ಪ್ರಜಾಪ್ರಭುತ್ವ ವ್ಯವಸ್ಥೆ ಗಟ್ಟಿಗೊಳ್ಳಲು ನಮ್ಮ ಸಂವಿಧಾನವೇ ಕಾರಣ: ಉಡುಪಿ ಡಿಸಿ ಡಾ.ಕೆ.ವಿದ್ಯಾಕುಮಾರಿ
ಉಡುಪಿ: ನಮ್ಮ ದೇಶದ ಪ್ರಜಾಪ್ರಭ್ವುತ ವ್ಯವಸ್ಥೆ ಗಟ್ಟಿಗೊಳ್ಳಲು ಸಂವಿಧಾನವೇ ಮೂಲ ಕಾರಣ. ಅದರ ಆಶಯದಂತೆ ನಡೆದು ಕೊಳ್ಳುವುದು ಪ್ರತಿಯೊಬ್ಬ ನಾಗರಿಕರ ಜವಾಬ್ದಾರಿಯಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ಹೇಳಿದ್ದಾರೆ.
ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಆವರಣದಲ್ಲಿ ಜಿಲ್ಲಾಡಳಿತ, ಸಮಾಜ ಕಲ್ಯಾಣ ಇಲಾಖೆ, ಪದವಿ ಪೂರ್ವ ಶಿಕ್ಷಣ ಇಲಾಖೆ, ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜು, ಸರಕಾರಿ ಪಾಲಿಟೆಕ್ನಿಕ್ ಹಾಗೂ ಡಯಟ್ ಉಡುಪಿ ಇವರ ಸಹಯೋಗದಲ್ಲಿ ಬುಧವಾರ ನಡೆದ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮವನ್ನುದ್ದೇಶಿಸಿ ಅವರು ಮಾತನಾಡುತ್ತಿದ್ದರು.
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರಜೆಗಳೇ ಪ್ರಭುಗಳು. ಪ್ರಭುಗಳ ಆಯ್ಕೆ ಪ್ರಜೆಗಳಿಂದ ಆದರೂ, ಇಬ್ಬರು ಸಂವಿಧಾನದ ಚೌಕಟ್ಟಿಗೇ ಒಳಪಡುತ್ತಾರೆ. ದೇಶದ ಪ್ರತಿಯೊಂದು ಕಾನೂನು ಸಂವಿಧಾನದ ಅಡಿಯಲ್ಲಿ ಬರುತ್ತದೆ. ಪ್ರತಿಯೊಂದಕ್ಕೂ ಸಂವಿಧಾನವೇ ಮೂಲ. ಸಂವಿಧಾನವನ್ನು ಗೌರವಿಸುವುದು, ಅದಕ್ಕೆ ಬದ್ಧವಾಗಿರುವುದು ನಮ್ಮ ನಿಮ್ಮೆಲ್ಲರ ಆದ್ಯ ಕರ್ತವ್ಯ ಎಂದವರು ನುಡಿದರು.
ಪ್ರತಿಯೊಬ್ಬರೂ ಸಂವಿಧಾನವನ್ನು ಗೌರವಿಸುವುದರೊಂದಿಗೆ ಸದೃಢ ಭಾರತ ನಿರ್ಮಾಣ ಮಾಡಿದಲ್ಲಿ ಭವಿಷ್ಯದಲ್ಲಿ ನಮ್ಮ ಮುಂದಿನ ಪೀಳಿಗೆ ನೆಮ್ಮದಿ ಯಿಂದ ಬದುಕು ನಡೆಸಲು ಸಾಧ್ಯ. ಇತ್ತೀಚಿನ ದಿನಗಳಲ್ಲಿ ನಮ್ಮ ನೆರೆ ಹೊರೆ ದೇಶಗಳೂ ಸೇರಿದಂತೆ ಅನೇಕ ರಾಷ್ಟ್ರಗಳಲ್ಲಿ ಅರಾಜಕತೆ ಉಂಟಾಗಿರುವುದು ನಮ್ಮ ಕಣ್ಣ ಮುಂದಿದೆ ಎಂದ ಅವರು, ನಮ್ಮ ಸಂವಿಧಾನದ ಆಶಯದಂತೆ ಪ್ರತಿಯೊಬ್ಬರೂ ನಡೆದುಕೊಂಡಲ್ಲಿ ಭಾರತ ಸದೃಢ ದೇಶವಾಗಲು ಸಾಧ್ಯ ಎಂದರು.
