×
Ad

ವೈಜ್ಞಾನಿಕ ಚಿಂತನೆಯನ್ನು ಜೀವನದಲ್ಲಿ ಅಳವಡಿಸಿಕೊಳ್ಳಿ: ವಿದ್ಯಾರ್ಥಿಗಳಿಗೆ ಉಡುಪಿ ಡಿಸಿ ಕರೆ

Update: 2025-02-28 20:40 IST

ಉಡುಪಿ, ಫೆ.28: ವಿದ್ಯಾರ್ಥಿಗಳು ವೈಜ್ಞಾನಿಕ ಚಿಂತನೆಯನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ನಮ್ಮ ಪ್ರತಿಯೊಂದು ಆಲೋಚನೆ ಗಳಿಗೂ ಒಂದು ಸ್ಪಷ್ಟವಾದ ತಳಹದಿ ಇರಬೇಕು. ಮೂಢನಂಬಿಕೆಗಳನ್ನು ನಂಬಿ ಜೀವನ ನಡೆಸಬಾರದು. ಅದರ ಸತ್ಯಾನ್ವೇಷಣೆ ನಡೆಸಲು ಮುಂದಾಗಬೇಕು ಎಂದು ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ವಿದ್ಯಾರ್ಥಿಗಳಿಗೆ ಕರೆ ನೀಡಿದ್ದಾರೆ.

ನಗರದ ಒಳಕಾಡು ಸರಕಾರಿ ಸಂಯುಕ್ತ ಪ್ರೌಢಶಾಲೆಯಲ್ಲಿ ಇಂದು ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿ ಹಾಗೂ ಉಡುಪಿ ಜಿಲ್ಲಾ ಪಂಚಾಯತ್‌ಗಳ ಜಂಟಿ ಆಶ್ರಯದಲ್ಲಿ ನಡೆದ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಕಾರ್ಯ ಕ್ರಮವನ್ನು ಉದ್ಘಾಟಿಸಿ, ಸರ್ ಸಿ.ವಿ.ರಾಮನ್ ಅವರ ಭಾವಚಿತ್ರಕ್ಕೆ ಪುಷ್ಫಾರ್ಚನೆ ಸಲ್ಲಿಸಿ ಅವರು ಮಾತನಾಡುತ್ತಿದ್ದರು.

ರಾಷ್ಟ್ರೀಯ ವಿಜ್ಞಾನ ದಿನಾಚರಣೆಯು ಭವಿಷ್ಯದ ಯುವಪೀಳಿಗೆಯ ವಿಜ್ಞಾನಿಗಳು ಮತ್ತು ನಾವಿನ್ಯಕಾರರಿಗೆ ಸ್ಪೂರ್ತಿ ನೀಡುವ ವೇದಿಕೆಯಾಗಿ ಯೂ, ಯುವ ಮನಸ್ಸುಗಳಲ್ಲಿ ವಿಜ್ಞಾನ ಮತ್ತು ಸಂಶೋಧನೆಯ ಕುರಿತು ಉತ್ಸಾಹ ತುಂಬುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಜಿಲ್ಲಾಧಿಕಾರಿ ಗಳು ಅಭಿಪ್ರಾಯಪಟ್ಟರು.

ಭಾರತೀಯ ಭೌತಶಾಸ್ತ್ರ ವಿಜ್ಞಾನಿ ಸರ್ ಸಿ.ವಿ.ರಾಮನ್ ಅವರು, ರಾಮನ್ ಪರಿಣಾಮವನ್ನು ಕಂಡು ಹಿಡಿದ ನೆನಪಿಗಾಗಿ ಪ್ರತಿ ವರ್ಷ ಫೆಬ್ರವರಿ 28ನ್ನು ರಾಷ್ಟ್ರೀಯ ವಿಜ್ಞಾನ ದಿನವನ್ನಾಗಿ ಆಚರಿಸಲಾಗುತ್ತಿದೆ. ಶಾಲೆಗಳಲ್ಲಿ ವಿದ್ಯಾರ್ಥಿ ಗಳಿಗೆ ವಿಜ್ಞಾನದ ಕುರಿತು ಜಾಗೃತಿ ಮೂಡಿಸುವ ಕಾರ್ಯಾಗಾರವನ್ನು ಏರ್ಪಡಿಸುವುದರಿಂದ ಅವರು, ಆದರಿಂದಾಗುವ ಲಾಭಗಳನ್ನು ಅರಿತು ಕೊಂಡು ಮುಂದಿನ ದಿನಗಳಲ್ಲಿ ಜಿಲ್ಲೆ, ರಾಜ್ಯ ಹಾಗೂ ದೇಶದ ಅಭಿವೃದ್ಧಿಗೆ ಉತ್ತಮ ಕೊಡುಗೆ ನೀಡುವುದರಲ್ಲಿ ಯಾವುದೇ ಸಂದೇಹಲ್ಲ ಎಂದರು.

