ಕಾರ್ಕಳ| ಪತ್ನಿಯ ಕೊಲೆ ಪ್ರಕರಣ: ಆರೋಪಿ ಪತಿಯ ಬಂಧನ
ಕಾರ್ಕಳ, ಫೆ.2: ಪತಿಯ ಹಲ್ಲೆಯಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಪತ್ನಿ ಮೃತಪಟ್ಟಿದ್ದು, ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕೊಲೆಯತ್ನ ಪ್ರಕರಣವನ್ನು ಕೊಲೆ ಪ್ರಕರಣವಾಗಿ ಪರಿವರ್ತಿಸಲಾಗಿದೆ. ಆರೋಪಿ ಪತಿಯನ್ನು ಈಗಾಗಲೇ ಬಂಧಿಸಲಾಗಿದೆ.
ಕಾರ್ಕಳ ನೂರಾಳ್ಬೆಟ್ಟು ಗ್ರಾಮದ ಗುಮ್ಮೆತ್ತು ನಿವಾಸಿ ಸುನೀಲ್ ಕುಮಾರ್(44) ಬಂಧಿತ ಆರೋಪಿ. ಈತ ಹಾಗೂ ಆತನ ಪತ್ನಿ ಗೀತಾ ಮಧ್ಯೆ ಜ.27ರಂದು ಬೆಳಗ್ಗೆ ಕೌಟುಂಬಿಕ ವಿಚಾರದಲ್ಲಿ ಗಲಾಟೆ ನಡೆದಿತ್ತು. ಈ ವೇಳೆ ಸುನೀಲ್ ಕುಮಾರ್ ತನ್ನ ಪತ್ನಿಯನ್ನು ಕೊಲೆ ಮಾಡುವ ಉದ್ದೇಶದಿಂದ ಆಯುಧದಿಂದ ಗೀತಾ ಅವರಿಗೆ ಹೊಡೆದು ಹಲ್ಲೆ ಮಾಡಿದ್ದನು. ಇದರಿಂದ ಗಂಭೀರವಾಗಿ ಗಾಯಗೊಂಡಿದ್ದ ಗೀತಾ ಮಂಗಳೂರಿನ ಖಾಸಗಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ನಡೆಸಿದ ಪೊಲೀಸರು ಆರೋಪಿ ಸುನೀಲ್ ಕುಮಾರ್ ನನ್ನು ಬಂಧಿಸಿ, ನ್ಯಾಯಾಯಕ್ಕೆ ಹಾಜರು ಪಡಿಸಿದ್ದರು. ನ್ಯಾಯಾಲಯವು ಆರೋಪಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿತ್ತು.
ಗಂಭೀರ ಸ್ಥಿತಿಯಲ್ಲಿದ್ದ ಗೀತಾ, ಚಿಕಿತ್ಸೆಗೆ ಸ್ಪಂದಿಸದೆ ಫೆ.2ರಂದು ಬೆಳಗಿನ ಜಾವ 5:46ರ ಸುಮಾರಿಗೆ ಆಸ್ಪತ್ರೆಯಲ್ಲಿ ಮೃತಪಟ್ಟರು. ಈ ಹಿನ್ನೆಲೆಯಲ್ಲಿ ಠಾಣೆಯಲ್ಲಿ ಈಗಾಗಲೇ ದಾಖಲಾದ ಕೊಲೆಗೆ ಯತ್ನ ಪ್ರಕರಣವನ್ನು ಕೊಲೆ ಪ್ರಕರಣ ವಾಗಿ ಪರಿವರ್ತಿಸಿದ್ದು, ಅದರಂತೆ ತನಿಖೆ ನಡೆಸಲಾಗುತ್ತಿದೆ ಎಂದು ಎಸ್ಪಿ ಹರಿರಾಂ ಶಂಕರ್ ತಿಳಿಸಿದ್ದಾರೆ.