ದೇಶದಲ್ಲಿ ಅಂಗವಿಕಲರಿಗಾಗಿ ಕ್ರೀಡಾ ಕೇಂದ್ರಗಳ ಸ್ಥಾಪನೆ: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್
ಉಡುಪಿ, ಜ.23: ಭಾರತೀಯ ಕ್ರೀಡಾ ಪ್ರಾಧಿಕಾರವು ಕ್ರೀಡಾ ಚಟುವಟಿಕೆ ಗಳಿಗೆ ಪರಿಣಾಮಕಾರಿ ಯೋಜನೆಗಳನ್ನು ಸಿದ್ಧಪಡಿಸಿ, ಜಾರಿಗೊಳಿಸಿದೆ. ಇದರ ಪರಿಣಾಮ ಭಾರತೀಯ ಕ್ರೀಡಾಪಟುಗಳು ಏಷ್ಯನ್, ಒಲಿಂಪಿಕ್ಸ್ ಮತ್ತು ಪ್ಯಾರಾಲಿಂಪಿಕ್ ಕ್ರೀಡಾಕೂಟಗಳಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ್ದಾರೆ. ಕ್ರೀಡೆಯಲ್ಲಿ ಅಂಗವಿಕಲ ಆಟಗಾರರನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ದೇಶದಲ್ಲಿ ಅಂಗವಿಕಲರಿಗಾಗಿ ಕ್ರೀಡಾ ಕೇಂದ್ರಗಳನ್ನು ಸ್ಥಾಪಿಸಲಾಗುತ್ತಿದೆ ಎಂದು ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹೇಳಿದ್ದಾರೆ.
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ಒಲಿಂಪಿಕ್ ಸಂಸ್ಥೆ ಹಾಗೂ ಜಿಲ್ಲಾಡಳಿತ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ಅಜ್ಜರಕಾಡು ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣ ದಲ್ಲಿ ಗುರುವಾರ ನಡೆದ ಕರ್ನಾಟಕ ಕ್ರೀಡಾಕೂಟ-2025ರ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡುತ್ತಿದ್ದರು.
ಕ್ರೀಡೆಯು ಜೀವನದ ಒಂದು ತತ್ವಶಾಸ್ತ್ರವಾಗಿದೆ. ಜೀವನದಲ್ಲಿ ಶಿಸ್ತು, ಸಂಯಮ, ಹೋರಾಟ ಮತ್ತು ಸಕಾರಾತ್ಮಕ ಮನೋಭಾವ ವನ್ನು ಅಳವಡಿಸಿ ಕೊಳ್ಳಲು ಕ್ರೀಡೆಗಳು ನಮ್ಮನ್ನು ಪ್ರೇರೇಪಿಸುತ್ತವೆ. ನಮ್ಮಲ್ಲಿ ಏಕತೆ, ಶಿಸ್ತು ಮತ್ತು ಸಮಾನತೆಯಂತಹ ಗುಣಗಳನ್ನು ಅಭಿವೃದ್ಧಿಪಡಿಸುತ್ತದೆ. ಕ್ರೀಡಾ ತರಬೇತಿ ಯಲ್ಲಿ ಆಧುನಿಕ ಸೌಲಭ್ಯಗಳನ್ನು ಅಳವಡಿಸುವುದರಿಂದ ಹೊಸ ಕ್ರೀಡಾ ಪ್ರತಿಭೆಗಳನ್ನು ಅಭಿವೃದ್ಧಿಪಡಿಸಲು ಸಹಕಾರಿಯಾಗುತ್ತದೆ ಎಂದರು.
