×
Ad

ಉಡುಪಿ ಜಿಲ್ಲೆಯಲ್ಲಿ ಮೂರು ಹೊಸ ಕೈಗಾರಿಕಾ ಪ್ರದೇಶಗಳ ನಿರ್ಮಾಣ: ಜಿಲ್ಲಾಧಿಕಾರಿ ವಿದ್ಯಾಕುಮಾರಿ

Update: 2024-06-26 20:52 IST

ಉಡುಪಿ, ಜೂ.26: ಜಿಲ್ಲೆಯಲ್ಲಿ ಹೊಸ ಕೈಗಾರಿಕಾ ಪ್ರದೇಶಗಳ ನಿರ್ಮಾಣಕ್ಕೆ ಗುರುತಿಸಿರುವ ಶಿವಪುರದ ಕೆರೆಬೆಟ್ಟು, ಕಾರ್ಕಳದ ನಿಟ್ಟೆ ಹಾಗೂ ಬ್ರಹ್ಮಾವರದ ಉಪ್ಪೂರು ಪ್ರದೇಶ ವ್ಯಾಪ್ತಿಯಲ್ಲಿ ಭೂಸ್ವಾಧೀನತಾ ಪ್ರಕ್ರಿಯೆ ಯನ್ನು ತ್ವರಿತವಾಗಿ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಅವರು ಭೂಸ್ವಾಧೀನ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಕೈಗಾರಿಕಾ ಸ್ಪಂದನ ಸಮಿತಿ ಸಭೆ, ಕ್ಲಸ್ಟರ್ ಸಮಿತಿ ಸಭೆ, ಜಿಲ್ಲಾ ಮಟ್ಟದ ಏಕಗವಾಕ್ಷಿ ಸಮಿತಿ ಸಭೆ, ಜಿಲ್ಲಾ ಮಟ್ಟದ ರಫ್ತು ಉತ್ತೇಜನಾ ಸಮಿತಿ ಸಭೆ ಹಾಗೂ ಪ್ರಧಾನಮಂತ್ರಿಗಳ ಉದ್ಯೋಗ ಸೃಜನಾ ಯೋಜನೆಯ ಜಿಲ್ಲಾ ಮಟ್ಟದ ಅನುಷ್ಠಾನ ಸಮಿತಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.

ಜಿಲ್ಲೆಯಲ್ಲಿ ಹೊಸ ಕೈಗಾರಿಕಾ ಪ್ರದೇಶಗಳನ್ನು ನಿರ್ಮಿಸಿ, ಉದ್ಯೋಗಗಳನ್ನು ಸೃಷ್ಟಿಸುವ ಮೂಲಕ ಸ್ಥಳೀಯ ಜನರಿಗೆ ಉದ್ಯೋಗ ಲಭಿಸಬೇಕೆಂಬ ಆಶಯದೊಂದಿಗೆ ಹೆಬ್ರಿ ತಾಲೂಕಿನ ಶಿವಪುರ ಹಾಗೂ ಕೆರೆಬೆಟ್ಟು ಗ್ರಾಮ ಗಳಲ್ಲಿ 113.59 ಎಕ್ರೆ, ಕಾರ್ಕಳ ತಾಲೂಕಿನ ನಿಟ್ಟೆಯಲ್ಲಿ 50.42 ಎಕ್ರೆ ಹಾಗೂ ಬ್ರಹ್ಮಾವರ ತಾಲೂಕಿನ ಉಪ್ಪೂರಿನಲ್ಲಿ 101.19 ಎಕರೆ ಜಮೀನಿನ ಭೂ ಸ್ವಾಧೀನ ಪ್ರಕ್ರಿಯೆಯನ್ನು ಶೀಘ್ರದಲ್ಲಿಯೇ ಪೂರ್ಣಗೊಳಿಸಿ ಕೆಐಎಡಿಬಿಗೆ ಹಸ್ತಾಂತರಿಸಬೇಕು ಎಂದು ಅವರು ನಿರ್ದೇಶನ ನೀಡಿದರು.

