×
Ad

ದೇಶದ ಶೇ. 40ರಷ್ಟು ಮಂದಿ ಸಹಕಾರಿ ಕ್ಷೇತ್ರದಲ್ಲಿ ಭಾಗಿ: ಜಯಕರ ಶೆಟ್ಟಿ ಇಂದ್ರಾಳಿ

Update: 2025-08-19 19:26 IST

ಉಡುಪಿ, ಆ.19: ದೇಶದ ಒಟ್ಟು ಜನಸಂಖ್ಯೆಯ ಪೈಕಿ ಶೇ.40ರಷ್ಟು ಮಂದಿ ಸಹಕಾರಿ ಕ್ಷೇತ್ರದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ. ಜನರು ಸಹಕಾರಿ ಕ್ಷೇತ್ರದ ಮೇಲೆ ನಂಬಿಕೆ ವಿಶ್ವಾಸವನ್ನು ಇಟ್ಟಿದ್ದಾರೆ. ಅದನ್ನು ಉಳಿಸಿ ಕೊಂಡುವ ಹೋಗುವ ಕೆಲಸವನ್ನು ಎಲ್ಲ ಸಹಕಾರಿಗಳು ಮಾಡಬೇಕು ಎಂದು ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಬಿ.ಜಯಕರ ಶೆಟ್ಟಿ ಇಂದ್ರಾಳಿ ಹೇಳಿದ್ದಾರೆ.

ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ಹಾಗೂ ಉಡುಪಿ ಜಿಲ್ಲಾ ಸಹಕಾರ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಉಡುಪಿ ಜಿಲ್ಲೆಯ ಮಹಿಳಾ ವಿವಿದೋದ್ಧೇಶ ಸಹಕಾರ ಸಂಘಗಳ ಅಧ್ಯಕ್ಷರು, ಆಡಳಿತ ಮಂಡಳಿ ಸದಸ್ಯರು ಹಾಗೂ ಮುಖ್ಯ ಕಾರ್ಯನಿರ್ವಾಹಕರಿಗೆ ಆಡಳಿತ ನಿರ್ವಹಣೆ ಕುರಿತು ಉಡುಪಿ ಲಿಕೋ ಬ್ಯಾಂಕ್‌ನ ಡೈಮಂಡ್ ಜ್ಯುಬಿಲಿ ಸಭಾಂಗಣದಲ್ಲಿ ಮಂಗಳವಾರ ಆಯೋಜಿಸ ಲಾದ ಉಡುಪಿ ಜಿಲ್ಲಾ ಮಟ್ಟದ ವಿಶೇಷ ತರಬೇತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು.

ಉಡುಪಿ ಜಿಲ್ಲೆಯಲ್ಲಿರುವ ಸಹಕಾರಿ ಸಂಸ್ಥೆಗಳ ಪೈಕಿ 21 ಸಹಕಾರಿ ಸಂಸ್ಥೆಗಳನ್ನು ಕೇವಲ ಮಹಿಳೆಯರೇ ಮುನ್ನಡೆಸುತ್ತಿದ್ದಾರೆ. 750 ಸಹಕಾರಿ ಸಂಸ್ಥೆಗಳಲ್ಲಿ ಇಬ್ಬರು ಮಹಿಳಾ ನಿರ್ದೇಶಕರು ಕಡ್ಡಾಯವಾಗಿ ಇರಬೇಕು. ಸಹಕಾರಿ ಸಂಸ್ಥೆ ಎಂಬುವುದು ಖಾಸಗಿ ಸಂಸ್ಥೆಯಲ್ಲ, ಇದೊಂದು ಸರಕಾರಿ ಸ್ವಾಮ್ಯದ ಸಂಸ್ಥೆ. ಮುಂದಿನ ದಿನಗಳಲ್ಲಿ ಸಹಕಾರಿ ಕ್ಷೇತ್ರದಿಂದ ಮಾತ್ರ ದೇಶದ ಆರ್ಥಿಕ ಅಭಿವೃದ್ಧಿ ಸಾಧ್ಯ ಎಂಬುವುದನ್ನು ಕೇಂದ್ರ ಹಾಗೂ ರಾಜ್ಯದ ಜನಪ್ರತಿನಿಧಿಗಳು ಮನಗಂಡಿದ್ದಾರೆ ಎಂದರು.

ತರಬೇತಿ ಕಾರ್ಯಕ್ರಮವನ್ನು ಉಡುಪಿ ನಗರಸಭೆ ಉಪಾಧ್ಯಕ್ಷೆ ರಜನಿ ಹೆಬ್ಬಾರ್ ಉದ್ಘಾಟಿಸಿದರು. ಲಯನ್ಸ್ ಜಿಲ್ಲಾ ಗವರ್ನರ್ ಸಪ್ನಾ ಸುರೇಶ್, ಸಹಕಾರ ಯೂನಿಯನ್ ನಿರ್ದೇಶಕ ವೈ.ಸುಧೀರ್ ಕುಮಾರ್ ಉಪಸ್ಥಿತರಿದ್ದರು.

ಮೂಡುಬಿದಿರೆ ಶ್ರೀದವಳ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಸಂತೋಷ್ ಶೆಟ್ಟಿ, ಸಹಕಾರ ಕಾಯಿದೆ ಪ್ರಮುಖ ಅಂಶಗಳು ಹಾಗೂ ಡಾ.ಜಿ.ಶಂಕರ್ ಸರಕಾರಿ ಮಹಿಳಾ ಪದವಿ ಕಾಲೇಜಿನ ಪ್ರಾಧ್ಯಾಪಕಿ ಡಾ.ನಿಕೇತನ ಸಹಕಾರ ತತ್ವ ಮತ್ತು ಸಮಕಾಲೀನತೆ ಕುರಿತು ಉಪನ್ಯಾಸ ನೀಡಿದರು. ಯೂನಿಯನ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅನುಷಾ ಕೋಟ್ಯಾನ್ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News