ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ| ಸೆ.15ಕ್ಕೆ ಬೃಹತ್ ಮಾನವ ಸರಪಳಿ: ಡಿಸಿ ವಿದ್ಯಾಕುಮಾರಿ
ಉಡುಪಿ, ಆ.31: ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಜನ ಸಾಮಾನ್ಯರ ನಡುವೆ ಪಸರಿಸಲು ಬೃಹತ್ ಮಾನವ ಸರಪಳಿಯನ್ನು ಸೆ. 15ರಂದು ಒಂದು ಲಕ್ಷಕ್ಕೂ ಹೆಚ್ಚು ಜನರು ನಿರ್ಮಿಸಲಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ಹೇಳಿದ್ದಾರೆ.
ಶನಿವಾರ ಮಣಿಪಾಲ ಜಿಲ್ಲಾ ಪಂಚಾಯತ್ನ ಡಾ.ವಿ.ಎಸ್.ಆಚಾರ್ಯ ಸಭಾಂಗಣದಲ್ಲಿ ನಡೆದ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ಜಿಲ್ಲೆಯಾದ್ಯಂತ ಮಾನವ ಸರಪಳಿ ಆಯೋಜಿಸುವ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.
ವಿಶ್ವದಲ್ಲಿಯೇ ಅತಿ ದೊಡ್ಡ ಪ್ರಜಾಪ್ರಭುತ್ವವನ್ನು ನಾವು ಹೊಂದಿದ್ದೇವೆ. ಯುವ ಪೀಳಿಗೆಗೆ ಪ್ರಜಾಪ್ರಭುತ್ವದ ಮೌಲ್ಯಾನು ಸಾರ ಸಶಕ್ತವಾಗಲು ಪ್ರಜಾಪ್ರಭುತ್ವದ ಮೌಲ್ಯಗಳ ಕುರಿತು ಜಾಗೃತಿ ಮೂಡಿಸುವುದು ಅಗತ್ಯ. ಸರಕಾರ ಬೃಹತ್ ಮಾನವ ಸರಪಳಿಯನ್ನು ಸೆಪ್ಟಂಬರ್ 15ರಂದು ಬೀದರ್ನಿಂದ ಚಾಮರಾಜನಗರದವರೆಗೆ ನಿರ್ಮಿಸಿ, ಪ್ರಜಾಪ್ರಭುತ್ವದ ಮೌಲ್ಯಗಳನ್ನು ದಾರಿಯುದ್ದಕ್ಕೂ ಪಸರಿಸುವ ಮೂಲಕ ಭಿನ್ನವಾಗಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನು ಆಚರಿಸಲು ನಿರ್ಧರಿಸಲಾಗಿದೆ ಎಂದರು.
ಇದರ ಭಾಗವಾಗಿ ಜಿಲ್ಲೆಯಲ್ಲಿ ಅರ್ಥಪೂರ್ಣವಾಗಿ ಮಾನವ ಸರಪಳಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲು ಉದ್ದೇಶಿಸಿದ್ದು, ಜಿಲ್ಲೆಯ ಗಡಿ ಭಾಗಗಳಾದ ಬೈಂದೂರು ತಾಲೂಕಿನ ಶಿರೂರು ಗ್ರಾಮದಿಂದ ಕಾಪು ತಾಲೂಕಿನ ಹೆಜಮಾಡಿ ಗ್ರಾಮ ದವರೆಗೆ 26 ಗ್ರಾಮ ಪಂಚಾಯತ್ಗಳಲ್ಲಿ 100 ಕಿ.ಮೀ.ವರೆಗೆ ಒಂದು ಲಕ್ಷಕ್ಕೂ ಹೆಚ್ಚು ಜನ ಇದರಲ್ಲಿ ಭಾಗವಹಿಸಿ, ಮಾನವಸರಪಳಿ ನಿರ್ಮಿಸಲಿದ್ದಾರೆ. ಜಿಲ್ಲೆಯ ಯುವಜನತೆ, ಸಾರ್ವಜನಿಕರು, ಸಂಘ-ಸಂಸ್ಥೆಗಳು, ಜನಪ್ರತಿನಿಧಿಗಳು, ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರ ಸಹಭಾಗಿತ್ವದಲ್ಲಿ ಇದನ್ನು ಆಯೋಜಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಸಂವಿಧಾನ ಪೀಠಿಕೆ ಬೋಧನೆ: ಮಾನವ ಸರಪಳಿ ನಿರ್ಮಾಣಕ್ಕೆ ಪ್ರತೀ 100 ಮೀ.ಗೆ ಒಬ್ಬರಂತೆ ಮೇಲ್ವಿಚಾರಕರನ್ನು ನೇಮಿಸಬೇಕು. ತಾಲೂಕು ಮಟ್ಟದಲ್ಲಿ ತಹಶೀಲ್ದಾರ್ಗಳು ಇದರ ಉಸ್ತುವಾರಿ ವಹಿಸಬೇಕು. ಮಾನವ ಸರಪಳಿ ಕಾರ್ಯ ಕ್ರಮದ ನಂತರ ಸಂವಿಧಾನದ ಪೀಠಿಕೆಯನ್ನು ಬೋಧಿಸಲಾಗುವುದು ಎಂದ ಅವರು, ಮಾನವ ಸರಪಳಿಯಲ್ಲಿ ಭಾಗವಹಿ ಸುವ ಪ್ರತಿಯೊಬ್ಬರಿಗೂ ಕುಡಿಯುವ ನೀರು, ತಂಪು ಪಾನೀಯ, ಸಿಹಿತಿಂಡಿ ವಿತರಿಸಲು ಸಿದ್ಧತೆ ಮಾಡಿಕೊಳ್ಳಬೇಕು ಎಂದರು.
