ಉಡುಪಿ ಜಿಲ್ಲೆಯ ಬೇಡಿಕೆಗಳಿಗೆ ಬಜೆಟ್ನಲ್ಲಿ ಅನುದಾನ ನೀಡುವಂತೆ ಆಗ್ರಹಿಸಿ ಮನವಿ
ಉಡುಪಿ: ಈ ಬಾರಿಯ ರಾಜ್ಯ ಬಜೆಟ್ನಲ್ಲಿ ಉಡುಪಿ ಜಿಲ್ಲೆಯ ಕೆಲವು ಪ್ರಮುಖ ಬೇಡಿಕೆಗಳನ್ನು ಪೂರೈಸಲು ಅನುದಾನವನ್ನು ಬಿಡುಗಡೆಗೊಳಿಸ ಬೇಕೆಂದು ಒತ್ತಾಯಿಸಿ ಎಸ್ಡಿಪಿಐ ಉಡುಪಿ ಜಿಲ್ಲಾ ಸಮಿತಿ ಜಿಲ್ಲಾಧಿಕಾರಿಗಳ ಮುಖಾಂತರ ಮುಖ್ಯಮಂತ್ರಿಗಳಿಗೆ ಇಂದು ಮನವಿ ಸಲ್ಲಿಸಿತು.
ಜಿಲ್ಲೆಯಲ್ಲಿ ಸರಕಾರಿ ವೈದ್ಯಕೀಯ ಹಾಗೂ ಇಂಜಿನಿಯರಿಂಗ್ ಕಾಲೇಜು ಗಳನ್ನು ನಿರ್ಮಿಸಬೇಕು. ಜಿಲ್ಲೆಯಲ್ಲಿ ಸುಮಾರು ಶೇ.8ರಷ್ಟು ಜನಸಂಖ್ಯೆ ಇರುವ ಮುಸ್ಲಿಂ ಸಮುದಾಯದ ಅಭಿವೃದ್ಧಿಗಾಗಿ ಪ್ರತಿ ತಾಲೂಕುಗಳಲ್ಲಿ ಸಮುದಾಯ ಭವನಗಳನ್ನು ನಿರ್ಮಿಸಬೇಕು. ಅಲಸಂಖ್ಯಾತ ವಿದ್ಯಾರ್ಥಿಗಳಿಗಾಗಿ ವಸತಿ ಶಾಲೆಗಳನ್ನು ನಿರ್ಮಿಸಬೇಕು. ಸರಕಾರಿ ಶಾಲೆಗಳ ಅಭಿವೃದ್ಧಿಗೆ ವಿಶೇಷ ಅನುದಾನವನ್ನು ಬಿಡುಗಡೆಗೊಳಿಸಬೇಕು.
ವಾರಾಹಿ ಕುಡಿಯುವ ನೀರಿನ ಯೋಜನೆಯನ್ನು ಶೀಘ್ರವಾಗಿ ಪೂರ್ಣ ಗೊಳಿಸಬೇಕು. ದೇಶದಲ್ಲೇ ಖ್ಯಾತಿಯನ್ನು ಗಳಿಸಿರುವ ಜಿಲ್ಲೆಯ ವಿಶೇಷ ಕೃಷಿಗಳಾದ ಮಟ್ಟು ಗುಳ್ಳ ಹಾಗೂ ಉಡುಪಿ ಮಲ್ಲಿಗೆ ಬೆಳೆಗಳಿಗೆ ಪ್ರೋತ್ಸಾಹ ನೀಡಬೇಕು. ಉಡುಪಿ ಜಿಲ್ಲಾ ಪ್ರವಾಸೋದ್ಯಮದ ಅಭಿವೃದ್ಧಿಗೆ ಅನುದಾನವನ್ನು ಮೀಸಲಿಡಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಯಿತು.
ಮನವಿಯನ್ನು ಉಡುಪಿ ಜಿಲ್ಲಾಧಿಕಾರಿ ಡಾ.ವಿದ್ಯಾ ಕುಮಾರಿ ಸ್ವೀಕರಿಸಿದರು. ಎಸ್ಡಿಪಿಐ ಉಡುಪಿ ಜಿಲ್ಲಾ ಉಪಾಧ್ಯಕ್ಷ ನಝೀರ್ ಅಹಮದ್ ನೇತೃತ್ವದ ನಿಯೋಗದಲ್ಲಿ ಎಸ್ಡಿಪಿಐ ಜಿಲ್ಲಾ ಮುಖಂಡರಾದ ಹಸೈನಾರ್ ಕಟಪಾಡಿ, ಎಸ್ಡಿಪಿಐ ಉಡುಪಿ ಕ್ಷೇತ್ರ ಸಮಿತಿ ಅಧ್ಯಕ್ಷ ಮುಹಮ್ಮದ್ ಅಶ್ರಫ್ ಬಾವ, ಉಪಾಧ್ಯಕ್ಷ ರಹೀಮ್ ಆದಿಉಡುಪಿ ಉಪಸ್ಥಿತರಿದ್ದರು.