ಕವಿ ಕೂರಾಡಿ ಸೀತಾರಾಮ ಅಡಿಗ ಕಾವ್ಯ ಪ್ರಶಸ್ತಿ ಪ್ರದಾನ
ಉಡುಪಿ: ಅಂಬಲಪಾಡಿ ಶ್ರೀಜನಾರ್ದನ ಮತ್ತು ಮಹಾಕಾಳಿ ದೇವಸ್ಥಾನದ ಆಶ್ರಯದಲ್ಲಿ ಸಂಸ್ಕೃತಿ ವಿಶ್ವ ಪ್ರತಿಷ್ಠಾನ ಮತ್ತು ವಿಶ್ವಭಾರತಿ ಕರ್ನಾಟಕ ಪ್ರತಿಷ್ಠಾನ ಬೆನಗಲ್ ವತಿಯಿಂದ ಕವಿ ಕುರಾಡಿ ಸೀತಾರಾಮ ಅಡಿಗ ಕಾವ್ಯ ಪ್ರಶಸ್ತಿ ಪ್ರದಾನ, ಪುಸ್ತಕ ಮತ್ತು ಸಾಕ್ಷ ಚಿತ್ರ ಬಿಡುಗಡೆ ಕಾರ್ಯಕ್ರಮ ಅಂಬಲಪಾಡಿ ಭವಾನಿ ಮಂಟಪದಲ್ಲಿ ರವಿವಾರ ಜರಗಿತು.
ಕಾರ್ಯಕ್ರಮವನ್ನು ಉದ್ಘಾಟಿಸಿದ ಅಂಬಲಪಾಡಿ ದೇವಸ್ಥಾನದ ಧರ್ಮ ದರ್ಶಿ ಡಾ.ನಿ.ಬಿ.ವಿಜಯ ಬಲ್ಲಾಳ ಮಾತನಾಡಿ, ಉಡುಪಿಯು ಸಂಸ್ಕೃತಿಕ ಮತ್ತು ಧಾರ್ಮಿಕ ಕೇಂದ್ರವಾಗಿದೆ. ಇಲ್ಲಿ ಪ್ರತಿನಿತ್ಯ ವಿವಿಧ ರೀತಿಯ ವೈಶಿಷ್ಟ ಪೂರ್ಣವಾದ ಕಾರ್ಯಕ್ರಮಗಳು ನಿರಂತರವಾಗಿ ನಡೆಯುತ್ತಿರುವ ಕಾರಣ ನಮ್ಮ ಆಚಾರ ವಿಚಾರ, ಸಂಸ್ಕೃತಿಗಳ ಪರಿಚಯ ಇತರರಿಗೂ ಪ್ರಸಾರ ವಾಗುತ್ತಿದೆ ಎಂದು ತಿಳಿಸಿದರು.
ಯುವ ಉದಯೋನ್ಮುಖ ಕವಿ ಶಶಿ ತರಿಕೆರೆ ಅನುಪಸ್ಥಿತಿಯಲ್ಲಿ ಕುರಾಡಿ ಸೀತಾರಾಮ ಅಡಿಗ ಕಾವ್ಯ ಪ್ರಶಸ್ತಿಯನ್ನು ಅವರ ಪರವಾಗಿ ಪತ್ನಿ ರಶ್ಮಿ ತರಿಕೆರೆ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಮಂಜುಶ್ರೀ ಕೃಷ್ಣ ಭಟ್ ಅವರ ಜೀವನ ಧರ್ಮ ಕೃತಿಯನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಬಿಡುಗಡೆಗೊಳಿಸಿದರು.
ಹಿರಿಯ ಪತ್ರಕರ್ತ ಎಸ್ ನಿತ್ಯಾನಂದ ಪಡ್ರೆ ಮಾತನಾಡಿದರು. ಹಿರಿಯ ಶಿಕ್ಷಣ ತಜ್ಞ ರಂಗಪ್ಪಯ್ಯ ಹೊಳ್ಳ ಪುಸ್ತಕ ಪರಿಚಯ ಮಾಡಿದರು. ವೇದಿಕೆಯಲ್ಲಿ ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಸ್ಥಾಪಕ ಉಡುಪಿ ವಿಶ್ವನಾಥ್ ಶೆಣೈ, ಅಧ್ಯಕ್ಷ ಪ್ರೊ. ಶಂಕರ್ ಮೊದಲಾದವರು ಉಪಸ್ಥಿತರಿದ್ದರು.
ಉರಗ ತಜ್ಞ ಗುರುರಾಜ್ ಸನಿಲ್ ಅವರ ಸಾಕ್ಷ್ಯಚಿತ್ರವನ್ನು ಕಾರ್ಯಕ್ರಮದ ಸಂಯೋಜಕ ಅವಿನಾಶ್ ಕಾಮತ್ ಉಪಸ್ಥಿತಿಯಲ್ಲಿ ಶಿವರಾಮ ಕಾರಂತ ಪ್ರತಿಷ್ಟಾನದ ಅಧ್ಯಕ್ಷ ಡಾ.ಗಣನಾಥ ಎಕ್ಕಾರು ಬಿಡುಗಡೆಗೊಳಿಸಿದರು.
ಕಾರ್ಯಕ್ರಮದ ಸಂಚಾಲಕಿ ಪೂರ್ಣಿಮಾ ಜನಾರ್ದನ್ ಸ್ವಾಗತಿಸಿದರು. ಪ್ರತಿಷ್ಠಾನದ ಸಂಚಾಲಕ ರವಿರಾಜ್ ಎಚ್.ಪಿ ಪ್ರಸ್ತಾವನೆಗೈದರು. ವಿಶ್ವ ಭಾರತಿ ಕರ್ನಾಟಕ ಪ್ರತಿಷ್ಠಾನ ಬೆನಗಲ್ ಸ್ಥಾಪಕ ಅಧ್ಯಕ್ಷ ನಾರಾಯಣ ಮಡಿ ವಂದಿಸಿದರು. ರಾಘವೇಂದ್ರ ಪ್ರಭು ಕರ್ವಾಲು ನಿರೂಪಿಸಿದರು.