ಭ್ರೂಣಲಿಂಗ ಪತ್ತೆ ಹಚ್ಚುವ ಸ್ಕ್ಯಾನಿಂಗ್ ಸೆಂಟರ್ಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ: ಉಡುಪಿ ಡಿಸಿ ವಿದ್ಯಾಕುಮಾರಿ
ಉಡುಪಿ, ಆ.30: ಉಡುಪಿ ಜಿಲ್ಲೆಯಲ್ಲಿ ಹೆಣ್ಣು ಗಂಡಿನ ಅನುಪಾತದಲ್ಲಿ ಸಾಕಷ್ಟು ಅಂತರ ಕಂಡುಬರುತ್ತಿರುವುದು ಆತಂಕರಾಗಿ ವಿಚಾರವಾಗಿದೆ. ಆದುದರಿಂದ ಗರ್ಭಪೂರ್ವ ಮತ್ತು ಪ್ರಸವ ಪೂರ್ವ ಭ್ರೂಣಲಿಂಗ ಪತ್ತೆ ಬಗ್ಗೆ ಯಾವುದೇ ಸ್ಕ್ಯಾನಿಂಗ್ ಸೆಂಟರ್ ಅಥವಾ ವೈದ್ಯರ ವಿರುದ್ಧ ದೂರು ಬಂದರೆ ನಿರ್ದಾಕ್ಷಿಣ್ಯವಾಗಿ ಕಟ್ಟುನಿಟ್ಟಿನ ಕಾನೂನು ಕ್ರಮ ಜರಗಿಸಲಾಗುವುದು. ಅಲ್ಲದೆ ಈ ಕೃತ್ಯ ಎಸಗಿರುವುದು ಸಾಕ್ಷ್ಯ ಸಮೇತ ಸಾಬೀತಾದರೆ ಆ ಸೆಂಟರ್ಗಳ ಪರವಾನಿಗೆ ಯನ್ನೇ ರದ್ದುಗೊಳಿಸಲಾಗುತ್ತದೆ ಎಂದು ಉಡುಪಿ ಜಿಲ್ಲಾಧಿಕಾರಿ ಡಾ.ವಿದ್ಯಾ ಕುಮಾರಿ ತಿಳಿಸಿದ್ದಾರೆ.
ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸಕ್ಷಮ ಪ್ರಾಧಿಕಾರ ಪಿಸಿ ಮತ್ತು ಪಿಎನ್ಡಿಟಿ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರಿಗಳ ಸಂಯುಕ್ತ ಆಶ್ರಯದಲ್ಲಿ ಉಡುಪಿ ಜಿಪಂ ಸಭಾಂಗಣದಲ್ಲಿ ಬುಧವಾರ ಆಯೋಜಿಸಲಾದ ಜಿಲ್ಲಾ ಪಿಸಿ ಆ್ಯಂಡ್ ಪಿಎನ್ಡಿ ನೊಂದಾಯಿತ ಸಂಸ್ಥೆಗಳ ಮಾಲಕರು/ವೈದ್ಯರಿಗೆ ಗರ್ಭಪೂರ್ವ ಮತ್ತು ಪ್ರಸವ ಪೂರ್ವ ಭ್ರೂಣಲಿಂಗ ಪತ್ತೆ ಕಾಯಿದೆ ಕುರಿತ ಸಭೆಯಲ್ಲಿ ಅವರು ಕಿರು ಹೊತ್ತಿಗೆ ಬಿಡುಗಡೆಗೊಳಿಸಿ ಮಾತನಾಡುತಿದ್ದರು.
ಜಿಲ್ಲೆಯಲ್ಲಿ ಹೆಣ್ಣು ಗಂಡಿನ ಅನುಪಾತವೂ ತೃಪ್ತಿದಾಯಕವಾಗಿಲ್ಲ. 2016- 17ರಲ್ಲಿ 1000 ಗಂಡಿಗೆ 929 ಹೆಣ್ಣು, 2020-21ರಲ್ಲಿ 1000-950, 2022-23ರಲ್ಲಿ 1000-967 ಇದ್ದಾರೆ. ಇದನ್ನು ಅವಲೋಕಿಸಿದಾಗ ನಮ್ಮಲ್ಲಿ ಲೋಪಗಳು ಆಗುತ್ತಿರುವುದು ಕಂಡುಬರುತ್ತದೆ. ಇದು ಗಂಭೀರವಾದ ವಿಚಾರ ವಾಗಿದೆ. ನಮ್ಮಲ್ಲಿರುವ ಯಾವುದೇ ಸ್ಕ್ಯಾನಿಂಗ್ ಸೆಂಟರ್ಗಳಲ್ಲಿ ಲಿಂಗ ಪತ್ತೆ ಹಚ್ಚುವ ಕಾರ್ಯ ಆಗಬಾರದು. ಆ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗಬೇಕಾಗಿದೆ ಎಂದು ಅವರು ಹೇಳಿದರು.
