ಕುಂದಾಪುರ: ಕುಂದಾಪುರದ ಕೋಡಿ ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಯ ವತಿಯಿಂದ ರಾಷ್ಟ್ರೀಯ ಕ್ರೀಡಾ ದಿನವನ್ನು ಸಂಸ್ಥೆಯ ಕ್ರೀಡಾ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನಿಸುವ ಮೂಲಕ ಬ್ಯಾರೀಸ್ ನಾಲೆಡ್ಜ್ ಕ್ಯಾಂಪಸ್‌ನ ಬೀಹೈವ್ ಕನ್ವೆನ್ಷನ್ ಹಾಲ್‌ನಲ್ಲಿ ಆಚರಿಸಲಾಯಿತು.

ಕಾರ್ಯಕ್ರಮವನ್ನು ಉದ್ಘಾಟಿಸಿದ ಭಾರತೀಯ ಸೇನೆಯ ಮದ್ರಾಸ್ ಎಂಜಿನಿಯರಿಂಗ್ ಗ್ರೂಪ್‌ನಲ್ಲಿ ಸೇವೆ ಸಲ್ಲಿಸುತ್ತಿರುವ ಹಾಗೂ ರಾಷ್ಟ್ರೀಯ ವಾಲಿಬಾಲ್ ಪದಕ ವಿಜೇತ ಚೇತನ್ ಮಾತನಾಡಿ, ಕ್ರೀಡೆಗಳು ಕೇವಲ ದೈಹಿಕ ಸದೃಢತೆಗೆ ಸೀಮಿತವಾಗಿರದೆ ಮಾನಸಿಕ ಸ್ಥಿರತೆ ಮತ್ತು ವ್ಯಕ್ತಿತ್ವ ವಿಕಸನಕ್ಕೂ ಕಾರಣವಾಗುತ್ತವೆ. ತಮ್ಮ ಜೀವನಾಧಾರಿತ ಅನುಭವಗಳನ್ನು ಹಂಚಿಕೊಂಡು ಕ್ರೀಡೆಯೊಂದಿಗೆ ಶಿಕ್ಷಣಕ್ಕೂ ಸಮಾನ ಆದ್ಯತೆ ನೀಡಿ ಸಾಧನೆ ಮಾಡಿ ಅದರೊಂದಿಗೆ ದೇಶ ಕಾಯುವ ಯೋಧರಂತೆ ವಿದ್ಯಾರ್ಥಿಗಳು ತಮ್ಮ ಪೋಷಕರನ್ನು ಗೌರವಿಸುವ ಮತ್ತು ಸಮಾಜಕ್ಕೆ ಒಳ್ಳೆಯ ಕೊಡುಗೆ ನೀಡುವ ಜವಾಬ್ದಾರಿಯನ್ನು ಹೊರಬೇಕು ಎಂದರು.

ಅಧ್ಯಕ್ಷತೆ ವಹಿಸಿದ್ದ ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಕೆ.ಎಂ.ಅಬ್ದುಲ್ ರೆಹಮಾನ್ ಬ್ಯಾರಿ ಮಾತನಾಡಿ, ಕಿರಿಯ ವಯಸ್ಸಿನಲ್ಲೇ ಕಷ್ಟಗಳನ್ನು ಎದುರಿಸಿ ಅಂತರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿದ ಚೇತನ್ ಅವರ ಜೀವನ ಎಲ್ಲರಿಗೂ ಮಾದರಿಯಾಗಲಿ ಹಾಗೂ ಸಂಸ್ಥೆಯ ಎಲ್ಲ ವಿದ್ಯಾರ್ಥಿಗಳು ಸಹ ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ಉತ್ತಮ ಸೇವೆ ಸಲ್ಲಿಸಿ, ಸಂಸ್ಥೆಗೆ ಒಳ್ಳೆಯ ಹೆಸರು ತರಬೇಕೆಂದು ಆಶಿಸಿದರು.

ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಯ ವಿಶ್ವಸ್ಥ ಮಂಡಳಿಯ ಸದಸ್ಯ ಡಾ.ಆಸಿಫ್ ಬ್ಯಾರಿ ಪ್ರಾಸ್ತಾವಿಕವಾಗಿ ಮಾತನಾಡಿ, ಜೀವನದಲ್ಲಿ ಅದೃಷ್ಟಕ್ಕಿಂತ ಶ್ರಮವೇ ಯಶಸ್ಸಿಗೆ ಮೂಲ. ಇದರಿಂದ ಕ್ರೀಡಾಪಟುಗಳು ಶ್ರದ್ಧೆ ಮತ್ತು ತಾಳ್ಮೆಯಿಂದ ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ಮಿಂಚಲು ಸಾಧ್ಯ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಕಬಡ್ಡಿ, ಖೋ-ಖೋ ಹಾಗೂ ಫುಟ್ಬಾಲ್ ಸ್ಪರ್ಧೆಗಳಲ್ಲಿ ಜಿಲ್ಲಾ ಮತ್ತು ರಾಜ್ಯ ಮಟ್ಟವನ್ನು ಪ್ರತಿನಿಧಿಸಿ ಸಂಸ್ಥೆಗೆ ಕೀರ್ತಿ ತಂದ ಕ್ರೀಡಾ ಪಟುಗಳನ್ನು ಗೌರವಿಸಲಾಯಿತು. ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಯ ನಿರ್ದೇಶಕಿ ಅಶ್ವಿನಿ ಶೆಟ್ಟಿ, ವಿವಿಧ ವಿಭಾಗಗಳ ಪ್ರಾಂಶುಪಾಲರು, ಬೋಧಕ- ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಬ್ಯಾರೀಸ್ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕಿ ಲಮಿಸ್ ಕಾರ್ಯಕ್ರಮ ನಿರೂಪಿಸಿದರು. ಹಾಜಿ ಕೆ.ಮೋಹಿದ್ದಿನ್ ಅನುದಾನಿತ ಪ್ರೌಢಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಮೊಹಮ್ಮದ್ ಇಲಿಯಾಸ್ ಸ್ವಾಗತಿಸಿದರು. ಬ್ಯಾರೀಸ್ ಸೀ ಸೈಡ್ ಪಬ್ಲಿಕ್ ಸ್ಕೂಲ್‌ನ ದೈಹಿಕ ಶಿಕ್ಷಣ ಶಿಕ್ಷಕಿ ವೀಣಾ ಅಗೇರ್ ಕ್ರೀಡಾ ವಿಜೇತರ ಪಟ್ಟಿಯನ್ನು ವಾಚಿಸಿದರು. ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳ ದೈಹಿಕ ಶಿಕ್ಷಕ ಶಿಕ್ಷಣ ನಿರ್ದೇಶಕ ಸೌರಬ್ ವಂದಿಸಿದರು.


 


Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor