×
Ad

ಜಿಲ್ಲೆಯ ಬಸ್‌ಗಳಿಗೆ ಬಾಗಿಲು ಕಡ್ಡಾಯಗೊಳಿಸಿ: ಉಡುಪಿ ಡಿಸಿ ಸ್ವರೂಪ ಟಿ.ಕೆ. ಸೂಚನೆ

► ತಪ್ಪಿದರೆ ಶಿಸ್ತುಕ್ರಮಕ್ಕೆ ನಿರ್ದೇಶ ► ಸಿಮೆಂಟ್ ಮಿಕ್ಸಿಂಗ್ ಸಾಗಾಟ ವಾಹನಗಳಿಗೂ ಎಚ್ಚರಿಕೆ

Update: 2025-12-18 20:31 IST

ಉಡುಪಿ, ಡಿ.18: ಜಿಲ್ಲೆಯಲ್ಲಿ ಸಂಚರಿಸುವ ಪ್ರತಿಯೊಂದು ಬಸ್‌ಗಳಿಗೂ ಬಾಗಿಲುಗಳನ್ನು ಕಡ್ಡಾಯವಾಗಿ ಅಳವಡಿಸಬೇಕು. ಬಸ್‌ಗಳಿಗೆ ಬಾಗಿಲು ಅಳವಡಿಸಲು ನಿಗದಿತ ಸಮಯಾವಕಾಶ ಕೊಟ್ಟು, ಅಳವಡಿಸದೇ ಇರುವ ವಾಹನಗಳ ಮೇಲೆ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಆರ್‌ಟಿಓ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.

ಜಿಲ್ಲೆಯಲ್ಲಿ ಸಂಚರಿಸುತ್ತಿರುವ ಕೆಲವು ಬಸ್‌ಗಳು ಬಸ್ ನಿಲ್ದಾಣವನ್ನು ಹೊರತುಪಡಿಸಿ, ಎಲ್ಲೆಂದರಲ್ಲಿ ನಿಲುಗಡೆ ಮಾಡುತ್ತಿದ್ದಾರೆ. ಇದರಿಂದ ಟ್ರಾಫಿಕ್ ಸಮಸ್ಯೆ ಉಂಟಾಗುತ್ತಿದೆ. ಈ ಬಗ್ಗೆ ಕ್ರಮಕೈಗೊಳ್ಳುವಂತೆ ಆರ್‌ಟಿಓ ಅಧಿಕಾರಿಗಳಿಗೆ ಈ ಮೊದಲೇ ಸೂಚಿಸಲಾಗಿತ್ತು. ಆದರೂ ಸ್ಥಿತಿಯಲ್ಲಿ ಸುಧಾರಣೆ ಕಂಡುಬಂದಿಲ್ಲ. ಪ್ರತೀ ತಿಂಗಳು ನಿಯಮ ಉಲ್ಲಂಘಿಸಿದ ಬಸ್‌ಗಳ ಮೇಲೆ ಪ್ರಕರಣಗಳನ್ನು ದಾಖಲಿಸಬೇಕು ಎಂದವರು ಹೇಳಿದರು.

ಕಾಂಕ್ರೀಟ್ ಮಿಕ್ಸಿಂಗ್ ಸಾಗಾಟ ವಾಹನ: ಸಿದ್ಧ ಕಾಂಕ್ರೀಟ್ ಮಿಕ್ಸಿಂಗ್ ಸಾಗಾಣಿಕೆ ಮಾಡುವ ವಾಹನಗಳು ಓವರ್ ಲೋಡ್‌ನಿಂದಾಗಿ ಕಾಂಕ್ರೀಟ್ ರಸ್ತೆಯ ಮೇಲೆ ಎಲ್ಲೆಡೆ ಬೀಳುವುದರಿಂದ ಸಾರ್ವಜನಿಕ ವಾಹನಗಳ ಸುಗಮ ಸಂಚಾರಕ್ಕೆ ತೊಂದರೆ ಉಂಟಾಗುವುದರ ಜೊತೆಗೆ ಅಪಘಾತಗಳು ಆಗುತ್ತಿವೆ. ಇಂತಹ ವಾಹನಗಳ ವಿರುದ್ಧವೂ ನಿರ್ಧಾಕ್ಷಿಣ್ಯ ಕಾನೂನು ಕ್ರಮ ಕೈಗೊಂಡು ದಂಡ ವಿಧಿಸುವಂತೆ ಜಿಲ್ಲಾಧಿಕಾರಿ ಸೂಚಿಸಿದರು.

