ಪೌರ ಕಾರ್ಮಿಕರಿಗೆ ವಸತಿ, ಸಾಲ ಸಹಿತ ಹಲವು ಸೌಲಭ್ಯ: ಸಚಿವೆ ಶೋಭಾ ಕರಂದ್ಲಾಜೆ
ಉಡುಪಿ, ಅ.7: ಪೌರಕಾರ್ಮಿಕರ ಸುರಕ್ಷತೆಗೆ ಕೇಂದ್ರ ಸರಕಾರವು ಸಫಾಯಿ ಮಿತ್ರ ಹಾಗೂ ನ್ಯಾಷನಲ್ ಸಫಾಯಿ ಕರ್ಮಚಾರಿ ಫೈನಾನ್ಸ್ ಎಂಡ್ ಡೆವಲಪ್ಮೆಂಟ್ ಕಾರ್ಪೋರೇಷನ್ ಯೋಜನೆಯನ್ನು ಜಾರಿಗೊಳಿಸಿದ್ದು, ಈ ಯೋಜನೆ ಯಡಿ ಪೌರ ಕಾರ್ಮಿಕರಿಗೆ ಸಾಲ ಸೌಲಭ್ಯ, ಆರೋಗ್ಯ, ಮಕ್ಕಳ ಶಿಕ್ಷಣ, ವಸತಿ ವ್ಯವಸ್ಥೆ, ವಿಮೆ ಸೇರಿದಂತೆ ಹಲವು ಸೌಲಭ್ಯಗಳನ್ನು ಜಾರಿಗೊಳಿಸಿದೆ ಎಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.
ಉಡುಪಿ ನಗರಸಭೆ ವತಿಯಿಂದ ಶನಿವಾರ ಅಜ್ಜರಕಾಡು ಪುರಭವನದಲ್ಲಿ ಆಯೋಜಿಸಲಾದ ಪೌರಕಾರ್ಮಿಕರ ದಿನಾಚರಣೆ ಯನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು. ಪೌರಕಾರ್ಮಿಕರ ರಕ್ಷಣೆಗೆ ಹಾಗೂ ಅವರ ಶ್ರೇಯೋಭಿ ವೃದ್ಧಿಗೆ ಸರಕಾರ ಅನೇಕ ಯೋಜನೆಗಳು ಹಾಗೂ ಕಾಯ್ದೆಗಳನ್ನು ಜಾರಿಗೆ ತಂದಿದೆ. ಇದರ ಪ್ರಯೋಜನವನ್ನು ಪ್ರತಿಯೊಬ್ಬ ಪೌರ ಕಾರ್ಮಿಕರು ಪಡೆಯಬೇಕೆಂದರು.
ಉಡುಪಿ ನಗರವು ಸ್ವಚ್ಛತೆಗ ಹೆಸರುವಾಸಿಯಾಗಿದೆ. ನಗರದ ಸ್ವಚ್ಛತೆಗೆ ಪೌರಕಾರ್ಮಿಕರ ಕೊಡುಗೆ ಅವಿರತವಾಗಿದ್ದು, ನಗರವನ್ನು ಸ್ವಚ್ಛವಾಗಿಡುವಲ್ಲಿ ಪೌರಕಾರ್ಮಿಕರ ಪಾತ್ರ ಅಪಾರವಾಗಿದೆ. ಯಂತ್ರೋಪಕರಣಗಳನ್ನು ಬಳಸಿ ಮ್ಯಾನ್ ಹೋಲ್ಗಳ ಸ್ವಚ್ಛತೆಗೆ ಮುಂದಾಗಬೇಕೆಂದು ಕಾನೂನು ಜಾರಿಗೊಳಿ ಸಿದ್ದು, ಇದರಿಂದ ಹಲವಾರು ಜೀವಗಳ ರಕ್ಷಣೆಯಾಗಿದೆ ಎಂದು ಅವರು ತಿಳಿಸಿದರು.
ಅಧ್ಯಕ್ಷತೆ ವಹಿಸಿದ್ದ ಜಿಲ್ಲಾಧಿಕಾರಿ ಡಾ.ಕೆ ವಿದ್ಯಾಕುಮಾರಿ ಮಾತನಾಡಿ, ಪೌರಕಾರ್ಮಿಕರು ನಗರದ ಸ್ವಚ್ಛತೆಗೆ ಕಾಣಿಕೆ ನೀಡುತ್ತಿದ್ದು, ಅವರ ಶ್ರಮಕ್ಕೆ ಬೆಲೆ ಕಟ್ಟಲು ಸಾಧ್ಯವಿಲ್ಲ. ಪ್ರತಿಯೊಬ್ಬ ನಾಗರಿಕರು ತನ್ನ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಡುವಲ್ಲಿ ಪೌರಕಾರ್ಮಿಕರೊಂದಿಗೆ ಕೈಜೋಡಿಸಬೇಕೆಂದು ಹೇಳಿದರು.
