×
Ad

ರಾ. ಹೆದ್ದಾರಿ: ಸಂತೆಕಟ್ಟೆ, ಇಂದ್ರಾಳಿ ಕಾಮಗಾರಿಗೆ ಉಡುಪಿ ಡಿಸಿ ವಿದ್ಯಾಕುಮಾರಿ ಅಸಮಧಾನ

Update: 2023-12-19 20:11 IST

ಉಡುಪಿ, ಡಿ.19: ಸಂತೆಕಟ್ಟೆಯಲ್ಲಿ ಅಂಡರ್‌ಪಾಸ್ ಹಾಗೂ ಇಂದ್ರಾಳಿ ಯಲ್ಲಿ ರೈಲ್ವೆ ಮೇಲ್ಸೇತುವೆ ಕಾಮಗಾರಿ ತೀರಾ ಮಂದಗತಿಯಲ್ಲಿ ನಡೆಯುತ್ತಿರುವ ಬಗ್ಗೆ ಹಾಗೂ ಇವು ನಿಗದಿತ ಕಾಲಾವಧಿಯಲ್ಲಿ ಪೂರ್ಣಗೊಳ್ಳದಿರುವ ಬಗ್ಗೆ ಉಡುಪಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಮಣಿಪಾಲದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ರಾಷ್ಟ್ರೀಯ ಹೆದ್ದಾರಿ 66 ಮತ್ತು ರಾಷ್ಟ್ರೀಯ ಹೆದ್ದಾರಿ 169, 169ಎಗೆ ಸಂಬಂಧಿಸಿದ ಕಾಮಗಾರಿ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು.

ಜಿಲ್ಲೆಯಲ್ಲಿ ನಡೆಯುತ್ತಿರುವ ಎಲ್ಲಾ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳನ್ನು ಉತ್ತಮ ಗುಣಮಟ್ಟದೊಂದಿಗೆ ತ್ವರಿತವಾಗಿ ಪೂರ್ಣಗೊಳಿಸುವುದರೊಂದಿಗೆ ಸಾರ್ವಜನಿಕರ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲು ಮುಂದಾಗ ಬೇಕು ಎಂದು ಅವರು ರಾಷ್ಟ್ರೀಯ ಹೆದ್ದಾರಿ ವಿಭಾಗದ ಹಿರಿಯ ಅಧಿಕಾರಿಗಳಿಗೆ ಹಾಗೂ ಇಂಜಿನಿಯರ್‌ಗಳಿಗೆ ತಾಕೀತು ಮಾಡಿದರು.

ಉಡುಪಿ ನಗರದ ಇಂದ್ರಾಳಿ ಮೇಲ್ಸೇತುವೆ ಕಾಮಗಾರಿಯನ್ನು ನಿಗದಿತ ಕಾಲಾವಧಿಯಲ್ಲಿ ಪೂರ್ಣಗೊಳಿಸದೇ ಇರುವ ಬಗ್ಗೆ ತಮ್ಮ ಅಸಮಾಧಾನ ವ್ಯಕ್ತಪಡಿಸಿದ ಅವರು, ಈ ಸ್ಥಳಗಳಲ್ಲಿ ಸಾರ್ವಜನಿಕ ವಾಹನಗಳ ಸಂಚಾರಕ್ಕೆ ತೊಂದರೆ ಉಂಟಾಗುವುದರ ಜೊತೆಗೆ ಆಗಾಗ ಅಪಘಾತಗಳು ಸಹ ನಡೆಯುತ್ತಿವೆ.ಮುಂದಿನ ದಿನಗಳಲ್ಲಿ ಈ ರೀತಿ ಮುಂದುವರೆದರೆ ರಾ.ಹೆ. ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದವರು ಎಚ್ಚರಿಸಿದರು.

ಅದೇ ರೀತಿ ರಾ.ಹೆದ್ದಾರಿ 66ರ ಸಂತೆಕಟ್ಟೆ ಅಂಡರ್‌ಪಾಸ್ ರಸ್ತೆ ಕಾಮಗಾರಿ ಗುಣಮಟ್ಟದೊಂದಿಗೆ ನಡೆಯುತ್ತಿಲ್ಲ ಹಾಗೂ ಕಾಮಗಾರಿಗಳು ತೀರಾ ಮಂದಗತಿಯಲ್ಲಿ ಸಾಗುತ್ತಿವೆ ಎಂಬ ಬಗ್ಗೆ ದೂರುಗಳು ಕೇಳಿ ಬರುತ್ತಿವೆ. ಗುತ್ತಿಗೆದಾರರು ಹಾಗೂ ಸಂಬಂಧಪಟ್ಟ ಅಭಿಯಂತರರುಗಳು ಈ ಬಗ್ಗೆ ಎಚ್ಚರ ವಹಿಸಿ ಕಾಮಗಾರಿಗಳನ್ನು ನಿರ್ವಹಿಸಬೇಕು. ಆದಷ್ಟು ತ್ವರಿತ ಗತಿಯಲ್ಲಿ ಇಲ್ಲಿನ ಕೆಲಸಕಾರ್ಯಗಳನ್ನು ಮುಗಿಸಬೇಕು ಎಂದು ಸೂಚನೆಗಳನ್ನು ನೀಡಿದರು.

