×
Ad

ಮುಂಗಾರು ಹಂಗಾಮಿನ ಭತ್ತದ ಕಟಾವಿಗೆ ದರ ನಿಗದಿ

Update: 2023-12-04 20:13 IST

ಉಡುಪಿ, ಡಿ.4: ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನ ಭತ್ತದ ಕಟಾವು ಪ್ರಗತಿಯಲ್ಲಿದ್ದು, ಕೂಲಿಯಾಳುಗಳ ಸಮಸ್ಯೆ ಹಾಗೂ ಕಟಾವಿನ ಅವಧಿಯಲ್ಲಿ ಮಳೆ ಬರುವುದರಿಂದ ರೈತರು ಭತ್ತದ ಬೆಳೆ ಕಟಾವಿಗೆ ಅನಿವಾರ್ಯವಾಗಿ ಕಂಬೈನ್ಡ್ ಹಾರ್ವೆಸ್ಟರ್‌ ಗಳನ್ನು ಅವಲಂಭಿಸಬೇಕಾಗಿದೆ. ಹೊರ ಜಿಲ್ಲೆ ಹಾಗೂ ರಾಜ್ಯಗಳ ಈ ಕಂಬೈನ್ಡ್ ಹಾರ್ವೆಸ್ಟರ್‌ಗಳು ಜಿಲ್ಲೆಯಲ್ಲಿ ಕಾರ್ಯ ನಿರ್ವಸುತ್ತಿದ್ದಾರೆ.

ಸದ್ಯದ ಸನ್ನಿವೇಶದ ಪ್ರಯೋಜನ ಪಡೆದು ಕೆಲವೊಂದು ಖಾಸಗಿ ಕಂಬೈನ್ಡ್ ಹಾರ್ವೆಸ್ಟರ್ ಮಾಲಕರು ಸ್ಥಳೀಯ ಮಧ್ಯ ವರ್ತಿಗಳೊಂದಿಗೆ ಸೇರಿ ರೈತರಿಂದ ಭತ್ತ ಕಟಾವಿಗೆ ಹೆಚ್ಚಿನ ಬಾಡಿಗೆ ದರವನ್ನು ಪಡೆಯುತ್ತಿರುವ ಬಗ್ಗೆ ರೈತ ಸಂಘಟಣೆಗಳು ಹಾಗೂ ರೈತರಿಂದ ಜಿಲ್ಲಾಡಳಿತಕ್ಕೆ ದೂರುಗಳು ಬಂದಿವೆ ಎಂದು ಕೃಷಿ ಇಲಾಖೆಯ ಪ್ರಕಟಣೆ ತಿಳಿಸಿದೆ.

ಜಿಲ್ಲೆಯಲ್ಲಿ ಸರಕಾರದ ನೆರವಿನೊಂದಿಗೆ ಸ್ಥಾಪಿಸಲ್ಪಟ್ಟ ಕೃಷಿ ಯಂತ್ರಧಾರೆ ಕೇಂದ್ರಗಳಲ್ಲಿ ಲಭ್ಯವಿರುವ ಕರ್ತಾರ್ ಮಾದರಿ ಕಂಬೈನ್ಡ್ ಹಾರ್ವೆಸ್ಟರ್‌ನ ಕಟಾವಿಗೆ ಉಪಕರಣ ಸಾಗಾಟ ವೆಚ್ಚ ಹೊರತುಪಡಿಸಿ ಜಿಲ್ಲಾ ಸಮಿತಿಯಿಂದ ಪ್ರತಿ ಗಂಟೆಗೆ 1800 ರೂ. ಬಾಡಿಗೆ ದರವನ್ನು ನಿಗದಿಪಡಿಸಿದ್ದು, ರೈತರು ಮುಂಚಿತವಾಗಿ ಕೃಷಿ ಯಂತ್ರಧಾರೆ ಕೇಂದ್ರದ ನಿರ್ವಹಣೆ ಮಾಡುತ್ತಿರುವ ಸರ್ಕಾರೇತರ ಸಂಸ್ಥೆಗಳಲ್ಲಿ ನೊಂದಣಿ ಮಾಡಿಕೊಂಡು ನಿಗದಿಪಡಿಸಿದ ದಿನಾಂಕದಂದು ಕಟಾವು ಕಾರ್ಯಕ್ಕೆ ಉಪಕರಣ ಪಡೆಯಬಹುದಾಗಿದೆ.

ಕೃಷಿ ಯಂತ್ರಧಾರೆ ಕೇಂದ್ರಗಳಲ್ಲಿ ಕೇವಲ 7 ಕಟಾವು ಯಂತ್ರಗಳು ಮಾತ್ರ ಲಭ್ಯವಿದ್ದು, ಜಿಲ್ಲೆಯ ರೈತರ ಬೇಡಿಕೆಯನ್ನು ಪೂರೈಸಲು ಖಾಸಗಿಯಾಗಿ ಬರುವ ಕಟಾವು ಯಂತ್ರಗಳ ಅವಶ್ಯಕತೆ ಇದೆ. ಖಾಸಗಿ ಕಟಾವು ಯಂತ್ರ ಮಾಲಕರು ರೈತರ ಹಿತದೃಷ್ಟಿಯನ್ನು ಗಮನದಲ್ಲಿರಿಸಿ, ಕೃಷಿ ಯಂತ್ರಧಾರೆ ಕೇಂದ್ರದ ಬಾಡಿಗೆ ದರವನ್ನು ಮಾನದಂಡವಾಗಿಟ್ಟುಕೊಂಡು ರೈತರೊಂದಿಗೆ ಕಟಾವು ದರದ ಬಗ್ಗೆ ಸ್ಥಳೀಯವಾಗಿ ಚರ್ಚಿಸಿ, ನ್ಯಾಯೋಚಿತ ದರದಲ್ಲಿ ರೈತರಿಗೆ ಹೆಚ್ಚಿನ ಹೊರೆಯಾಗದ ಧಾರಣೆಯನ್ನು ನಿಗದಿಪಡಿಸಿಕೊಂಡು ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನ ಭತ್ತದ ಕಟಾವು ಕಾರ್ಯವನ್ನು ಕೈಗೊಳ್ಳುವಂತೆ ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News