ಗ್ಯಾರಂಟಿ ಯೋಜನೆಗೆ ಈಗಲೂ ಅರ್ಜಿ ಸಲ್ಲಿಸಲು ಅವಕಾಶ: ಉಡುಪಿ ಡಿಸಿ ವಿದ್ಯಾಕುಮಾರಿ
ಉಡುಪಿ, ಫೆ.15: ರಾಜ್ಯ ಸರಕಾರದ ಮಹತ್ವಾಕಾಂಕ್ಷಿ ಯೋಜನೆಗಳಾದ ಪಂಚ ಗ್ಯಾರಂಟಿ ಯೋಜನೆಗಳ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಕಲಾ ಜಾಥಾ ಕಾರ್ಯಕ್ರಮ ಆಯೋಜಿಸಿದ್ದು, ಜಿಲ್ಲೆಯ ಎಲ್ಲಾ ಅರ್ಹ ಫಲಾನುಭವಿ ಗಳಿಗೂ ಗ್ಯಾರಂಟಿ ಯೋಜನೆಗಳು ತಲುಪಬೇಕು. ಹೀಗಾಗಿ ಈಗಲೂ ಈ ಯೋಜನೆಗಳ ಲಾಭ ಪಡೆಯಲು ಅರ್ಜಿ ಸಲ್ಲಿ ಸಲು ಅವಕಾಶವಿದೆ. ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ಹೇಳಿದ್ದಾರೆ.
ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ವಾರ್ತಾ ಮತ್ತು ಸಾರ್ವಜನಿಕರ ಸಂಪರ್ಕ ಇಲಾಖೆಯ ವತಿಯಿಂದ ಜಿಲ್ಲೆಯಾದ್ಯಂತ ಸಂಚರಿಸಿ, ಮಾಹಿತಿ ನೀಡಲಿರುವ ‘ಕಲಾ ಜಾಥಾ’ ವಾಹನಕ್ಕೆ ಚಾಲನೆ ನೀಡಿ ಅವರು ಮಾತನಾಡುತ್ತಿದ್ದರು.
ಪಂಚ ಗ್ಯಾರಂಟಿ ಯೋಜನೆಗಳಾದ ಗೃಹಲಕ್ಷ್ಮೀ, ಶಕ್ತಿ ಯೋಜನೆ, ಅನ್ನ ಭಾಗ್ಯ, ಗೃಹಜ್ಯೋತಿ ಹಾಗೂ ಯುವನಿಧಿ ಯೋಜನೆ ಗಳನ್ನು ಬಡ ಹಾಗೂ ಮಧ್ಯಮ ವರ್ಗದ ಜನರಿಗೆ ಆರ್ಥಿಕ ಬೆಂಬಲ ನೀಡುವ ಉದ್ದೇಶದಿಂದ ಜಾರಿಗೆ ತರಲಾ ಗಿದೆ. ಜಿಲ್ಲೆಯಲ್ಲಿ ಬಹುತೇಕ ಜನರು ಒಂದಲ್ಲಾ ಒಂದು ಗ್ಯಾರಂಟಿ ಯೋಜನೆಯ ಫಲಾನುಭವಿಗಳಾಗಿದ್ದಾರೆ. ಜಿಲ್ಲೆಯ ಪ್ರತಿಯೊಬ್ಬ ಅರ್ಹರಿಗೂ ಯೋಜನೆಯನ್ನು ತಲುಪಿಸುವ ಉದ್ದೇಶದಿಂದ ಕಲಾಜಾಥದ ಅರಿವು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಹೊಸದಾಗಿ ಅರ್ಜಿ ಸಲ್ಲಿಸುವವರಿಗೆ ಕಾಲಮಿತಿ ಇರುವುದಿಲ್ಲ. ಅರ್ಹರು ಇದರ ಸದ್ಬಳಕೆ ಮಾಡಿಕೊಳ್ಳಬೇಕು ಎಂದರು.