ಜಿಲ್ಲೆಯಲ್ಲಿ ಸಣ್ಣ ಕೈಗಾರಿಕೆ ಹಾಗೂ ಮದ್ಯಮ ಕೈಗಾರಿಕೆಗಳಲ್ಲಿ ಡಾ.ಸರೋಜಿನಿ ಮಹಿಷಿ ವರದಿಯಂತೆ ಸ್ಥಳೀಯರಿಗೆ ಉದ್ಯೋಗಾವಕಾಶ ಕಲ್ಪಿಸಬೇಕು. ಕಳೆದ ಮಾರ್ಚ್ ವೇಳೆಗೆ ಜಿಲ್ಲೆಯ 21ಕ್ಕೂ ಹೆಚ್ಚು ಕೈಗಾರಿಕೆಗಳಲ್ಲಿ ಪ್ರಗತಿ ಕಂಡು ಬಂದಿಲ್ಲ. ಕೇವಲ ಡಿ ಗ್ರೂಪ್ ಹುದ್ದೆಗೆ ಮಾತ್ರ ಅವಕಾಶ ಕಲ್ಪಿಸಲಾಗುತ್ತಿದೆ. ಎಲ್ಲಾ ಹುದ್ದೆಗಳಲ್ಲಿಯೂ ಸ್ಥಳೀಯರ ನೇಮ ಕಾತಿಗೆ ಅವಕಾಶ ಮಾಡಿಕೊಡಬೇಕು. ನೇಮಕಾತಿಗೆ ಸಂಬಂಧಪಟ್ಟ ಸೂಕ್ತ ದಾಖಲೆ ಗಳನ್ನು ನಿರ್ವಹಣೆ ಮಾಡಬೇಕು ಎಂದವರು ಸೂಚನೆ ನೀಡಿದರು.

ಹೊಸದಾಗಿ ಕೈಗಾರಿಕೆ ಸ್ಥಾಪನೆಗೆ ಹಂಚಿಕೆಯಾಗಿರುವ ಜಮೀನನ್ನು ಬಳಕೆ ಮಾಡಿಕೊಳ್ಳುವುದರೊಂದಿಗೆ ಹೊಸ ಕೈಗಾರಿಕೆ ಗಳನ್ನು ನಿರ್ದಿಷ್ಟ ಸಮಯದಲ್ಲಿ ಪ್ರಾರಂಭಿಸಬೇಕು. ಒಂದೊಮ್ಮೆ ಕೈಗಾರಿಕೆಗಳನ್ನು ಪ್ರಾರಂಭಿಸದೇ ಇದ್ದಲ್ಲಿ ಕೆಐಎಡಿಬಿ ಕಾಯ್ದೆ ಅನ್ವಯ ಶೇ.2ರಷ್ಟು ಹೆಚ್ಚುವರಿ ಶುಲ್ಕ ವಸೂಲಿ ಮಾಡಬೇಕು. ಕೈಗಾರಿಕೆ ಚಟುವಟಿಕೆ ಬದಲಾವಣೆ ಮಾಡಿ ನಡೆಸು ತ್ತಿದ್ದಲ್ಲಿ ಅವುಗಳಿಗೆ ಪೂರ್ವಾನುಮತಿ ಪಡೆಯದೆ ಇದ್ದಲ್ಲಿ ನೋಟಿಸ್ ನೀಡಿ ಅನುಮತಿ ಪಡೆಯಬೇಕು ಎಂದು ಸೂಚನೆ ನೀಡಿದರು.