ಪ್ರಸ್ತುತ ಸಾರ್ವಜನಿಕ ಬಳಕೆಯಲ್ಲಿರುವ ರಾಷ್ಟ್ರೀಯ ಹೆದ್ದಾರಿಗಳನ್ನು ಉನ್ನತೀಕರಣಗೊಳಿಸಲು ಕೈಗೊಂಡಿರುವ ಕಾಮಗಾರಿಗಳನ್ನು ಆದ್ಯತೆ ಮೇಲೆ ಉತ್ತಮ ಗುಣಮಟ್ಟದೊಂದಿಗೆ ತ್ವರಿತವಾಗಿ ಪೂರ್ಣಗೊಳಿಸಬೇಕು. ಇಲ್ಲದೇ ಇದ್ದರೆ ಈ ರಸ್ತೆಗಳಲ್ಲಿ ಸಂಚರಿಸುತ್ತಿರುವ ಸಾರ್ವಜನಿಕ ವಾಹನಗಳ ಸಂಚಾರಕ್ಕೆ ಅನಾನೂಕೂಲವಾಗಲಿದೆ ಎಂದವರು ತಿಳಿಸಿದರು.

ಕರಾವಳಿ ಬೈಪಾಸ್‌ನಿಂದ ಮಲ್ಪೆವರೆಗೆ ಹೆದ್ದಾರಿ ರಸ್ತೆ ನಿರ್ಮಾಣ ಹಾಗೂ ಅಗಲೀಕರಣಕ್ಕೆ ಅಗತ್ಯವಿರುವ ಜಾಗದ ಭೂ ಸ್ವಾಧೀನಕ್ಕೆ ಇರುವ ತಾಂತ್ರಿಕ ತೊಂದರೆಗಳನ್ನು ಇಲಾಖೆ ಅಧಿಕಾರಿಗಳು ಹಾಗೂ ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳು ಸಮನ್ವಯದೊಂದಿಗೆ ಸರಿಪಡಿಸಿಕೊಂಡು ಭೂ ಸ್ವಾಧೀನ ಕಾರ್ಯವನ್ನು ತ್ವರಿತವಾಗಿ ಕೈಗೊಂಡು ಕಾಮಗಾರಿಗಳನ್ನು ಪ್ರಾರಂಭಿಸಬೇಕು ಎಂದರು.

ಕಾರ್ಕಳ ಶಾಸಕ ಸುನೀಲ್ ಕುಮಾರ್ ಮಾತನಾಡಿ, ಸಾಣೂರಿನ ಗ್ರಾಮ ಪಂಚಾಯತ್ ಮುಂಭಾಗದ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸರ್ವಿಸ್ ರಸ್ತೆಯ ಅವಶ್ಯಕತೆ ಇದೆ. ಇದನ್ನು ಆದ್ಯತೆಯ ಮೇಲೆ ಕೈಗೊಳ್ಳಬೇಕು. ಇಲ್ಲದಿದ್ದಲ್ಲಿ ಸಾರ್ವಜನಿಕರಿಗೆ ಹೆಚ್ಚಿನ ತೊಂದರೆಯಾಗಲಿದೆ ಎಂದ ಅವರು, ಸಾಣೂರು ಬಳಿಯ ಸೇತುವೆ ಕಾಮಗಾರಿಯ ವೇಗವನ್ನು ಹೆಚ್ಚಿಸಬೇಕು ಎಂದರು.

ಸಭೆಯಲ್ಲಿ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ. ಅರುಣ್ ಕೆ, ಪೌರಾಯುಕ್ತ ರಾಯಪ್ಪ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕ ಅಬ್ದುಲ್ಲಾ ಮೊಹಮದ್ ಅಜ್ಮಿ, ಇಲಾಖಾ ಅಧಿಕಾರಿಗಳು, ಗುತ್ತಿಗೆದಾರರು ಹಾಗೂ ಇತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News