ಉಡುಪಿ: ಪೆರಂಪಳ್ಳಿಯ CBSE ಸಂಯೋಜಿತ ಅಲ್–ಇಬಾದ ಇಂಡಿಯನ್ ಸ್ಕೂಲ್ ನ ನೂತನ ಅಧ್ಯಕ್ಷರಾಗಿ ಕೆ.ಎಸ್. ಶೇಖ್ ಕರ್ನಿರೆ ಅವರು ಆಯ್ಕೆಯಾಗಿದ್ದಾರೆ.

ಕರ್ನಾಟಕದ ಉದ್ಯಮ ಕ್ಷೇತ್ರದಲ್ಲಿ ಪರಿಚಿತರಾಗಿರುವ ಶೇಖ್ ಕರ್ನಿರೆ ಅವರು ಸಮಾಜ ಸೇವಾ ಕಾರ್ಯಗಳಲ್ಲಿಯೂ ತೊಡಗಿಸಿಕೊಂಡಿದ್ದಾರೆ. ಶಾಲೆಯ ಅಧ್ಯಕ್ಷರಾಗಿ, ಅಲ್–ಇಬಾದ ಇಂಡಿಯನ್ ಸ್ಕೂಲ್ ನ ಶಿಕ್ಷಣದ ಗುಣಮಟ್ಟವನ್ನು ಹೆಚ್ಚಿಸುವುದು, ಶಾಲೆಯ ಅಭಿವೃದ್ಧಿಗೆ ಕ್ರಮ ಕೈಗೊಳ್ಳುವುದು ಹಾಗೂ ವಿದ್ಯಾರ್ಥಿಗಳ ಉತ್ತಮ ಭವಿಷ್ಯಕ್ಕೆ ಅಗತ್ಯ ವಾದ ವಾತಾವರಣ ಕಲ್ಪಿಸುವ ಯೋಜನೆ ಅವರಿಗಿದೆ.

ಶಾಲೆಗೆ ಆಗಮಿಸಿದ ಶೇಖ್ ಕರ್ನಿರೆ ಅವರನ್ನು ಆತ್ಮೀಯವಾಗಿ ಸ್ವಾಗತಿಸಲಾಯಿತು. ಅವರು ಬೋಧಕ ಸಿಬ್ಬಂದಿ ಯೊಂದಿಗೆ ಮಾತುಕತೆ ನಡೆಸಿ, ಶಾಲೆಯ ಮುಂದಿನ ಅಭಿವೃದ್ಧಿಯ ಕುರಿತು ತಮ್ಮ ಯೋಜನೆಗಳನ್ನು ಹಂಚಿಕೊಂಡರು.

ಶಾಲೆಯಲ್ಲಿ ಈಗಿರುವ ಉತ್ತಮ ಗುಣಮಟ್ಟವನ್ನು ಮುಂದುವರಿಸುವುದರ ಜತೆಗೆ, ಅದನ್ನು ಮತ್ತಷ್ಟು ಉತ್ತಮಪಡಿ ಸುವುದು ನಮ್ಮ ಗುರಿಯಾಗಿದೆ ಎಂದು ಅವರು ಹೇಳಿದರು. ಆಧುನಿಕ ಶಿಕ್ಷಣದಲ್ಲಿ ಆಗುತ್ತಿರುವ ಬದಲಾವಣೆಗಳಿಗೆ ತಕ್ಕಂತೆ ಶಾಲೆಯ ಶಿಕ್ಷಣ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸಿ, ಮುಂದಿನ ಹಂತಕ್ಕೆ ಕೊಂಡೊಯ್ಯಲಾಗುವುದು ಎಂದು ಶೇಖ್‌ ಕರ್ನಿರೆ ಹೇಳಿದರು.


ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡುವುದು ತಮ್ಮ ಪ್ರಮುಖ ಆದ್ಯತೆಯಾಗಿದೆ. ವಿದ್ಯಾರ್ಥಿಗಳಲ್ಲಿ ಉತ್ತಮ ವ್ಯಕ್ತಿತ್ವ ಬೆಳೆಸುವುದು, ಅವರ ಸುರಕ್ಷತೆಗೆ ಆದ್ಯತೆ ನೀಡುವುದು ಮತ್ತು ಅವರ ಸಮಗ್ರ ಬೆಳವಣಿಗೆಗೆ ಅಗತ್ಯವಾದ ಅವಕಾಶಗಳನ್ನು ಕಲ್ಪಿಸುವುದಕ್ಕೂ ಗಮನ ಹರಿಸಲಾಗುವುದು. ಭವಿಷ್ಯದಲ್ಲಿ ಎದುರಾಗುವ ಸವಾಲುಗಳನ್ನು ಎದುರಿಸಲು ವಿದ್ಯಾರ್ಥಿಗಳನ್ನು ಸಿದ್ಧಪಡಿಸಲಾಗುವುದು ಎಂದು ಶೇಖ್ ಕರ್ನಿರೆ ಹೇಳಿದರು.

ವಿದ್ಯಾರ್ಥಿಗಳ ಸುರಕ್ಷತೆ ಮತ್ತು ಶಿಕ್ಷಣದ ಗುಣಮಟ್ಟಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುವುದು. ವಿದ್ಯಾರ್ಥಿಗಳ ಸಮಗ್ರ ಬೆಳವಣಿಗೆಗೆ ಪೂರಕವಾಗುವಂತೆ ಶಾಲೆಯ ವ್ಯವಸ್ಥೆಗಳನ್ನು ಮತ್ತಷ್ಟು ಸುಧಾರಿಸಲಾಗುವುದು. ಶಿಕ್ಷಣ ಕ್ಷೇತ್ರದಲ್ಲಿ ಆಗುತ್ತಿರುವ ಬದಲಾವಣೆಗಳಿಗೆ ತಕ್ಕಂತೆ ಶಾಲೆಯಲ್ಲಿಯೂ ಅಗತ್ಯ ಬದಲಾವಣೆಗಳನ್ನು ಮಾಡಲಾಗುವುದು ಎಂದು ಅವರು ಭರವಸೆ ನೀಡಿದರು.

ಶೇಖ್ ಕರ್ನಿರೆ ಅವರ ಮಾರ್ಗದರ್ಶನದಲ್ಲಿ ಶಾಲೆಯ ದೈನಂದಿನ ಕಾರ್ಯಚಟುವಟಿಕೆ ಮುಂದುವರೆಯಲಿದೆ ಎಂದು ಪ್ರಕಟನೆ ತಿಳಿಸಿದೆ.



 


Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor