹಿಸಲು ಇದನ್ನು ಪ್ರಾರಂಭಿಸಿದ್ದು, ಕಳೆದೆರಡು ವರ್ಷಗಳಿಂದ ಉಡುಪಿ ಜಿಲ್ಲಾ ಸಂಸ್ಥೆಯ ವತಿಯಿಂದ ನಡೆಯುತ್ತಿದೆ ಎಂದು ವಿವರಿಸಿದರು.

ಕಾರ್ಯಕ್ರಮದಲ್ಲಿ ರಾಜ್ಯಾದ್ಯಂತದಿಂದ ಬರುವ 1,200 ಮಕ್ಕಳಿಗೆ ಪ್ರತಿಭಾ ಪುರಸ್ಕಾರವಿರುತ್ತದೆ. ನಾಲ್ಕು ಗೋಡೆ ಗಳ ಮಧ್ಯೆ ಕಲಿಯುವ ಜೊತೆಗೆ ಸ್ಕೌಟ್ಸ್ ಮತ್ತು ಗೈಡ್ಸ್‌ಗೆ ಸೇರಿ ತಮ್ಮ ಸರ್ವತೋಮುಖ ಬೆಳವಣಿಗೆ ಯೊಂದಿಗೆ ಶೇ.90ಕ್ಕಿಂತ ಅಧಿಕ ಅಂಕ ಪಡೆದು ರಾಜ್ಯದಲ್ಲಿ ಗುರುತಿಸಿಕೊಳ್ಳುವ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಲು ಇದನ್ನು ಆಯೋಜಿಸಲಾಗುತ್ತಿದೆ ಎಂದರು.

ರಾಜಾಂಗಣದಲ್ಲಿ ನಡೆಯುವ ಕಾರ್ಯಕ್ರಮವನ್ನು ರಾಜ್ಯ ಮುಖ್ಯ ಆಯುಕ್ತ ಡಾ.ಪಿ.ಜಿ.ಆರ್.ಸಿಂಧ್ಯಾ ಉದ್ಘಾಟಿಸು ವರು. ರಾಜ್ಯ ಆರೋಗ್ಯ ಸಚಿವರೂ, ಭೌರತ್ ಸ್ಕೌಟ್ಸ್ ಮತ್ತು ಗೈಡ್ಸ್‌ನ ಹೆಚ್ಚುವರಿ ಆಯುಕ್ತರೂ ಆಗಿರುವ ಯು.ಟಿ. ಖಾದರ್ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ತಿಳಿಸಿದ ಅವರು,ಪರ್ಯಾಯ ಶೀರೂರು ಮಠದ ಶ್ರೀವೇದವರ್ಧನ ತೀರ್ಥ ಶ್ರೀಪಾದರು ಆಶೀರ್ವಚನ ನೀಡಲಿದ್ದಾರೆ ಎಂದರು.

ರಾಜ್ಯದಲ್ಲಿ ಸುಮಾರು ಎಂಟು ಲಕ್ಷಕ್ಕೂ ಅಧಿಕ ಸ್ಕೌಟ್ಸ್, ಗೈಡ್ಸ್, ಕಬ್, ಬುಲ್‌ಬುಲ್‌ಗಳಿದ್ದು, ಉಡುಪಿ ಜಿಲ್ಲೆಯೊಂದ ರಲ್ಲೇ 62,000 ಮಂದಿ ಬನ್ನೀಸ್, ಕಬ್, ಬುಲ್‌ಬುಲ್, ಸ್ಕೌಟ್ಸ್, ಗೈಡ್ಸ್, ರೋವರ್ಸ್‌, ರೇಂಜರ್ಸ್‌ ಗಳಿದ್ದಾರೆ ಎಂದರು.

ಇದೇ ಜೂ.27ರಿಂದ 29ರವರೆಗೆ ವಿಜಯ ಮಕ್ಕಳ ಕೂಟ ಆತ್ರಾಡಿ ಇವರ ಆಶ್ರಯದಲ್ಲಿ ವಂಡ್ಸೆಯಲ್ಲಿ ಮೂರು ದಿನಗಳ ರಾಜ್ಯಮಟ್ಟದ ವಿಶೇಷ ‘ಏಕತಾ’ ಸಾಮಾಜಿಕ ಸಾಮರಸ್ಯ ಶಿಬಿರ ನಡೆಯಲಿದೆ ಎಂದು ಜಯಕರ ಶೆಟ್ಟಿ ಇಂದ್ರಾಳಿ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಖಂಜಾಚಿ ಹರಿಪ್ರಸಾದ್ ರೈ, ಜಿಲ್ಲಾ ಕಾರ್ಯದರ್ಶಿ ಆನಂದ ಬಿ.ಅಡಿಗ, ಜಿಲ್ಲಾ ಗೈಡ್ ಆಯುಕ್ತೆ ಜ್ಯೋತಿ ಜೆ. ಪೈ ಹಾಗೂ ರಾಜ್ಯ ಸಹಾಯಕ ಸಂಘಟನಾ ಆಯುಕ್ತೆ ಸುಮನ್ ಶೇಖರ್ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News