ಗಂಗೊಳ್ಳಿ: ತೀವ್ರ ರಕ್ತಸ್ರಾವದಿಂದ ಬಾಣಂತಿ ಮೃತ್ಯು
Update: 2024-01-31 21:33 IST
ಗಂಗೊಳ್ಳಿ, ಜ.31: ಮಗುವಿಗೆ ಜನ್ಮ ನೀಡಿದ ತಾಯಿ ತೀವ್ರ ರಕ್ತಸ್ರಾವದಿಂದ ಮೃತಪಟ್ಟ ಘಟನೆ ಜ.30ರಂದು ಸಂಜೆ ವೇಳೆ ನಡೆದಿದೆ.
ಮೃತರನ್ನು ಗಂಗೊಳ್ಳಿಯ ನಾಗರತ್ನ(38) ಎಂದು ಗುರುತಿಸಲಾಗಿದೆ. ಇವರು ಸುಮಾರು 4 ವರ್ಷಗಳ ಹಿಂದೆ ಮದುವೆ ಆಗಿದ್ದರು. ಗರ್ಭಿಣಿಯಾಗಿರುವ ಅವರಿಗೆ ಜ.30ರಂದು ಬೆಳಗ್ಗೆ ಹೆರಿಗೆ ನೋವು ಪ್ರಾರಂಭವಾಗಿದ್ದು ಅವರನ್ನು ಕುಂದಾಪುರದ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ದಾಖಲಿಸಲಾಗಿತ್ತು.
ಮಧ್ಯಾಹ್ನ ವೇಳೆ ಅವರು ಗಂಡು ಮಗುವಿಗೆ ಜನ್ಮ ನೀಡಿದ್ದು, ಬಳಿಕ ನಾಗರತ್ನ ಅವರಿಗೆ ತೀವ್ರತರದ ರಕ್ತಸ್ರಾವವಾಗಿತ್ತು. ವೈಧ್ಯಾಧಿಕಾರಿಯ ಸೂಚನೆಯಂತೆ ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಮಣಿಪಾಲ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಅಲ್ಲಿ ಪರೀಕ್ಷಿಸಿದ ವೈದ್ಯರು ನಾಗರತ್ನ ಮೃತಪಟ್ಟಿರುವುದಾಗಿ ತಿಳಿಸಿದರು. ಈ ಬಗ್ಗೆ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.