ವಿದ್ಯಾರ್ಥಿಗಳು ಜೀವನದಲ್ಲಿ ಕುತೂಹಲವನ್ನು ಹೊಂದಿರುವುದರೊಂದಿಗೆ ಗ್ರಂಥಾಲಯಗಳ ಸದುಪಯೋಗವನ್ನು ಸಹ ಪಡೆದುಕೊಳ್ಳಬೇಕು. ವಿಜ್ಞಾನಿ ಗಳು, ಹಿರಿಯರು, ಸ್ವಾತಂತ್ರ್ಯ ಹೋರಾಟಗಾರರ ಆತ್ಮಚರಿತ್ರೆಯನ್ನು ಓದುವುದರೊಂದಿಗೆ ಅವರ ಸಾಧನೆಯ ಹಾದಿಯನ್ನು ವಿದ್ಯಾರ್ಥಿಗಳು ಪಾಲಿಸುವುದರಿಂದ ಉತ್ತಮ ಜೀವನದೊಂದಿಗೆ ಸದೃಢ ಸಮಾಜ ಕಟ್ಟಲು ಸಾಧ್ಯವಾಗುತ್ತದೆ ಎಂದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ ಪ್ರಾಸ್ತಾವಿಕವಾಗಿ ಮಾತನಾಡಿ, ವಿದ್ಯಾರ್ಥಿ ಗಳು ಆರ್ಟಿಫಿಶಿಯಲ್ ಇನ್ಟೆಲಿಜೆನ್ಸಿ ಕುರಿತು ತಿಳಿದುಕೊಂಡು, ಅದನ್ನು ಜೀವನದ ಪ್ರತೀ ಹಂತದ ಲ್ಲೂ ಬಳಸಿಕೊಳ್ಳಲು ಮುಂದಾಗಬೇಕು ಎಂದರಲ್ಲದೇ, ಕೃತಕ ಬುದ್ದಿಮತ್ತೆ ಯನ್ನು ವಿವಿಧ ಕ್ಷೇತ್ರಗಳಲ್ಲಿ ಬಳಸಿಕೊಳ್ಳುವ ಕುರಿತು ಸಂಪನ್ಮೂಲ ವ್ಯಕ್ತಿಗಳು ಮಾಹಿತಿ ನೀಡಲಿದ್ದು, ಮಕ್ಕಳು ತಮ್ಮಲ್ಲಿರುವ ಕುತೂಹಲಕಾರಿ ಪ್ರಶ್ನೆಗಳಿಗೆ ಉತ್ತರ ಕಂಡುಕೊಳ್ಳಬಹುದು ಎಂದರು.

ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಅಂಗವಾಗಿ ಶಾಲೆಯ ವಿದ್ಯಾರ್ಥಿ ವಿಶ್ವ ಪ್ರತಿಜ್ಞಾ ವಿಧಿ ಬೋಧಿಸಿದರು. ಈ ಸಂದರ್ಭದಲ್ಲಿ ಎಂಐಟಿಯ ಅಶ್ವಥ್ ರಾವ್, ಡಾ. ಮುರುಳಿಕೃಷ್ಣ, ಡಾ.ನೇಹಾ ಗಾಂಧಿ, ಡಾ.ಕವಿತಾ ಹಾಗೂ ಡಾ. ಮೋಹನ್‌ದಾಸ್ ಶೆಣೈ ವಿಜ್ಞಾನ ಹಾಗೂ ತಂತ್ರಜ್ಞಾನಕ್ಕೆ ಸಂಬಂಧಿಸಿದಂತೆ ಹಾಗೂ ಕೃತಕ ಬುದ್ದಿಮತ್ತೆ ಬಗ್ಗೆ ಮಾಹಿತಿಗಳನ್ನು ನೀಡಿದರು.

ಕಾರ್ಯಕ್ರಮದಲ್ಲಿ ಪೌರಾಯುಕ್ತ ಉದಯ್‌ಕುಮಾರ್ ಶೆಟ್ಟಿ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಗಣಪತಿ, ಶಾಲಾ ಮುಖ್ಯೋಪಾಧ್ಯಾಯಿನಿ ಪೂರ್ಣಿಮಾ, ಎನ್.ಆರ್.ಡಿ.ಎಮ್.ಎಸ್ ತಾಂತ್ರಿಕ ಅಧಿಕಾರಿ ವಿಕ್ರಮ್ ಆರ್ ಮತ್ತಿತರರು ಉಪಸ್ಥಿತರಿದ್ದರು.

ಡಯಟ್ ಉಪ ಪ್ರಾಂಶುಪಾಲ ಅಶೋಕ್ ಕಾಮತ್ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News