ನಾವು ಕ್ರೀಡೆಯನ್ನು ನಮ್ಮ ಜೀವನದ ನಿಯಮಿತ ಭಾಗವನ್ನಾಗಿ ಮಾಡಿ ಕೊಳ್ಳಬೇಕು. ಕ್ರೀಡೆಗಳು ನಮ್ಮ ಜೀವನದ ಅವಿಭಾಜ್ಯ ಅಂಗವಾಗಿದೆ. ನಮ್ಮ ಜೀವನಕ್ಕೆ ಶಕ್ತಿ ಮತ್ತು ಉತ್ಸಾಹದಿಂದ ತುಂಬುತ್ತದೆ. ಮನರಂಜನೆಯ ಜೊತೆಗೆ ನಮ್ಮ ದೈಹಿಕ, ಮಾನಸಿಕ, ಬೌದ್ಧಿಕ ಮತ್ತು ಸಾಮಾಜಿಕ ಬೆಳವಣಿಗೆಯಲ್ಲೂ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಅವರು ಅಭಿಪ್ರಾಯ ಪಟ್ಟರು.
ರಾಜ್ಯ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಮಾತನಾಡಿದರು. ಅಧ್ಯಕ್ಷತೆಯನ್ನು ಉಡುಪಿ ಶಾಸಕ ಯಶ್ಪಾಲ್ ಎ.ಸುವರ್ಣ ವಹಿಸಿದ್ದರು. ಈ ಸಂದರ್ಭದಲ್ಲಿ ವಿಜೇತರಿಗೆ ಬಹುಮಾನಗಳನ್ನು ವಿತರಿಸಲಾಯಿತು.
ಸಂಸದ ಕೋಟ ಶ್ರೀನಿವಾಸ ಪೂಜಾರಿ, ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ, ಗುರುರಾಜ್ ಗಂಟಿಹೊಳೆ, ಕಿರಣ್ ಕುಮಾರ್ ಕೊಡ್ಗಿ, ವಿಧಾನ ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ, ಕರ್ನಾಟಕ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಡಿ.ಎಸ್.ಗಟ್ಟಿ, ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರಾನಾಥ್ ಗಟ್ಟಿ, ಕೊಂಕಣಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷೆ ಜೋಕಿಂ ಸ್ಟಾನ್ಲಿ ಅಲ್ವಾರಿಸ್, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು, ಮಾಜಿ ಸಚಿವರಾದ ಅಭಯಚಂದ್ರ ಜೈನ್, ವಿನಯ್ ಕುಮಾರ್ ಸೊರಕೆ, ಮಾಹೆ ಪ್ರೊಚಾನ್ಸೆಲರ್ ಡಾ.ಹೆಚ್.ಎಸ್.ಬಲ್ಲಾಳ್, ಸಹ ಕುಲಪತಿ ಡಾ.ಎಂ.ಡಿ.ವೆಂಕಟೇಶ್ ಮುಖ್ಯ ಅತಿಥಿಗಳಾಗಿದ್ದರು.
ವೇದಿಕೆಯಲ್ಲಿ ದ.ಕ. ಜಿಲ್ಲಾಧಿಕಾರಿ ಮಲ್ಲೈ ಮುಗಿಲನ್, ದ.ಕ. ಜಿಪಂ ಸಿಇಓ ಡಾ..ಆನಂದ್ ಕೆ., ಎಸ್ಪಿ ಯತೀಶ್ ಎನ್., ಕರ್ನಾಟಕ ಒಲಂಪಿಕ್ ಸಂಸ್ಥೆಯ ಮಹಾ ಕಾರ್ಯದರ್ಶಿ ಟಿ.ಅನಂತರಾಜು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಕಾರ್ಯದರ್ಶಿ ರಂದೀಪ್ ಡಿ., ಆಯುಕ್ತ ಚೇತನ್ ಆರ್., ಉಡುಪಿ ಜಿಪಂ ಸಿಇಓ ಪ್ರತೀಕ್ ಬಾಯಲ್, ಎಸ್ಪಿ ಡಾ.ಅರುಣ್ ಕೆ. ಉಪಸ್ಥಿತರಿದ್ದರು.