ಮಾನವ ಸರಪಳಿ ಕಾರ್ಯಕ್ರಮದಲ್ಲಿ ನೋಂದಣಿ ಮಾಡಿಕೊಳ್ಳಲು ಆನ್ಲೈನ್ ವ್ಯವಸ್ಥೆ ಕಲ್ಪಿಸಲಾಗುವುದು. ಈ ಕಾರ್ಯ ಕ್ರಮದಲ್ಲಿ ಭಾಗವಹಿಸಿದವರಿಗೆ ಭಾವಚಿತ್ರವನ್ನು ಒಳಗೊಂಡ ಪ್ರಮಾಣಪತ್ರವನ್ನು ವಿತರಿಸಲಾಗುವುದು. ಸಾರ್ವಜನಿಕರು, ಸಂಘಸಂಸ್ಥೆಗಳು, ಹೆಚ್ಚಿನ ಸಂಖ್ಯೆ ಯಲ್ಲಿ ಇದರಲ್ಲಿ ಭಾಗವಹಿಸಬೇಕು ಎಂದು ಅವರು ಮನವಿ ಮಾಡಿದರು.
ತುರ್ತು ಸೇವೆಗಾಗಿ ಆರೋಗ್ಯ ಇಲಾಖೆಯಿಂದ ವೈದ್ಯರನ್ನು ಒಳಗೊಂಡ ಚಿಕಿತ್ಸಾ ಸೌಲಭ್ಯವಿರುವ ಅಂಬುಲೆನ್ಸ್ ವ್ಯವಸ್ಥೆ ಯನ್ನು ಅಲ್ಲಲ್ಲಿ ಇರಿಸಬೇಕು. ಪೊಲೀಸ್ ಇಲಾಖೆಯಿಂದ ಸೂಕ್ತ ಬಂದೋಬಸ್ತ್ ವ್ಯವಸ್ಥೆಯನ್ನು ಕಲ್ಪಿಸಬೇಕು. ವಿವಿಧ ಸಂಘ-ಸಂಸ್ಥೆಗಳ ಸಹಭಾಗಿತ್ವದಲ್ಲಿ ನಡೆಯುತ್ತಿರುವ ಈ ಕಾರ್ಯಕ್ರಮ ದಲ್ಲಿ ಶಾಲಾ-ಕಾಲೇಜು ವಿದ್ಯಾರ್ಥಿಗಳು ಸಕ್ರಿಯವಾಗಿ ಭಾಗವಹಿಸುವಂತೆ ನೋಡಿಕೊಳ್ಳಲು ಸೂಚನೆ ನೀಡಿದರು.
ಜಿಲ್ಲಾ ಮಟ್ಟದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದೆ. ಇದರಲ್ಲಿ ಶಿಷ್ಟಾಚಾರದಂತೆ ಜನಪ್ರತಿನಿಧಿಗಳು ಭಾಗವಹಿಸಲು ಆಹ್ವಾನಿಸಬೇಕು. ಕಾರ್ಯಕ್ರಮದಲ್ಲಿ ಮ್ಯೂಸಿಕ್ ಬ್ಯಾಂಡ್ಸೆಟ್, ಟ್ಯಾಬ್ಲೋಗಳು, ಸಾಂಸ್ಕೃತಿಕ ಕಲಾತಂಡಗಳು, ಶಾಲಾ-ಕಾಲೇಜು ವಿದ್ಯಾರ್ಥಿಗಳು, ಸಾರ್ವಜನಿಕರು ಭಾಗವಹಿಸಲಿದ್ದು, ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಸೂಚನೆ ನೀಡಿದರು.
ಪ್ರಜಾಪ್ರಭುತ್ವ ದಿನಾಚರಣೆ ಕುರಿತು ವ್ಯಾಪಕ ಪ್ರಚಾರ ನೀಡಿ ಹೆಚ್ಚು ಜನರು ಇದರಲ್ಲಿ ಭಾಗವಹಿಸುವಂತೆ ನೋಡಿಕೊ ಳ್ಳಬೇಕು. ಇದಕ್ಕಾಗಿ ಸಾಮಾಜಿಕ ಜಾಲತಾಣಗಳನ್ನು ಬಳಕೆ ಮಾಡಿಕೊಳ್ಳಬೇಕು ಎಂದ ಅವರು, ತಾಲೂಕು ಮಟ್ಟದ ಲ್ಲಿಯೂ ಸಮಿತಿಗಳನ್ನು ರಚಿಸಿ, ಕಾರ್ಯಕ್ರಮದ ಯಶಸ್ವಿಗೆ ಅಗತ್ಯ ಸಿದ್ಧತೆಗಳ ಕುರಿತು ಚರ್ಚಿಸಿ, ಕಾರ್ಯಕ್ರಮ ಯಶಸ್ವಿ ಆಗುವಂತೆ ನೋಡಿಕೊಳ್ಳಬೇಕು ಎಂದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಮಮತಾದೇವಿ ಜಿ.ಎಸ್, ಸಿದ್ಧಲಿಂಗಪ್ಪ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಅನಿತಾ ಮಡ್ಲೂರು, ಪೌರಾಯುಕ್ತ ರಾಯಪ್ಪ, ವಿವಿಧ ಜಿಲ್ಲಾ ಮಟ್ಟದ ಅನುಷ್ಠಾನಾಧಿಕಾರಿಗಳು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಮತ್ತಿತರು ಉಪಸ್ಥಿತರಿದ್ದರು.