×
Ad

ರಾ.ಹೆದ್ದಾರಿ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಿ: ಸಂಸದ ಕೋಟ ಶ್ರೀನಿವಾಸ ಪೂಜಾರಿ ಸೂಚನೆ

Update: 2024-10-30 21:20 IST

ಉಡುಪಿ, ಅ.30: ಜಿಲ್ಲೆಯಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಕಾಮಗಾರಿಗಳು, ಮೇಲ್ಸೇತುವೆ ಕಾಮಗಾರಿ, ಅಂಡರ್‌ಪಾಸ್ ಹಾಗೂ ಹೆದ್ದಾರಿ ನಿರ್ವಹಣೆ ಕಾಮಗಾರಿಗಳನ್ನು ವಿಳಂಬಲ್ಲದಂತೆ ತ್ವರಿತ ಗತಿಯಲ್ಲಿ ಕೈಗೊಳ್ಳುವುದರೊಂದಿಗೆ ಸಾರ್ವಜನಿಕ ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕು ಎಂದು ಸಂಬಂಧಿತ ಅಧಿಕಾರಿಗಳು ಹಾಗೂ ಗುತ್ತಿಗೆದಾರರಿಗೆ ಉಡುಪಿ ಚಿಕ್ಕಮಗಳೂರು ಲೋಕಸಭಾ ಸದಸ್ಯ ಕೋಟ ಶ್ರೀನಿವಾಸ್ ಪೂಜಾರಿ ಹೇಳಿದ್ದಾರೆ.

ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳ ಪ್ರಗತಿ ಪರಿಶೀಲನೆ ಮತ್ತು ಭೂಸ್ವಾಧೀನ ಪ್ರಕ್ರಿಯೆಗೆ ಸಂಬಂಧಿಸಿದಂತೆ ಚರ್ಚಿಸುವ ಸಲುವಾಗಿ ಬುಧವಾರ ಕರೆಯಲಾದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.

ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳಿಗೆ ಅವಶ್ಯವಿರುವ ಭೂ ಸ್ವಾಧೀನ ಪ್ರಕ್ರಿಯೆಯನ್ನು ಚುರುಕುಗೊಳಿಸಿ, ಭೂಮಾಲಕರಿಗೆ ವೈಜ್ಞಾನಿಕ ರೀತಿಯಲ್ಲಿ ಪರಿಹಾರ ಹಣವನ್ನು ವಿಳಂಬಲ್ಲದೇ ಒದಗಿಸಿ ಹೆದ್ದಾರಿ ಕಾಮಗಾರಿ ಗಳನ್ನು ಕೂಡಲೇ ಕೈಗೊಳ್ಳಬೇಕು. ನ್ಯಾಯಾಲಯದಲ್ಲಿರುವ ಪ್ರಕರಣಗಳನ್ನು ಶೀಘ್ರವಾಗಿ ಇತ್ಯರ್ಥವಾಗುವ ರೀತಿಯಲ್ಲಿ ಕ್ರಮ ವಹಿಸಬೇಕು ಎಂದರು.

ರಾ.ಹೆ. 66ರ ಸಂತೆಕಟ್ಟೆ ರಸ್ತೆ ಕಾಮಗಾರಿಯಲ್ಲಿ ಉಡುಪಿಯಿಂದ ಕುಂದಾಪುರದ ಕಡೆಗೆ ಹೋಗುವ ರಸ್ತೆ ಬದಿಯ ಸೈಡ್‌ ವಾಲ್‌ನ್ನು ನವೆಂಬರ್ ಒಳಗೆ ಪೂರ್ಣಗೊಳಿಸಬೇಕು. ಅದರ ಪಕ್ಕದ ಸರ್ವಿಸ್ ರಸ್ತೆ ಕಾಮಗಾರಿಗೆ ಕೂಡಲೇ ಯೋಜನಾ ವರದಿಯನ್ನು ತಯಾರಿಸಿ, ಕಾಮಗಾರಿಯನ್ನು ಆದ್ಯತೆಯ ಮೇಲೆ ಕೈಗೊಳ್ಳಬೇಕು ಎಂದರು.