ಪೌರಕಾರ್ಮಿಕರು ಸ್ವಚ್ಛತಾ ಪರಿಕರಗಳನ್ನು ಬಳಸಿ, ಸ್ವಚ್ಛತಾ ಕಾರ್ಯದಲ್ಲಿ ತೊಡಗಿಸಿಕೊಳ್ಳಬೇಕು. ತಮ್ಮ ಮಕ್ಕಳ ಉನ್ನತ ಶಿಕ್ಷಣಕ್ಕೆ ಮಹತ್ವ ನೀಡುವುದ ರೊಂದಿಗೆ, ಅವರು ಉತ್ತಮ ರೀತಿಯಲ್ಲಿ ಬದುಕು ಕಟ್ಟಿಕೊಳ್ಳಲು ಪೋಷಕರು ಅವಕಾಶ ಕಲ್ಪಿಸಿಕೊಡಬೇಕು ಎಂದರು.
ಶಾಸಕ ಯಶ್ಪಾಲ್ ಎ.ಸುವರ್ಣ ಮಾತನಾಡಿದರು. ಪೌರಕಾರ್ಮಿಕರಿಗೆ ಏರ್ಪಡಿಸಲಾದ ಕ್ರೀಡಾಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಪೌರಕಾರ್ಮಿಕರಾಗಿ ಸೇವೆ ಸಲ್ಲಿಸಿದ 10 ಮಂದಿಯನ್ನು ಈ ಸಂದರ್ಭದಲ್ಲಿ ಗೌರವಿಸಲಾಯಿತು.
ನಗರಸಭೆ ಮಾಜಿ ಅಧ್ಯಕ್ಷೆ ಸುಮಿತ್ರಾ ಆರ್.ನಾಯಕ್, ಮಾಜಿ ಉಪಾಧ್ಯಕ್ಷೆ ಲಕ್ಷ್ಮೀ ಮಂಜುನಾಥ, ನಗರಸಭಾ ಸದಸ್ಯರಾದ ಶ್ರೀಶ ಭಟ್ ಕೊಡವೂರು, ರಶ್ಮಿ ಸಿ.ಭಟ್, ಸ್ವಚ್ಛ ಭಾರತ್ ರಾಯಭಾರಿ ಜೋಸೆಫ್ ರೆಬೆಲ್ಲೋ ಮೊದಲಾದ ವರು ಉಪಸ್ಥಿತರಿದ್ದರು. ಪೌರಾಯುಕ್ತ ರಾಯಪ್ಪ ಸ್ವಾಗತಿಸಿದರು. ಪ್ರಶಾಂತ್ ಶೆಟ್ಟಿ ಹಾವಂಜೆ ಕಾರ್ಯಕ್ರಮ ನಿರೂಪಿಸಿದರು.
‘ಪೌರಕಾರ್ಮಿಕರು ತಮ್ಮ ಹಾಗೂ ತಮ್ಮ ಕುಟುಂಬದ ಆರೋಗ್ಯ ಕಡೆಗೆ ಗಮನಹರಿಸಬೇಕು. ಪೌರಕಾರ್ಮಿಕರ ಆರೋಗ್ಯದ ಹಿತದೃಷ್ಠಿಯಿಂದ ಸರಕಾರವು ವಿಮಾ ಸೌಲಭ್ಯವನ್ನು ಜಾರಿಗೊಳಿಸಿದ್ದು, ಪ್ರತೀ ಆರು ತಿಂಗಳಿಗೊಮ್ಮೆ ತಪಾಸಣೆ ನಡೆಸಲಿದ್ದು, ಇದರ ಪ್ರಯೋಜನವನ್ನು ಪೌರಕಾರ್ಮಿಕರು ಪಡೆದುಕೊಳ್ಳಬೇಕು’
-ಡಾ.ವಿದ್ಯಾ ಕುಮಾರಿ, ಜಿಲ್ಲಾಧಿಕಾರಿ, ಉಡುಪಿ