ಕಲಾಜಾಥಾ ವಾಹನ ಜಿಲ್ಲೆಯಾದ್ಯಂತ ಸಂಚರಿಸಿ, ಪಂಚ ಗ್ಯಾರಂಟಿ ಯೋಜನೆಗಳ ಕುರಿತು ಜನಸಾಮಾನ್ಯರಲ್ಲಿ ಜಾಗೃತಿ ಮೂಡಿಸಲಿದೆ. ಈಗಾಗಲೇ ರಾಜ್ಯಾದ್ಯಂತ ಪಂಚ ಗ್ಯಾರಂಟಿ ಯೋಜನೆಗಳನ್ನು ಸರಕಾರ ಅನುಷ್ಠಾನಗೊಳಿಸಿದೆ. ಇದು ಸಾಮಾನ್ಯರಿಗೂ ತಲುಪಬೇಕೆಂಬುದು ಇದರ ಉದ್ದೇಶ. ಪಂಚ ಗ್ಯಾರಂಟಿ ಯೋಜನೆಯಿಂದ ಯಾರಾದರೂ ಬಿಟ್ಟು ಹೋಗಿ ದ್ದಲ್ಲಿ ಮಾಹಿತಿ ಪಡೆದು, ಯೋಜನೆಗಳಿಗೆ ಅರ್ಜಿ ಸಲ್ಲಿಸಿ ಇದರ ಪ್ರಯೋಜನ ಪಡೆದುಕೊಳ್ಳುವಂತೆ ಜಿಲ್ಲಾಧಿಕಾರಿ ತಿಳಿಸಿದರು.
ಪಂಚ ಗ್ಯಾರಂಟಿ ಯೋಜನೆಗಳನ್ನು ಸೂಕ್ತ ರೀತಿಯಲ್ಲಿ ಬಳಸಿಕೊಳ್ಳುವಂತೆ ತಿಳಿಸಿದ ಅವರು, ಅಗತ್ಯವಿದ್ದಾಗ ಮಾತ್ರ ಕೆಎಸ್ಸಾರ್ಟಿಸಿ ಬಸ್ಗಳು ಉಚಿತವಾಗಿ ಸಂಚರಿಸಿ. ಅನಗತ್ಯವಾಗಿ ಸಂಚಾರ ಸರಿಯಲ್ಲ. ಅದೇ ರೀತಿ ಗೃಹಜ್ಯೋತಿ ಯೋಜನೆಯಡಿ ಸೌಲಭ್ಯದ ದುರುಪಯೋಗ ಸರಿಯಲ್ಲ. ಯೋಜನೆಯನ್ನು ಸದ್ಭಳಕೆ ಮಾಡಿಕೊಳ್ಳುವಂತೆ ಅವರು ಮನವಿ ಮಾಡಿದರು.
ಉಡುಪಿ ತಾಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ಅಧ್ಯಕ್ಷ ರಮೆಶ್ ಕಾಂಚನ್ ಮಾತನಾಡಿ, ರಾಜ್ಯದ ಬಹುಪಾಲು ಜನರ ಬದುಕಿಗೆ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಆಸರೆಯಾಗಿವೆ. ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಈ ಯೋಜನೆಗಳು ತಲುಪಬೇಕು. ಈ ಎಲ್ಲಾ ಯೋಜನೆಗಳು ಮಹಿಳೆಯರ ಪಾಲಿಗೆ ವರದಾನವಾಗಿವೆ ಎಂದರು.
ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು, ವಾರ್ತಾಧಿಕಾರಿ ಮಂಜುನಾಥ್ ಬಿ, ಜಿಲ್ಲಾ ಮಟ್ಟದ ಅಧಿಕಾರಿಗಳು, ಕಲಾವಿದರು ಉಪಸ್ಥಿತರಿದ್ದರು.
ಕಲಾಜಾಥಾ ಅಂಗವಾಗಿ ಜಿಲ್ಲೆಯ ವಿವಿಧ ಭಾಗಗಳಿಗೆ ಪ್ರಚಾರ ವಾಹನ ಹಾಗೂ ಕ್ಷೇತ್ರ ಪ್ರಚಾರ ಕಲಾ ತಂಡಗಳು ತೆರಳಿ ಗ್ಯಾರಂಟಿ ಸೇರಿದಂತೆ ಸರಕಾರದ ವಿವಿಧ ಯೋಜನೆಗಳ ಬಗ್ಗೆ ಜಾಗೃತಿ ಮೂಡಿಸಲಿವೆ.