ನಾವು ಕಾನೂನಾತ್ಮಕ ಕ್ರಮ ಕೈಗೊಳ್ಳುವ ಮೊದಲು ಅರಿವು ಮೂಡಿಸುವುದು ನಮ್ಮ ಕರ್ತವ್ಯ. ಸ್ಕ್ಯಾನಿಂಗ್ ಸೆಂಟರ್ಗಳು ತಮ್ಮಲ್ಲಿರುವ ಲೋಪಗಳನ್ನು ಕೂಡಲೇ ಸರಿಪಡಿಸಿಕೊಳ್ಳಬೇಕು. ಅದನ್ನು ಸರಿಪಡಿಸದಿದ್ದರೆ ಜಿಲ್ಲಾಡಳಿತವೇ ಕಾನೂನು ಕೈಗೆತ್ತಿಕೊಳ್ಳಬೇಕಾಗುತ್ತದೆ. ಆ ಅಕ್ರಮದಿಂದ ಯಾರು ಕೂಡ ಯಾವುದೇ ಸಾಧನೆ ಮಾಡಲು ಆಗುವುದಿಲ್ಲ. ಇದು ಇಡೀ ನಾಗರಿಕ ಸಮಾಜ ತಲೆತಗ್ಗಿಸುವ ವಿಚಾರವಾಗಿದೆ ಎಂದರು.
ಸಮಾಜದಲ್ಲಿ ಜವಾಬ್ದಾರಿಯುತ ನಾಗರಿಕರಾಗಿ ನಾವು ಇಂತಹ ಸೆಂಟರ್ ಗಳಿಂದ ಕೇವಲ ಹಣ ಸಂಪಾದನೆ ಮಾತ್ರ ಗುರಿಯಾಗಬಾರದು. ಅದರ ಬದಲು ಭ್ರೂಣ ಪತ್ತೆ ಹಚ್ಚಲು ಬರುವ ಪೋಷಕರಿಗೆ ಆ ಕುರಿತು ತಿಳಿ ಹೇಳುವ ಕಾರ್ಯ ಮಾಡಬೇಕು. ಆ ಮೂಲಕ ಅವರಿಗೆ ಅವರ ತಪ್ಪಿನ ಬಗ್ಗೆ ಅರಿವು ಮೂಡಿಸ ಬೇಕು. ಇದು ಎಲ್ಲರ ಜವಾಬ್ದಾರಿಯಾಗಿದೆ. ಇದರೊಂದಿಗೆ ನಮ್ಮ ಬದ್ಧತೆಯನ್ನು ತೋರಿಸಬೇಕು. ಈ ವಿಚಾರದಲ್ಲಿ ಎಲ್ಲರು ಮರು ಚಿಂತನೆ ಮಾಡಬೇಕು ಎಂದು ಅವರು ಹೇಳಿದರು.
ಆರೋಗ್ಯ ಕ್ಷೇತ್ರದಲ್ಲಿ ಆಧುನಿಕ ತಂತ್ರಜ್ಞಾನಗಳು ಅತೀ ಅಗತ್ಯ ಎಂಬ ಉದ್ದೇಶ ದೊಂದಿಗೆ ಜಿಲ್ಲೆಯಲ್ಲಿ ಹೊಸ ಸ್ಕ್ಯಾನಿಂಗ್ ಸೆಂಟರ್ಗಳಿಗೆ ಅನುಮತಿಯನ್ನು ನೀಡಿದ್ದೇವೆ. ಯಾವುದನ್ನು ನಾವು ತಡೆ ಹಿಡಿದಿಲ್ಲ. ಆದುದರಿಂದ ಆ ಅನುಮತಿ ದುರ್ಬಳಕೆ ಆಗಬಾರದು. ಹೊಸದಾಗಿ ಸ್ಥಾಪನೆಗೊಂಡ ಸೆಂಟರ್ಗಳು ಬಹಳ ಎಚ್ಚರದಿಂದ ಕಾರ್ಯನಿರ್ವಹಿಸಬೇಕಾಗಿದೆ. ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಈ ಮೂಲಕ ಜಿಲ್ಲಾಡಳಿತಕ್ಕೆ ಪೂರಕವಾಗಿ ಸಹಕಾರ ನೀಡಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರಿ ಸದಸ್ಯ ಕಾರ್ಯದರ್ಶಿ ಹಾಗೂ ನ್ಯಾಯಾಧೀಶೆ ಶರ್ಮಿಳಾ ಮಾತನಾಡಿ, ಇತ್ತೀಚೆಗೆ ಉಡುಪಿ ಜಿಲ್ಲೆಯಲ್ಲಿ ಪೋಕ್ಸೋ ಪ್ರಕರಣಗಳು ಹೆಚ್ಚಾಗುತ್ತಿರುವುದು ಶೋಚನೀಯ ಸಂಗತಿ. ಕೆಲವು ಅಪ್ರಾಪ್ತೆ ಗರ್ಭಿಣಿಯರು ಸ್ಕ್ಯಾನಿಂಗ್ ಸೆಂಟರ್ಗಳಿಂದ ಬಂದರೆ ಸಂಬಂಧಪಟ್ಟ ವರು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಬೇಕು. ಇಲ್ಲದಿದ್ದರೆ ಈ ಪ್ರಕರಣದಲ್ಲಿ ಸೆಂಟರ್ನವರು ಕೂಡ ಅಪರಾಧಿಗಳಾಗುತ್ತಾರೆ ಎಂದರು.
