ಸಂಸ್ಕಾರಯುತ ಶಿಕ್ಷಣದಿಂದ ಬದುಕು ಸುಂದರ: ನವೀನ್ ಚಂದ್ರ ಶೆಟ್ಟಿ
ಕಾರ್ಕಳ ರೋಟರಿ ಕ್ಲಬ್ ವತಿಯಿಂದ ರಾಷ್ಟ್ರೀಯ ಯುವಕ ದಿನಾಚರಣೆ
ಕಾರ್ಕಳ : ಶಿಕ್ಷಣವೆಂದರೆ ಕೇವಲ ಅಂಕ ಗಳಿಕೆ ಒಂದೇ ಆಗಿರದೆ ಸಂಸ್ಕಾರ ಈತ ಬದುಕನ್ನ ರೂಪಿಸುವಂತಿರಬೇಕು. ಈ ನಿಟ್ಟಿನಲ್ಲಿ ಚಾಣಕ್ಯ ಸಂಸ್ಥೆ ಕಳೆದ 11 ವರ್ಷಗಳಿಂದ ಗುಣಮಟ್ಟದ ಸಂಸ್ಕಾರಯುತ ಶಿಕ್ಷಣ ಜೊತೆ ನಮ್ಮ ಸಂಸ್ಕೃತಿ, ಸಂಸ್ಕಾರವನ್ನು ಬಿಂಬಿಸುವ ಕಲಾ ಪ್ರಕಾರಗಳನ್ನು ಒಂದೇ ಸೂರಿನಡಿ ತರಬೇತಿ ನೀಡುತ್ತಿರುವುದು ಶ್ಲಾಘನೀಯ ಎಂದು ಕಾರ್ಕಳ ರೋಟರಿ ಕ್ಲಬ್ ನ ಅಧ್ಯಕ್ಷ ನವೀನ್ ಚಂದ್ರ ಶೆಟ್ಟಿ ಹೇಳಿದರು.
ಅವರು ಹೆಬ್ರಿ ಚಾಣಕ್ಯ ಶಿಕ್ಷಣ ಮತ್ತು ಸಾಂಸ್ಕೃತಿಕ ಪ್ರತಿಷ್ಠಾನದಲ್ಲಿ ರೋಟರಿ ಕ್ಲಬ್ ಕಾರ್ಕಳ ನೇತೃತ್ವದಲ್ಲಿ ನಡೆದ ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಸ್ವಾಮಿ ವಿವೇಕಾನಂದರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಚಾಣಕ್ಯ ಸಂಸ್ಥೆ ವತಿಯಿಂದ ಸನ್ಮಾನ ಸ್ವೀಕರಿಸಿ ಮಾತನಾಡಿದರು.
ಕಾರ್ಕಳ ರೋಟರಿ ಕ್ಲಬ್ ಅಧ್ಯಕ್ಷ ನವೀನ್ ಚಂದ್ರ ಶೆಟ್ಟಿ ಅವರ ನೇತೃತ್ವದ ತಂಡ ಕಳೆದ ಒಂದು ವರ್ಷಗಳಿಂದ ಕಾರ್ಕಳ ಸುತ್ತಮುತ್ತ ಪ್ರದೇಶದಲ್ಲಿ ವಿವಿಧ ಸಮಾಜಮುಖಿ ಚಟುವಟಿಕೆ ಮೂಲಕ ರಾಜ್ಯದ ಗಮನ ಸೆಳೆದಿದೆ. ಕೇವಲ ವಾರ್ಷಿಕೋತ್ಸವಕ್ಕೆ ಸೀಮಿತವಾಗುತ್ತಿರುವ ಸಂಘಟನೆಗಳ ನಡುವೆ ಇಂದು ಕಾರ್ಕಳ ರೋಟರಿ ಕ್ಲಬ್ ನಿರಂತರ ಕಾರ್ಯಕ್ರಮಗಳ ಆಯೋಜನೆ ಮೂಲಕ ಮಾದರಿ ಸಂಘಟನೆಯಾಗಿ ಗುರುತಿಸಿಕೊಂಡಿದೆ ಎಂದು ಚಾಣಕ್ಯ ಶಿಕ್ಷಣ ಮತ್ತು ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಹೆಬ್ರಿ ಉದಯಕುಮಾರ್ ಶೆಟ್ಟಿ ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಚಾಣಕ್ಯ ಸಮೂಹ ಶಿಕ್ಷಣ ಸಂಸ್ಥೆಯ ಪ್ರಾಂಶುಪಾಲೆ ವೀಣಾ ಯು ಶೆಟ್ಟಿ ವಹಿಸಿದ್ದರು. ಕಾರ್ಕಳ ರೋಟರಿ ಕ್ಲಬ್ ನ ಮಾಜಿ ಅಧ್ಯಕ್ಷ ಜಗದೀಶ್, ಕಾರ್ಕಳ ರೋಟರಿ ಕ್ಲಬ್ ನ ಕಾರ್ಯದರ್ಶಿ ಚೇತನ್ ನಾಯಕ್,ಹೆಬ್ರಿ ಜೇಸಿಐ ಸದಸ್ಯೆ ಶೀಲಾ ಪ್ರವೀಣ್, ಮಾನ್ಯ ಯು ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.
ಧನ್ಯ ಯು. ಶೆಟ್ಟಿ ಪ್ರಾರ್ಥಿಸಿದರು. ಉದಯ್ ಕುಮಾರ್ ಶೆಟ್ಟಿ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.