Padubidri| ಮುದರಂಗಡಿ ಗ್ರಾಪಂ ಮಾಜಿ ಅಧ್ಯಕ್ಷ ಡೇವಿಡ್ ಡಿಸೋಜ ಹತ್ಯೆ ಪ್ರಕರಣ: ಮೂವರು ಆರೋಪಿಗಳ ಬಂಧನ

ಹತ್ಯೆಗೆ ಸುಪಾರಿ: ಉತ್ತರ ಭಾರತದ ಶಾರ್ಪ್ ಶೂಟರ್ ಗಳಿಂದ ಕೃತ್ಯ

Update: 2026-08-08 09:00 IST

ಆರೋಪಿ ರಾಜು

 ಉಡುಪಿ: ಮುದರಂಗಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ, ಕಾಂಗ್ರೆಸ್ ಮುಖಂಡ, ಗುತ್ತಿಗೆದಾರ ಡೇವಿಡ್ ಡಿಸೋಜ ಅವರನ್ನು ಶುಕ್ರವಾರ ಗುಂಡಿಕ್ಕೆ ಹತ್ಯೆಗೈದಿರುವುದು ಉತ್ತರ ಭಾರತದ ಸುಪಾರಿ ಕಿಲ್ಲರ್ ಗಳು ಎಂಬುದು ತನಿಖೆಯಿಂದ ತಿಳಿದು ಬಂದಿದೆ. ಈ ಸಂಬಂಧ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಹಣಕಾಸಿನ ವಿಚಾರವಾಗಿ ಡೇವಿಡ್ ಡಿಸೋಜ ಅವರನ್ನು ಹತ್ಯೆಗೈಯ್ಯಲು ಉತ್ತರ ಪ್ರದೇಶ, ಜಾರ್ಖಂಡ್, ಬಿಹಾರದ ಶಾರ್ಪ್ ಶೂಟರ್ ಗಳಿಗೆ ಸುಪಾರಿ ನೀಡಲಾಗಿತ್ತು. ಅದರಂತೆ ಮೂವರ ತಂಡ ಮುದರಂಗಡಿಗೆ ಆಗಮಿಸಿ ಈ ಕೃತ್ಯ ಎಸಗಿ ಪರಾರಿಯಾಗಲು ಯತ್ನಿಸಿದೆ.

ಈ ಕುರಿತು ಮಿಂಚಿನ ಕಾರ್ಯಾಚರಣೆ ನಡೆಸಿದ ಉಡುಪಿ ಪೊಲೀಸರು ಆರೋಪಿಗಳನ್ನು ಉಡುಪಿ ಜಿಲ್ಲೆಯ ಗಡಿ ಪ್ರದೇಶವಾದ ಶಿರೂರು ಸಮೀಪ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇದರಲ್ಲಿ ಒಬ್ಬಾತನನ್ನು ರಾಜು ಎಂದು ಗುರುತಿಸಲಾಗಿದ್ದು ಉಳಿದವರು ಹಲವು ರೀತಿಯ ನಕಲಿ ಗುರುತಿನ ಚೀಟಿ ಹೊಂದಿದ್ದಾರೆ ಎಂದು ತಿಳಿದುಬಂದಿದೆ. ಇವರೆಲ್ಲರ ಹೆಸರು ಇನ್ನಷ್ಟೇ ಸ್ಪಷ್ಟವಾಗಿ ತಿಳಿದು ಬರಬೇಕಾಗಿದೆ.

ಇದೀಗ ಪೊಲೀಸರು ಹತ್ಯೆಗೆ ಸುಪಾರಿ ನೀಡಿದ ಪ್ರಮುಖ ಆರೋಪಿಗಳ ಪತ್ತೆಗಾಗಿ ತನಿಖೆ ಮುಂದುವರಿಸಿದ್ದಾರೆ.


Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News