×
Ad

ಜಾತಿನಿಂದನೆ, ಹಲ್ಲೆ ಪ್ರಕರಣ: ಆರೋಪಿಗೆ ಜೈಲು ಶಿಕ್ಷೆ

Update: 2025-01-27 21:58 IST

ಉಡುಪಿ, ಜ.27: ಪರಿಶಿಷ್ಟ ಜಾತಿಗೆ ಸೇರಿದ ವ್ಯಕ್ತಿಗೆ ಜಾತಿ ನಿಂದನೆ ಮಾಡಿ ಹಲ್ಲೆಗೈದ ಪ್ರಕರಣದ ಆರೋಪಿಗೆ ಉಡುಪಿಯ ಜಿಲ್ಲಾ ಸತ್ರ ಮತ್ತು ಪ್ರಧಾನ ನ್ಯಾಯಾಲಯ ಶಿಕ್ಷೆ ವಿಧಿಸಿ ಆದೇಶ ನೀಡಿದೆ.

ಕಂಚಿನಡ್ಕದ ಅಶ್ರಫ್ ಶಿಕ್ಷೆಗೆ ಗುರಿಯಾದ ಆರೋಪಿ. 2016ರ ಫೆ.28ರಂದು ಉಡುಪಿ ತಾಲೂಕಿನ ನಡ್ಸಾಲು ಗ್ರಾಮದ ಕಂಚಿನಡ್ಕದ ನಿವಾಸಿ ಪರಿಶಿಷ್ಟ ಜಾತಿಗೆ ಸೇರಿದ ಗೋವಿಂದ ಎಂಬವರಿಗೆ ಆರೋಪಿ ಕ್ಷುಲ್ಲಕ ವಿಚಾರಕ್ಕೆ ಜಾತಿ ನಿಂದನೆ ಮಾಡಿ ಕಬ್ಬಿಣದ ಪಂಚ್‌ನಿಂದ ಹಲ್ಲೆ ನಡೆಸಿ, ಅವಾಚ್ಯ ಶಬ್ದಗಳಿಂದ ಬೈದು ಜೀವ ಬೆದರಿಕೆ ಹಾಕಿರುವುದಾಗಿ ದೂರಲಾಗಿದೆ.

ಈ ಬಗ್ಗೆ ಪಡುಬಿದ್ರಿ ಠಾಣೆಯಲ್ಲಿ ದೂರು ದಾಖಲಾಗಿದ್ದು, ಆರೋಪಿಯ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಲಾಗಿತ್ತು. ನ್ಯಾಯಾಧೀಶ ಕಿರಣ್ ಎಸ್.ಗಂಗಣ್ಣವರ್, ಆರೋಪಿತನು ತಪ್ಪಿತಸ್ಥ ಎಂದು ತಿರ್ಮಾನಿಸಿ ಕಲಂ 324ರ ಅಪರಾಧಕ್ಕೆ 1 ವರ್ಷ ಸಾದ ಶಿಕ್ಷೆ ಮತ್ತು ಕಲಂ 504 ರಡಿಯ ಅಪರಾಧಕ್ಕೆ 3 ತಿಂಗಳ ಸಾದಾ ಶಿಕ್ಷೆ ಮತ್ತು ಕಲಂ 506 ರಡಿಯ ಅಪರಾಧಕ್ಕೆ 6 ತಿಂಗಳ ಸಾದಾ ಶಿಕ್ಷೆ ಮತ್ತು ಒಟ್ಟು 20ಸಾವಿರ ರೂ. ದಂಡ, ಎಸ್.ಸಿ/ಎಸ್.ಟಿ ಕಾಯ್ದೆ ಕಲಂ 3(1)(ಆರ್)(ಎಸ್) ರಡಿಯ ಅಪರಾಧಕ್ಕೆ 1 ವರ್ಷ ಸಾದಾ ಶಿಕ್ಷೆ ಮತ್ತು 5,000ರೂ. ದಂಡ ವಿಧಿಸಿ ಆದೇಶ ನೀಡಿದರು.

ಆರೋಪಿಯಿಂದ ವಸೂಲಾದ ದಂಡದ ಮೊತ್ತದ ಪೈಕಿ 20,000ರೂ. ವನ್ನು ದೂರುದಾರರಿಗೆ ಪರಿಹಾರ ರೂಪದಲ್ಲಿ ಪಾವತಿಸಬೇಕೆಂದು ನ್ಯಾಯಾಲಯ ಆದೇಶಿಸಿದೆ. ಸರಕಾರದ ಪರವಾಗಿ ಸರಕಾರಿ ಅಭಿಯೋಜಕ ಜಯರಾಮ ಶೆಟ್ಟಿ ವಾದ ಮಂಡಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News