ರಾಜ್ಯದಲ್ಲಿ ಜಾಗೃತಿ: ರಾಜ್ಯ ಸರಕಾರ ಸಂವಿಧಾನದ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಸಂವಿಧಾನ ಜಾಗೃತಿಯನ್ನು ರಾಜ್ಯದಾದ್ಯಂತ ಕೈಗೊಂಡಿದೆ. ಜಿಲ್ಲೆಯ ೧೫೫ ಎಲ್ಲಾ ಗ್ರಾಮ ಪಂಚಾಯತ್ ಗಳು ಹಾಗೂ ೬ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಸಂವಿಧಾನ ಜಾಗೃತಿ ಮೂಡಿಸುವಸ್ಥಬ್ಧಚಿತ್ರದೊಂದಿಗೆ ಜಾಗೃತಿ ಕಾರ್ಯಕ್ರಮಗಳನ್ನು ನಡೆಸಲಾ ಗಿದೆ. ಅನೇಕ ಕಡೆಗಳಲ್ಲಿ ಬೈಕ್ ರ್ಯಾಲಿಗಳು, ಕಡಲ ತೀರದಲ್ಲಿ ವಿಶೇಷ ಕಾರ್ಯಕ್ರಮ ಗಳು, ಕ್ರೀಡಾಪಂದ್ಯಗಳು ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ಜಿಲ್ಲೆಯಲ್ಲಿ ಜಾಗೃತಿ ಮೂಡಿಸುವ ಈ ಕಾರ್ಯಕ್ರಮ ಯಶಸ್ವಿಯಾಗಿದೆ ಎಂದು ತಿಳಿಸಿದರು.
ಹಿರಿಯ ಸಿವಿಲ್ ನ್ಯಾಯಾಧೀಶೆ ಶರ್ಮಿಳಾ ಎಸ್. ಸಂವಿಧಾನದ ಪೀಠಿಕೆ ಯನ್ನು ಬೋಧಿಸಿದರು. ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಅನಿತಾ ಮಡ್ಲೂರು, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಮಾರುತಿ, ಪ್ರಾಂಶುಪಾಲೆ ಡಾ.ಸುಮಾ, ಮೂಡುಬೆಳ್ಳೆ ಕಾಲೇಜಿನ ಪ್ರಾಂಶುಪಾಲ ಎಡ್ವರ್ಡ್, ಪಾಲಿಟೆಕ್ನಿಕ್ ಕಾಲೇಜಿನ ಶಿವಪ್ರಸಾದ್ ಶೆಟ್ಟಿ ಹಾಗೂ ಸುನಿಲ್, ಡಯಟ್ನ ಸಿಬ್ಬಂದಿಗಳು, ಆರಕ್ಷಕರು, ಉಪನ್ಯಾಸಕರು, ಸಾರ್ವಜನಿಕರು ಉಪಸ್ಥಿತರಿದ್ದರು.
ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ದಯಾನಂದ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿ ದರು. ಮಲ್ಪೆ ಕಾಲೇಜಿನ ಪ್ರಾಂಶುಪಾಲ ವರ್ಗೀಸ್ ವಂದಿಸಿದರು.
ಕಾರ್ಯಕ್ರಮಕ್ಕೂ ಮುನ್ನ ಉಡುಪಿಯ ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಿಂದ ಸಿಟಿ ಬಸ್ ಮಾರ್ಗವಾಗಿ ನಗರದ ಪ್ರಮುಖ ರಸ್ತೆಗಳ ಮೂಲಕ ಮಣಿಪಾಲದ ಜಿಲ್ಲಾಧಿಕಾರಿ ಕಚೇರಿವರೆಗೆ ಚಂಡೆ ವಾದ್ಯಗಳೊಂದಿಗೆ ಜಾಗೃತಿ ಜಾಥ ಸಾಗಿತು. ಬೈಕ್ ರ್ಯಾಲಿಗೆ ನೂತನ್ ಕ್ರೆಡಿಟ್ ಕೋ- ಆಪರೇಟಿವ್ ಸೊಸೈಟಿಯ ಮಹಾಪ್ರಬಂಧಕ ಗಣೇಶ್ ಚಾಲನೆ ನೀಡಿದರು.