ಜಿಲ್ಲೆಯಲ್ಲಿ ಕಟ್ಟಡಗಳ ನಿರ್ಮಾಣಕ್ಕೆ ಅಗತ್ಯವಿರುವ ಸಿದ್ಧ ಕಾಂಕ್ರೀಟ್ ಮಿಶ್ರಣ ಸಾಗಿಸುವ ವಾಹನಗಳು ನಿರಂತರ ವಾಗಿ ಸಂಚರಿಸುತ್ತಿವೆ. ಓವರ್ ಲೋಡ್‌ನಿಂದಾಗಿ ಇದರಿಂದ ಕಾಂಕ್ರೀಟ್ ಮಿಶ್ರಣ ಹೆದ್ದಾರಿ ಸೇರಿದಂತೆ ರಸ್ತೆಯ ಮೇಲೆ ಎಲ್ಲೆಂದರಲ್ಲಿ ಬಿದ್ದು, ಉಬ್ಬುಗಳು ಉಂಟಾಗಿ ದ್ವಿಚಕ್ರ ವಾಹನಗಳು ಸೇರಿದಂತೆ ವಿವಿಧ ವಾಹನಗಳ ಸುಗಮ ಸಂಚಾರಕ್ಕೆ ಅಡಚಣೆ ಯಾಗುತ್ತಿದೆ. ಕೆಲವಾರು ಅಪಘಾತಗಳು ಸಂಭವಿಸಿವೆ. ಈ ಬಗ್ಗೆ ದೂರುಗಳು ಸಹ ಕೇಳಿ ಬರುತ್ತಿವೆ. ಆದ್ದರಿದ ಆರ್‌ಟಿಓ ಅಧಿಕಾರಿಗಳು ಕೂಡಲೇ ಕ್ರಮ ಕೈಗೊಳ್ಳಬೇಕು. ಇಂತಹ ವಾಹನಗಳ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸ್ಪಷ್ಟ ಸೂಚನೆ ನೀಡಿದರು.

ಬ್ಲ್ಯಾಕ್‌ಸ್ಪಾಟ್: ಜಿಲ್ಲೆಯ ಹೆದ್ದಾರಿಗಳಲ್ಲಿ ಹೆಚ್ಚೆಚ್ಚು ಅಪಘಾತ ಸಂಭವಿಸುವ 18 ಬ್ಲಾಕ್‌ಸ್ಪಾಟ್ ಪ್ರದೇಶಗಳನ್ನು ಈಗಾಗಲೇ ಗುರುತಿಸಲಾಗಿದೆ. ಈ ಸ್ಥಳ ಗಳನ್ನು ಪರಿಶೀಲಿಸಿ ವೈಜ್ಞಾನಿಕವಾಗಿ ರಸ್ತೆ ಕಾಮಗಾರಿ ಕೈಗೊಳ್ಳಲು ಸೂಚಿಸಲಾಗಿತ್ತು. ಇವುಗಳಲ್ಲಿ ಬಹುತೇಕ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ. ಬಾಕಿ ಇರುವ ಕಾಮಗಾರಿಗಳನ್ನು ಆದ್ಯತೆಯ ಮೇಲೆ ಕೂಡಲೇ ಕೈಗೊಂಡು ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕೆಂದು ಜಿಲ್ಲಾಧಿಕಾರಿ ಸಂಬಂಧಿಸಿದ ಇಂಜಿನಿಯರ್‌ಗಳಿಗೆ ಸೂಚನೆ ನೀಡಿದರು.

