ಪಟಾಕಿ ಮಳಿಗೆಗಳನ್ನು ತೆರೆಯಲು ಎಚ್ಚರಿಕೆಯಿಂದ ಅನುಮತಿ ನೀಡಿ: ಉಡುಪಿ ಡಿಸಿ ಡಾ. ವಿದ್ಯಾಕುಮಾರಿ
ಉಡುಪಿ, ಅ.11: ದೀಪಾವಳಿ ಸಂದರ್ಭದಲ್ಲಿ ಸಾರ್ವಜನಿಕರ ಸಂಚಾರ ವ್ಯವಸ್ಥೆಗೆ ಧಕ್ಕೆಯುಂಟಾಗದಂತೆ, ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡು, ಸೂಕ್ತ ಸ್ಥಳವನ್ನು ಗುರುತಿಸಿ, ತಾತ್ಕಾಲಿಕ ಪಟಾಕಿ ಅಂಗಡಿಗಳನ್ನು ತೆರೆಯಲು ಅನುಮತಿ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ಹೇಳಿದ್ದಾರೆ.
ಮಣಿಪಾಲದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯಲ್ಲಿ ದೀಪಾವಳಿ ಹಬ್ಬದ ಸಂದರ್ಭದಲ್ಲಿ ತಾತ್ಕಾಲಿಕ ಸುಡುಮದ್ದು ಮಾರಾಟ ಮಳಿಗೆಗಳನ್ನು ತೆರೆಯಲು ಅನುಮತಿ ನೀಡುವ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು.
ಸುಡುಮದ್ದು ಮಾರಾಟ ಮಳಿಗೆಗಳನ್ನು ತೆರೆಯಲು ಅನುಮತಿ ನೀಡುವ ಮೊದಲು ನಿಯೋಜಿಸಲಾದ ಅಧಿಕಾರಿಗಳು ಮಳಿಗೆ ತೆರೆಯುವ ಪ್ರದೇಶಗಳನ್ನು ಖುದ್ದು ಪರಿಶೀಲನೆ ನಡೆಸಬೇಕು. ಅಂಗಡಿ ಮುಂಗಟ್ಟುಗಳ ಸಮೀಪದಲ್ಲಿ ಮತ್ತು ಜನನಿಬಿಡ ಪ್ರದೇಶಗಳಲ್ಲಿ ಸಂಚಾರ ವ್ಯವಸ್ಥೆಗೆ ಸಮಸ್ಯೆಯಾಗುವುದು ಕಂಡು ಬಂದಲ್ಲಿ ಪಟಾಕಿ ಮಳಿಗೆ ತೆರೆಯಲು ಅನುಮತಿ ನೀಡಬಾರದು ಎಂದರು.
ಕಾರ್ಕಳ ಹಾಗೂ ಕುಂದಾಪುರ ಪುರಸಭಾ ವ್ಯಾಪ್ತಿಯಲ್ಲಿ ಈ ಹಿಂದಿನಂತೆ ಸಮಿತಿಗಳನ್ನು ರಚಿಸಿ, ಚೀಟಿ ಎತ್ತುವ ಮೂಲಕ ಸ್ಥಳ ಹಂಚಿಕೆ ಮಾಡುವಂತೆ ತಿಳಿಸಿದ ಅವರು, ಉಡುಪಿ ನಗರಸಭಾ ವ್ಯಾಪ್ತಿಯ ಮಲ್ಪೆ, ಸಂತೆಕಟ್ಟೆ, ಬೀಡಿನಗುಡ್ಡೆ, ಎಂ.ಜಿ.ಎಂ, ಮಣಿಪಾಲ ಹಾಗೂ ಅಂಬಲಪಾಡಿ ಪ್ರದೇಶ ಗಳಲ್ಲಿ ಪಟಾಕಿ ಮಳಿಗೆಗಳನ್ನು ತೆರೆಯುವಲ್ಲಿ ಸಂಚಾರ ವ್ಯವಸ್ಥೆಗೆ ತೊಂದರೆಯಾಗದಂತೆ ವಾಹನ ನಿಲುಗಡೆಗೆ ಅವಕಾಶವಿರುವ, ಜನವಸತಿ ಕಡಿಮೆ ಇರುವ ಪ್ರದೇಶದಲ್ಲಿ ನಿಯೋಜಿಸಲಾದ ಅಧಿಕಾರಿಗಳು ಸ್ಥಳವನ್ನು ಗುರುತಿಸಿ, ವ್ಯಾಪಾರ ನಡೆಸುವ ವ್ಯಕ್ತಿಗಳಿಗೆ ಹಂಚಿಕೆ ಮಾಡುವಂತೆ ತಿಳಿಸಿದರು.
ಪರವಾನಿಗೆ ಕೋರಿ ಅಕ್ಟೋಬರ್ 16ರ ಒಳಗೆ ಅರ್ಜಿಗಳನ್ನು ಸಲ್ಲಿಸ ಬಹುದು. ಸಂಬಂಧಪಟ್ಟ ಇಲಾಖೆಗಳು ವರದಿಗಳನ್ನು ಶೀಘ್ರ ಪಡೆದು ಅರ್ಜಿಗಳನ್ನು ವಿಲೇವಾರಿ ಮಾಡುವಂತೆ ತಿಳಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಮಮತಾದೇವಿ ಜಿ.ಎಸ್, ಎಎಸ್ಪಿ ಸಿದ್ಧಲಿಂಗಪ್ಪ, ನಗರಸಭೆ ಪೌರಾಯುಕ್ತ ರಾಯಪ್ಪ, ತಾಲೂಕು ತಹಶೀಲ್ದಾರ್ ಗಳು, ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು ಉಪಸ್ಥಿತರಿದ್ದರು.