ಫಿಬಾ ಏಷ್ಯಾ ಮತ್ತು ಕರ್ನಾಟಕ ಒಲಂಪಿಕ್ ಸಂಸ್ಥೆಯ ಅಧ್ಯಕ್ಷ ಡಾ.ಕೆ ಗೋವಿಂದರಾಜ್ ಪ್ರಾಸ್ತಾವಿಕವಾಗಿ ಮಾತನಾಡಿ ದರು. ಉಡುಪಿ ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ಸ್ವಾಗತಿಸಿದರು. ಶಂಕರ್ ಪ್ರಕಾಶ್ ಕಾರ್ಯಕ್ರಮ ನಿರೂಪಿಸಿದರು. ಎನ್ಸಿಸಿ ವಿದ್ಯಾರ್ಥಿಗಳು, ಕ್ರೀಡಾಪಟುಗಳಿಂದ ಆಕರ್ಷಕ ಪಥಸಂಚಲನ ನಡೆಯಿತು. ಕಲಾ ತಂಡಗಳು ಪ್ರದರ್ಶನ, ಮಲ್ಲ ಕಂಬ ಪ್ರದರ್ಶನ ಆಕರ್ಷಣೀಯವಾಗಿತ್ತು. ಬಳಿಕ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.
ಕ್ರೀಡೆಯಿಂದ ಜಾತಿಬೇಧ ದೂರ: ಪರಮೇಶ್ವರ್
ಕ್ರೀಡೆಯು ಯಾವುದೇ ಜಾತಿ, ಧರ್ಮಗಳ ಬೇಧ ಇಲ್ಲದ ಕ್ಷೇತ್ರ. ಇದರಲ್ಲಿ ಯುವಕರನ್ನು ಹೆಚ್ಚು ತೊಡಗಿಸಿಕೊಂಡರೆ ಭವಿಷ್ಯ ಬೇಧ ಭಾವಗಳು ದೂರ ಆಗಬಹುದು. ಇಂದು ಯುವಜನತೆ ಮಾದಕ ವ್ಯಸನಿಗಳಾಗಿ ತಮ್ಮ ಭವಿಷ್ಯವನ್ನು ಹಾಳು ಮಾಡುತ್ತಿದ್ದಾರೆ. ಇದರ ಪರಿಣಾಮ ಯುವಜನತೆ ಅಪರಾಧ ಕೃತ್ಯಗಳಿಗೆ ತೊಡಗಿಸಿಕೊಳ್ಳುತ್ತಿದ್ದಾರೆ. ಇದನ್ನು ತಡೆಯಲು ಯುವಕರು ಹೆಚ್ಚು ಹೆಚ್ಚು ಸಂಖ್ಯೆಯಲ್ಲಿ ಕ್ರೀಡೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು.
ಸಿಂಥೆಟಿಕ್ ಟ್ರ್ಯಾಕ್ ಇಂದು ರಾಜ್ಯದ 18 ಜಿಲ್ಲೆಗಳಲ್ಲಿವೆ. ಮುಂದೆ ರಾಜ್ಯ ಸರಕಾರದ ಎಲ್ಲ ಜಿಲ್ಲೆಗಳಲ್ಲಿಯೂ ನಿರ್ಮಿಸಲು ಪ್ರಯತ್ನ ಮಾಡುತ್ತಿದೆ. ಮುಂದಿನ ಈ ಕ್ರೀಡಾಕೂಟವನ್ನು ತುಮಕೂರಿನಲ್ಲಿ ಮಾಡಬೇಕೆಂದು ನಾನು ವಿನಂತಿಸಿಕೊಳ್ಳುತ್ತಿ ದ್ದೇನೆ. ತುಮಕೂರಿನಲ್ಲಿ 58 ಕೋಟಿ ರೂ. ವೆಚ್ಚದಲ್ಲಿ ಅಂತಾ ರಾಷ್ಟ್ರೀಯ ಸ್ಟಾಂರ್ಡರ್ನ ಕ್ರಿಡಾಂಗಣವನ್ನು ನಿರ್ಮಿಸಿದ್ದೇವೆ ಎಂದು ಅವರು ತಿಳಿಸಿದರು.
(ಕರ್ನಾಟಕ ಕ್ರೀಡಾಕೂಟ-2025ರ ಸಮಾರೋಪ ಸಮಾರಂಭದಲ್ಲಿ ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಬೆಸ್ಟ್ ಅಥ್ಲೆಟ್ ಪ್ರಶಸ್ತಿಯನ್ನು ಪ್ರದಾನ ಮಾಡಿದರು)