ರಾಷ್ಟ್ರೀಯ ಹೆದ್ದಾರಿ 169 ಎಯಲ್ಲಿ ಪರ್ಕಳ ಸಮೀಪ ತಡೆಹಿಡಿಯ ಲ್ಪಟ್ಟಿರುವ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಕಾಮಗಾ ರಿಗೆ ಸಂಬಂಧಿಸಿದಂತೆ ನ್ಯಾಯಾಲಯದ ಆದೇಶ ಸರಕಾರದ ಪರವಾಗಿ ಆಗಿದ್ದು, ಭೂ ಮಾಲಕರಿಗೆ ಕೂಡಲೇ ಭೂಸ್ವಾಧೀ ನದ ಪರಿಹಾರ ಹಣವನ್ನು ನೀಡಬೇಕು. ಜೊತೆಗೆ ಕಾಮಗಾರಿಯನ್ನು ಸಹ ಪ್ರಾರಂಭಿಸಬೇಕು. ಪೆರ್ಡೂರಿನ ಅನಂತೇಶ್ವರ ದೇವಸ್ಥಾನದ 600ಮೀ. ವ್ಯಾಪ್ತಿಯಲ್ಲಿ ಕಾಮಗಾರಿ ಸಂಬಂಧ ನ್ಯಾಯಾಲಯ ತಡೆಯಾಜ್ಞೆ ನೀಡಿದೆ. ಇದನ್ನು ಬಿಟ್ಟು ಬಾಕಿ ಉಳಿದ ಕಾಮಗಾರಿಯನ್ನು ಕೈಗೊಳ್ಳಬೇಕು. ದೇವಸ್ಥಾನ ಹಾಗೂ ಕಲ್ಯಾಣಿಯ ಮೂಲ ಸ್ವರೂಪಕ್ಕೆ ಧಕ್ಕೆ ಆಗಬಾರ ದೆಂಬುದು ಭಕ್ತರ ಬೇಡಿಕೆಯಾಗಿದೆ. ಇದನ್ನು ಮನಗಂಡು ರಸ್ತೆ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ಮುಂದಾಗಬೇಕು ಎಂದರು.

ಕರಾವಳಿ ಜಂಕ್ಷನ್‌ನಿಂದ ಮಲ್ಪೆ ಜಂಕ್ಷನ್‌ವರೆಗಿನ ರಾಷ್ಟ್ರೀಯ ಹೆದ್ದಾರಿ ನಿರ್ಮಾಣಕ್ಕೆ ಅಗತ್ಯವಿರುವ ಭೂಸ್ವಾಧೀನ ಪ್ರಕ್ರಿಯೆ ಯನ್ನು ಪೂರ್ಣಗೊಳಿಸು ವುದರೊಂದಿಗೆ ಭೂ ಮಾಲಕರಿಗೆ ಪರಿಹಾರದ ಹಣವನ್ನು ನವೆಂಬರ್ 10ಕ್ಕೆ ಮೊದಲು ನೀಡುವು ದರ ಜೊತೆಗೆ ಕಾಮಗಾರಿಯ ವೇಗ ಹೆಚ್ಚಿಸಬೇಕು ಎಂದರು.

ರಾ.ಹೆ 66ರ ಹೆಜಮಾಡಿ ಹಾಗೂ ಸಾಸ್ತಾನದ ಟೋಲ್‌ಗೇಟ್ ಬಳಿ ರಾತ್ರಿ ವೇಳೆ ವಾಹನ ಚಾಲಕರಿಗೆ ಅನುಕೂಲವಾಗು ವಂತೆ ಕ್ಯಾಂಟೀನ್ ಪ್ರಾರಂಭಿ ಸುವ ಕುರಿತು ಕೂಡಲೇ ಟೆಂಡರ್ ಕರೆಯಬೇಕು. ಟೋಲ್‌ನ ಸುತ್ತಮುತ್ತಲಿನ 5 ಕಿ.ಮೀ. ವ್ಯಾಪ್ತಿಯಲ್ಲಿ ವಾಸಿಸುವ ಸ್ಥಳೀಯ ಜನರ ವಾಹನಗಳಿಗೆ ರಿಯಾಯಿತಿ ನೀಡಬೇಕು ಎಂದರು.