ಸಾರ್ವಜನಿಕರು ರಸ್ತೆಯಲ್ಲಿ ಸಂಚರಿಸುವಾಗ ಸುಗಮ ಸಂಚಾರಕ್ಕಾಗಿ ರಸ್ತೆ ಸುರಕ್ಷತಾ ನಿಯಮಗಳನ್ನು ವಿಧಿಸಿದ್ದು, ಇವುಗಳನ್ನು ಚಾಚೂ ತಪ್ಪದೇ ಪಾಲಿಸಿದ್ದಲ್ಲಿ ಅಪಘಾತಗಳಿಂದ ಮುಕ್ತಿ ಪಡೆಯಲು ಸಾಧ್ಯ. ಇದಕ್ಕೆ ಒತ್ತು ನೀಡಿ, ಜಾಗರೂಕರಾಗಿ ವಾಹನಗಳನ್ನು ಚಾಲನೆ ಮಾಡಬೇಕು ಎಂದರು.

ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ವಾಹನಗಳ ಪಾರ್ಕಿಂಗ್‌ಗೆ ಜಾಗಗಳನ್ನು ಗುರುತಿಸಿ, ಸಾರ್ವಜನಿಕ ವಾಹನಗಳ ನಿಲುಗಡೆಗೆ ಅವಕಾಶ ಕಲ್ಪಿಸಬೇಕು, ರಸ್ತೆ ಬದಿಯಲ್ಲಿರುವ ಅನಧಿಕೃತ ಗೂಡಂಗಡಿಗಳನ್ನು ಪೊಲೀಸ್ ಇಲಾಖೆಯ ಸಹಯೋಗದೊಂದಿಗೆ ತೆರವುಗೊಳಿಸಬೇಕು. ಸಾಧ್ಯವಾದಲ್ಲಿ ವೆಂಡಿಂಗ್ ಝೋನ್‌ಗೆ ಸ್ಥಳ ಗುರುತಿಸಿ, ಅಲ್ಲಿ ಅವರಿಗೆ ಅವಕಾಶ ಕಲ್ಪಿಸಿಕೊಡಬೇಕು ಎಂದು ಡಿಸಿ, ಪೌರಾಯುಕ್ತರಿಗೆ ಸೂಚನೆ ನೀಡಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್ ಮಾತನಾಡಿ, ಆಟೋ ರಿಕ್ಷಾ ತಂಗುದಾಣಗಳಲ್ಲಿ ಎಲ್ಲಾ ಆಟೋರಿಕ್ಷಾ ಚಾಲಕರು ತಮ್ಮ ವಾಹನಗಳನ್ನು ನಿಲ್ಲಿಸಲು ಅನುಮತಿ ನೀಡುವ ಕುರಿತು ಪೌರಾಯುಕ್ತರು ಕ್ರಮಕೈಗೊಳ್ಳಬೇಕು. ಮಣಿಪಾಲ ವ್ಯಾಪ್ತಿಯಲ್ಲಿ ಮೊಬೈಲ್ ಆಪ್ ಆಧಾರಿತ ಟ್ಯಾಕ್ಸಿ ಸೇವೆಗೆ ಸಾರ್ವಜನಿಕ ಸಭೆಯನ್ನು ಪರ-ವಿರೋಧ ಪ್ರತ್ಯೇಕವಾಗಿ ಕರೆದು ಆ ಸಂಬಂಧ ವರದಿ ನೀಡಬೇಕು ಎಂದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ, ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಅಭಿಯಂತರ ಕಿರಣ್ ಎಸ್, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕ ಅಬ್ದುಲ್ಲಾ ಮೊಹಮ್ಮದ್ ಅಜ್ಮಿ, ಪೌರಾಯುಕ್ತ ಮಹಾಂತೇಶ ಹಂಗರಗಿ, ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು, ತಾಲೂಕು ತಹಶೀಲ್ದಾರರುಗಳು ಉಪಸ್ಥಿತರಿದ್ದರು.





Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News