×
Ad

ಕಾರ್ಕಳ : ರಸ್ತೆ ಗುಂಡಿಯಲ್ಲಿ ಗಿಡ ನೆಟ್ಟು ಪ್ರತಿಭಟನೆ

Update: 2026-07-06 14:36 IST

ಕಾರ್ಕಳ: ರಸ್ತೆ ಹದಗೆಟ್ಟು ವಾಹನ ಸಂಚಾರವೇ ಅಸಾಧ್ಯವಾಗಿರುವ ಹಿನ್ನೆಲೆಯಲ್ಲಿ ಪುರಸಭೆ ಹಾಗೂ ಜನಪ್ರತಿನಿಧಿಗಳಿಗೆ ಸಾರ್ವಜನಿಕರು ಹಲವು ಬಾರಿ ಅಹವಾಲು ಸಲ್ಲಿಸಿದರೂ ಯಾವುದೇ ಪ್ರಯೋಜನವಾಗದ ಕಾರಣ, ಸಾರ್ವಜನಿಕರೇ ರಸ್ತೆ ಮಧ್ಯದ ಗುಂಡಿಗಳಲ್ಲಿ ಬಾಳೆ ಗಿಡ ನೆಟ್ಟು ಪ್ರತಿಭಟನೆ ನಡೆಸಿದ ಘಟನೆ ಕಾರ್ಕಳ ಪುರಸಭೆ ವ್ಯಾಪ್ತಿಯ ಕಲ್ಲೊಟ್ಟೆ-ಬಂಡಿಮಠ ರಸ್ತೆಯಲ್ಲಿ ನಡೆದಿದೆ.

ಕಾರ್ಕಳ ಮಾರ್ಕೆಟ್ ರಸ್ತೆಯಿಂದ ಪೆರ್ವಾಜೆ, ಕಲ್ಲೊಟ್ಟೆ ಮೂಲಕ ಬಂಡಿಮಠಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ತೀವ್ರ ಹದಗೆಟ್ಟಿದ್ದು, ವಾಹನ ಸಂಚಾರ ಮಾತ್ರವಲ್ಲದೆ ಜನಸಂಚಾರಕ್ಕೂ ತೊಂದರೆಯಾಗುವ ಸ್ಥಿತಿ ನಿರ್ಮಾಣವಾಗಿದೆ.

ಕಾರ್ಕಳದಿಂದ ಉಡುಪಿ ಹಾಗೂ ಹೆಬ್ರಿ ಕಡೆಗೆ ಸಂಚರಿಸುವ ಬಸ್‌ಗಳಿಗೆ ಈ ರಸ್ತೆ ಪ್ರಮುಖ ಸಂಪರ್ಕ ಮಾರ್ಗವಾಗಿದೆ. ಆದರೆ ರಸ್ತೆ ತುಂಬ ಗುಂಡಿಗಳು ಉಂಟಾಗಿರುವುದರಿಂದ ಭಾರೀ ವಾಹನಗಳು ಪ್ರಯಾಸಪಟ್ಟು ಸಂಚರಿಸುತ್ತಿದ್ದು, ಲಘು ವಾಹನಗಳು, ತ್ರಿಚಕ್ರ ವಾಹನಗಳು ಹಾಗೂ ದ್ವಿಚಕ್ರ ವಾಹನಗಳ ಸಂಚಾರ ಬಹುತೇಕ ಅಸಾಧ್ಯವಾಗಿದೆ ಎಂದು ಸಾರ್ವಜನಿಕರು ದೂರಿದ್ದಾರೆ.

ಸುಮಾರು ಒಂದು ವರ್ಷದಿಂದ ಅಮೃತ್ ಯೋಜನೆಯಡಿ ಈ ರಸ್ತೆಯಲ್ಲಿ ಪೈಪ್‌ಲೈನ್ ಕಾಮಗಾರಿ ನಡೆಯುತ್ತಿದ್ದು, ಮುಖ್ಯ ಕೊಳವೆ ಅಳವಡಿಸಲು ರಸ್ತೆ ಅಗೆದು ಬಳಿಕ ಮಣ್ಣು ಮುಚ್ಚಲಾಗಿದೆ. ಆದರೆ ಕಾಮಗಾರಿ ಸಮರ್ಪಕವಾಗಿ ಪೂರ್ಣಗೊಳಿಸದ ಕಾರಣ ರಸ್ತೆ ಅಲ್ಲಲ್ಲಿ ಕುಸಿದು ಗುಂಡಿಗಳು ನಿರ್ಮಾಣವಾಗಿವೆ. ಅಳವಡಿಸಿರುವ ಪೈಪ್‌ಲೈನ್‌ಗಳು ಪದೇ ಪದೇ ಸೋರಿಕೆಯಾಗುತ್ತಿದ್ದು, ಮರು ದುರಸ್ತಿ ಕಾಮಗಾರಿ ನಡೆಯುತ್ತಿರುವುದು ಸಾಮಾನ್ಯವಾಗಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ರಸ್ತೆ ಬದಿಯ ಚರಂಡಿಯ ಮೋರಿಯನ್ನೂ ಅಗೆದು ಹಾಕಲಾಗಿದ್ದು, ಕಾಮಗಾರಿ ನಿರ್ವಹಿಸುತ್ತಿರುವ ಗುತ್ತಿಗೆದಾರರು ಹಾಗೂ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳದ ಕಾರಣ ಮಳೆ ನೀರು ರಸ್ತೆಯಲ್ಲೇ ಹರಿದು ರಸ್ತೆ ಮತ್ತಷ್ಟು ಹದಗೆಟ್ಟಿದೆ ಎಂದು ಸಾರ್ವಜನಿಕರು ತಿಳಿಸಿದ್ದಾರೆ.

ಅಮೃತ್ ಯೋಜನೆ ಕಾಮಗಾರಿ ಸಮರ್ಪಕವಾಗಿ ನಡೆಯುತ್ತಿಲ್ಲ ಎಂಬ ದೂರುಗಳು ಹಲವು ಬಾರಿ ಬಂದಿದ್ದರೂ, ಪುರಸಭೆ ಹಾಗೂ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಅಧಿಕಾರಿಗಳು ನಿರ್ಲಕ್ಷ್ಯ ವಹಿಸುತ್ತಿದ್ದಾರೆ ಎಂದು ಆರೋಪಿಸಿ ಸಾರ್ವಜನಿಕರು ರಸ್ತೆಗಿಳಿದು ಪ್ರತಿಭಟನೆ ನಡೆಸಿದರು.

ಈ ರಸ್ತೆಯಲ್ಲಿ ಈಗಾಗಲೇ ಹಲವು ವಿದ್ಯಾರ್ಥಿಗಳು, ಮಹಿಳೆಯರು ಹಾಗೂ ದ್ವಿಚಕ್ರ ವಾಹನ ಸವಾರರು ಬಿದ್ದು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆಗಳು ನಡೆದಿವೆ. ಆದರೂ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಸಮಸ್ಯೆ ಪರಿಹರಿಸಲು ಮುಂದಾಗಿಲ್ಲ ಎಂದು ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ತಕ್ಷಣ ರಸ್ತೆ ದುರಸ್ತಿ ಕಾಮಗಾರಿ ಕೈಗೊಂಡು ಸಾರ್ವಜನಿಕರ ಸಂಚಾರಕ್ಕೆ ಅನುಕೂಲ ಕಲ್ಪಿಸಬೇಕು ಎಂದು ಆಗ್ರಹಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News