ಕಟಪಾಡಿ ಮತ್ತು ಅಂಬಲಪಾಡಿಯಲ್ಲಿ ಓವರ್‌ಪಾಸ್ ನಿರ್ಮಾಣ ಕಾಮಗಾರಿಯನ್ನು ಕೈಗೊಳ್ಳಲು ಅಗತ್ಯವಿರುವ ಎಲ್ಲಾ ಮುಂಜಾಗ್ರತಾ ಕಾರ್ಯಗಳನ್ನು ಕೈಗೊಳ್ಳುವುದರೊಂದಿಗೆ ಕಾಮಗಾರಿ ಪ್ರಾರಂಭಿಸಬೇಕು ಎಂದ ಅವರು, ಇಂದ್ರಾಳಿ ರೈಲ್ವೇ ಮೇಲ್ಸೇತುವೆ ಕಾಮಗಾರಿಯ ವೇಗವನ್ನು ಮತ್ತಷ್ಟು ಹೆಚ್ಚಿಸಬೇಕು. ರೈಲ್ವೇ ಇಲಾಖೆ, ರಾಷ್ಟ್ರೀಯ ಹೆದ್ದಾರಿ ವಿಭಾಗ ದವರು ಹಾಗೂ ಗುತ್ತಿಗೆದಾರರುಗಳು ಸಮನ್ವಯದೊಂದಿಗೆ ಪರಿಶೀಲನೆ, ಅನುಮತಿ, ರೈಲ್ವೇ ಹಳಿಗಳ ಮೇಲೆ ಗರ್ಡರ್ ಕೂರಿಸುವಿಕೆಗೆ ಎಲ್ಲಾ ರೀತಿಯ ಪೂರ್ವ ತಯಾರಿಗಳನ್ನು ಕೈಗೊಂಡು, ನವೆಂಬರ್ ತಿಂಗಳ ಅಂತ್ಯದ ಒಳಗೆ ಕೆಲಸ ಮುಗಿಸಲು ಮುಂದಾಗಬೇಕು ಎಂದರು.

ಸವಣೂರು-ಬಿರ್ಕನಕಟ್ಟೆ ರಸ್ತೆ ಕಾಮಗಾರಿಯು ಮಳೆಯಿಂದಾಗಿ ನಿಧಾನ ವಾಗಿದ್ದು, ಸದ್ಯ ಮಳೆ ಇಲ್ಲದೇ ಇರುವುದರಿಂದ ಕಾಮಗಾರಿ ಪ್ರಗತಿಯನ್ನು ತ್ವರಿತಗೊಳಿಸಬೇಕು. ಸಾರ್ವಜನಿಕರಿಗೆ ಅನುಕೂಲವಾಗುವ ರೀತಿಯಲ್ಲಿ ಸರ್ವಿಸ್ ರಸ್ತೆ, ತಾತ್ಕಾಲಿಕ ಬಸ್ ನಿಲ್ದಾಣ ಸೇರಿದಂತೆ ಅಗತ್ಯವಿರುವ ಪೂರಕ ಕಾಮಗಾರಿಗಳನ್ನು ಕೈಗೊಳ್ಳಬೇಕು ಎಂದರು.

ರಾಷ್ಟ್ರೀಯ ಹೆದ್ದಾರಿ ಉದ್ದಕ್ಕೂ ಬೀದಿ ದೀಪಗಳ ನಿರ್ವಹಣೆಯನ್ನು ವ್ಯವಸ್ಥಿತವಾಗಿ ಮಾಡಬೇಕು. ಸಾಸ್ತಾನದಿಂದ ಕುಂದಾಪುರದವರೆಗಿನ ರಾಷ್ಟ್ರೀಯ ಹೆದ್ದಾರಿ ರಸ್ತೆಯ ನಿರ್ವಹಣೆ ಕಾಮಗಾರಿಗಳನ್ನು ಆಗಿಂದಾಗ್ಗೆ ಮಾಡಬೇಕು ಎಂದರು.

ಸಭೆಯಲ್ಲಿ ಶಾಸಕರಾದ ಯಶ್‌ಪಾಲ್ ಎ ಸುವರ್ಣ, ಗುರ್ಮೆ ಸುರೇಶ್ ಶೆಟ್ಟಿ, ಕಿರಣ್ ಕುಮಾರ್ ಕೊಡ್ಗಿ, ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ, ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ. ಅರುಣ್ ಕೆ, ಅಪರ ಜಿಲ್ಲಾಧಿಕಾರಿ ಮಮತಾ ದೇವ ಜಿ.ಎಸ್, ಡಿಎಫ್‌ಓ ಗಣಪತಿ, ಸಹಾಯಕ ಕಮಿಷನರ್ ಮಹೇಶ್ಚಂದ್ರ, ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕ ಅಬ್ದುಲ್ಲಾ ಮೊಹಮ್ಮದ್ ಅಜ್ಮಿ, ಗುತ್ತಿಗೆದಾರರು ಹಾಗೂ ಇತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News