ಮಣಿಪಾಲ: ಮರಕ್ಕೆ ಬೈಕ್ ಢಿಕ್ಕಿ: ಸವಾರ ಮೃತ್ಯು
Update: 2026-08-11 12:00 IST
ಸನತ್
ಮಣಿಪಾಲ, ಆ.11: ರಸ್ತೆ ಬದಿಯ ಮರಕ್ಕೆ ಬುಲೆಟ್ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಸವಾರ ಮೃತಪಟ್ಟ ಘಟನೆ ಹೆರ್ಗ ಗ್ರಾಮದ ಕೆಳಪರ್ಕಳ ಇಳಿಜಾರಿನಲ್ಲಿರುವ ಗೋಪಾಲಕೃಷ್ಣ ದೇವಸ್ಥಾನದ ಬಳಿ ಆ.11ರಂದು ನಸುಕಿನ ವೇಳೆ 1.25 ರ ಸುಮಾರಿಗೆ ನಡೆದಿದೆ.
ಮೃತರನ್ನು ಆತ್ರಾಡಿ ನಿವಾಸಿ ಸನತ್(21) ಎಂದು ಗುರುತಿಸಲಾಗಿದೆ. ಇವರು ಗೆಳೆಯರೊಂದಿಗೆ ಮಣಿಪಾಲದಲ್ಲಿ ರಾತ್ರಿ ಊಟ ಮುಗಿಸಿ, ಗೆಳೆಯ ಆಶಿಶ್ ಎಂಬವರ ಬುಲೆಟ್ ಬೈಕ್ ನಲ್ಲಿ ಮನೆಗೆ ಹೋದರು. ಮಣಿಪಾಲ ಕಡೆಯಿಂದ ಪರ್ಕಳ ಕಡೆಗೆ ಹೋಗುತ್ತಿದ್ದ ಬುಲೆಟ್, ಅತೀವೇಗ ಹಾಗೂ ಅಜಾಗರೂಕತೆಯಿಂದ ಸವಾರನ ನಿಯಂತ್ರಣ ತಪ್ಪಿ, ಇಳಿಜಾರಿನಲ್ಲಿ ರಸ್ತೆ ಬದಿಯ ಮರಕ್ಕೆ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ.
ಇದರ ಪರಿಣಾಮ ಬುಲೆಟ್ ಬೈಕ್ ಸಮೇತ ರಸ್ತೆ ಬದಿಯ ಚರಂಡಿಗೆ ಎಸೆಯಲ್ಪಟ್ಟ ಸನತ್, ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ಕರೆದುಕೊಂಡು ಹೋಗುವ ದಾರಿ ಮಧ್ಯೆ ಮೃತಪಟ್ಟರು ಎಂದು ತಿಳಿದುಬಂದಿದೆ.
ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.