ಕೈಗಾರಿಕಾ ಪ್ರದೇಶಗಳಲ್ಲಿ ಅಗತ್ಯವಿರುವ ಮೂಲಭೂತ ಸೌಕರ್ಯಗಳಾದ ರಸ್ತೆ, ಚರಂಡಿ ಸೇರಿದಂತೆ ನೀರಿನ ವ್ಯವಸ್ಥೆ ಕಲ್ಪಿಸಬೇಕು. ನಿರಂತರ ವಿದ್ಯುತ್ ಸಂಪರ್ಕ ಕಲ್ಪಿಸಲು ವಿದ್ಯುತ್ ಸರಬರಾಜು ಕೇಂದ್ರಗಳ ಸಾಮರ್ಥ್ಯವನ್ನು ಹೆಚ್ಚಿಸಬೇಕು ಎಂದು ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಕೆ.ಎಸ್.ಎಸ್.ಐ.ಡಿ.ಸಿಯ ಕೈಗಾರಿಕಾ ವಸಾಹತುನಲ್ಲಿರುವ ಖಾಲಿ ಇರುವ ಮಳಿಗೆ ಹಾಗೂ ನಿವೇಶನಗಳ ಹಂಚಿಕೆ ಮಾಡುವ ಕುರಿತು ಪ್ರಕಟಣೆ ನೀಡಲಾಗಿದ್ದು, ಶೀಘ್ರದಲ್ಲಿಯೇ ಹಂಚಿಕೆ ಮಾಡಲು ಕ್ರಮಕೈಗೊಳ್ಳುವಂತೆ ಸೂಚನೆ ನೀಡಿದರು.

ಜಿಲ್ಲೆಯಲ್ಲಿ ತಯಾರಾಗುವ ಉತ್ಪನ್ನಗಳಿಗೆ ವಿದೇಶಿ ರಫ್ತನ್ನು ಹೆಚ್ಚಿಸಲು ಅವುಗಳಿಗೆ ಪ್ರೋತ್ಸಾಹಿಸಬೇಉ. ಇತ್ತೀಚಿಗೆ ಜಿಲ್ಲೆ ಯಲ್ಲಿ ಮೀನಿನ ಉತ್ಪಾದನೆ ಸಹ ಹೆಚ್ಚಿದೆ. ರಫ್ತು ಸಮಿತಿಗಳು ವಿದೇಶಗಳಿಗೆ ಉತ್ಪನ್ನಗಳನ್ನು ರಫ್ತು ಮಾಡಲು ಬೇಕಾದ ಸಲಹೆಗಳನ್ನು ನೀಡಬೇಕು. ಈ ಬಗ್ಗೆ ಮಾಹಿತಿ-ಅರಿವು ಕಾರ್ಯಕ್ರಮಗಳನ್ನು ಆಯೋಜಿಸಬೇಕು ಎಂದ ಅವರು, ಪಂಚಾ ಯತ್ ಅಭಿವೃದ್ಧಿ ಅಧಿಕಾರಿಗಳು ಸಹ ಈ ಕಾರ್ಯಕ್ಕೆ ಕೈಜೋಡಿಸಬೇಕು ಎಂದರು.

ಗ್ರಾಮ ಪಂಚಾಯತ್ ವ್ಯಾಪ್ತಿಯ ಕೈಗಾರಿಕಾ ಪ್ರದೇಶಗಳಲ್ಲಿ ಕೈಗಾರಿಕೆ ಕಟ್ಟಡ ನಿರ್ಮಾಣ ಮಾಡಲು ಸ್ಥಳೀಯ ಪಂಚಾಯತಿಯಿಂದ ಅನುಮತಿ ಪಡೆದುಕೊಳ್ಳಬೇಕು. ಆಸ್ತಿ ತೆರಿಗೆಯನ್ನು ಸಹ ಪಾವತಿ ಮಾಡಬೇಕು ಎಂದು ಜಿಲ್ಲಾಧಿಕಾರಿ ಗಳು ತಿಳಿಸಿದರು.

ಸಭೆಯಲ್ಲಿ ಕೈಗಾರಿಕಾ ಇಲಾಖೆಯ ಜಂಟಿ ನಿರ್ದೇಶಕ ನಾಗರಾಜ್ ವಿ.ನಾಯಕ್, ಪೌರಾಯುಕ್ತ ರಾಯಪ್ಪ, ಲೀಡ್ ಬ್ಯಾಂಕ್ ಮ್ಯಾನೆಜರ್ ಹರೀಶ್, ಕೆ.ಐ.ಎ.ಡಿ.ಬಿಯ ಶ್ರೀನಿವಾಸ ಮೂರ್ತಿ ಹಾಗೂ ಇತರ ಇಲಾಖಾ ಅಧಿಕಾರಿಗಳು ಉಪಸ್ಥಿತರಿದ್ದರು.





Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News