ಕನಕ ಜಯಂತಿ ಆಚರಣೆ: ಪೂರ್ವಭಾವಿ ಸಭೆ
ಉಡುಪಿ: ಕನಕ ಜಯಂತಿಯನ್ನು ಜಿಲ್ಲಾ ಮಟ್ಟದಲ್ಲಿ ಆಚರಿಸುವ ಕುರಿತು ಪೂರ್ವ ಸಿದ್ಧತಾ ಸಭೆಯು ಇಂದು ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ, ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್ ಅಧ್ಯಕ್ಷತೆಯಲ್ಲಿ ನಡೆಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕನಕ ಜಯಂತಿ ಕಾರ್ಯಕ್ರಮ ವನ್ನು ಜಿಲ್ಲಾ ಮಟ್ಟದಲ್ಲಿ ನ. 18ರಂದು ಬೆಳಗ್ಗೆ 9:30ಕ್ಕೆ ನಗರದ ಅಜ್ಜರಕಾಡು ಭುಜಂಗ ಶೆಟ್ಟಿ ಪಾರ್ಕ್ನಲ್ಲಿ ಅರ್ಥಪೂರ್ಣ ಹಾಗೂ ಅದ್ಧೂರಿಯಾಗಿ ಆಯೋಜಿಸಲು ಅಗತ್ಯವಿರುವ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ತಿಳಿಸಿದರು.
ಕನಕ ಜಯಂತಿ ಆಂಗವಾಗಿ ಕನಕದಾಸರ ವಿಚಾರಧಾರೆ ಮತ್ತು ಅವರ ಚಿಂತನೆಗಳನ್ನು ಜನರಿಗೆ ತಿಳಿಸುವ ಉದ್ದೇಶದಿಂದ ನುರಿತ ಉಪನ್ಯಾಸಕರಿಂದ ಉಪನ್ಯಾಸವನ್ನು ಏರ್ಪಡಿಸಬೇಕು ಎಂದ ಅವರು, ಶಿಷ್ಟಾಚಾರದಂತೆ ಆಹ್ವಾನ ಪತ್ರಿಕೆಯನ್ನು ಮುದ್ರಿಸಿ, ಜನಪ್ರತಿನಿಧಿಗಳಿಗೆ ಹಾಗೂ ಗಣ್ಯರನ್ನು ಆಹ್ವಾನಿಸ ಬೇಕು ಎಂದರು.
ಕಾರ್ಯಕ್ರಮದ ಅಂಗವಾಗಿ ಸಭಾ ಕಾರ್ಯಕ್ರಮದ ನಂತರ ಕನಕದಾಸ ಸಮಾಜ ಸೇವಾ ಸಂಘದ ವತಿಯಿಂದ ಭುಜಂಗ ಪಾರ್ಕ್ನಿಂದ ಕೃಷ್ಣಮಠದ ಕನಕಮಂಟಪದವರೆಗೆ ಮೆರವಣಿಗೆ ನಡೆಯಲಿದೆ ಎಂದೂ ಅವರು ತಿಳಿಸಿದರು.
ಸಭೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ, ಕನಕದಾಸ ಸಮಾಜ ಸೇವಾ ಸಂಘದ ಅಧ್ಯಕ್ಷ ಹನುಮಂತ ಡೊಳ್ಳಿನ, ಕರ್ನಾಟಕ ಪ್ರದೇಶ ಕುರುಬರ ಸಂಘದ ರಾಜ್ಯ ಸಹ ಕಾರ್ಯದರ್ಶಿ ಬಸವರಾಜ ಹಾಗೂ ಇತರರು ಉಪಸ್ಥಿತರಿದ್ದರು.