ಗರ್ಭಪೂರ್ವ ಮತ್ತು ಪ್ರಸವ ಪೂರ್ವ ಭ್ರೂಣಲಿಂಗ ಪತ್ತೆ ಕಾಯಿದೆ ಉಲ್ಲಂಘಿಸುವವರಿಗೆ 3 ವರ್ಷಗಳ ಕಾರಾಗೃಹ ಶಿಕ್ಷೆ ಮತ್ತು 10ಸಾವಿರ ದಂಡ ಮತ್ತು ಎರಡನೇ ಬಾರಿ ತಪ್ಪು ಮಾಡಿದರೆ 5 ವರ್ಷ ಕಾರಾಗೃಹ ಶಿಕ್ಷೆ ಮತ್ತು 50ಸಾವಿರ ರೂ. ದಂಡ ವಿಧಿಸಲು ಕಾನೂನಿನಲ್ಲಿ ಅವಕಾಶ ಇದೆ ಎಂದು ಅವರು ಮಾಹಿತಿ ನೀಡಿದರು.
ಸ್ತ್ರೀರೋಗ ತಜ್ಞೆ ಡಾ.ಶಶಿಕಲಾ ಭಟ್ ಗರ್ಭಪೂರ್ವ ಮತ್ತು ಪ್ರಸವ ಪೂರ್ವ ಭ್ರೂಣಲಿಂಗ ಪತ್ತೆ ಕಾಯಿದೆ ಕುರಿತು ಮಾಹಿತಿ ನೀಡಿದರು. ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಚ್.ಪ್ರಸನ್ನ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಾಗಭೂಷಣ ಉಡುಪ, ಸಲಹಾ ಸಮಿತಿ ಅಧ್ಯಕ್ಷ ಡಾ.ಪ್ರತಾಪ್ ಕುಮಾರ್ ಉಪಸ್ಥಿತರಿದ್ದರು. ಕುಟುಂಬ ಕಲ್ಯಾಣಾಧಿ ಕಾರಿ ಡಾ.ರಾಮರಾವ್ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.
ಅಕ್ರಮ ವ್ಯವಸ್ಥಿತ ಜಾಲದ ಬಗ್ಗೆ ಎಚ್ಚರ
ಹೆಣ್ಣು ಮಕ್ಕಳ ಅಕ್ರಮ ಮಾರಾಟ, ಅಪಹರಣ, ಕಳವು ಪ್ರಕರಣಗಳು ಸಮಾಜದಲ್ಲಿ ಹೆಚ್ಚಾಗಿ ನಡೆಯುತ್ತಿವೆ. ಈ ರೀತಿಯ ಅಕ್ರಮ ಜಾಲ ವ್ಯವಸ್ಥಿತ ವಾಗಿ ಕಾರ್ಯಾಚರಿಸುತ್ತಿದೆ. ಇದರ ಬಗ್ಗೆಯೂ ನಾವು ಜಾಗೃತರಾಗಿರ ಬೇಕಾಗುತ್ತದೆ ಎಂದು ಜಿಲ್ಲಾಧಿಕಾರಿ ಡಾ.ವಿದ್ಯಾ ಕುಮಾರಿ ತಿಳಿಸಿದರು.
ಹೆಣ್ಣು ಮಕ್ಕಳ ಸಂಖ್ಯೆ ಕಡಿಮೆ ಆಗುತ್ತಿರುವುದರಿಂದ ಮುಂದೆ ಸಾಮಾಜಿಕ ಅಸಮಾನತೋಲನ ಸೃಷ್ಠಿಯಾಗಿ ಸಮಸ್ಯೆಗಳು ಉದ್ಭವಿಸಬಹುದು. ಮದುವೆಗೆ ಹೆಣ್ಣು ಮಕ್ಕಳೇ ಸಿಗದ ಪರಿಸ್ಥಿತಿ ನಿರ್ಮಾಣವಾಗಿದೆ. ಇದಕ್ಕೆ ಮುಖ್ಯ ಕಾರಣ ಹೆಣ್ಣು ಮಕ್ಕಳ ನಾಪತ್ತೆ ಹಾಗೂ ಹೆಣ್ಣು ಭ್ರೂಣ ಹತ್ಯೆಗಳು. ಈ ಅಸಮಾತೋಲನ ಜಾಸ್ತಿಯಾಗದಂತೆ ತಡೆಯುವುದು ಎಲ್ಲರ ಜವಾಬ್ದಾರಿಯಾಗಿದೆ ಎಂದರು.