ಉಡುಪಿಯಲ್ಲಿ ವಿಶ್ವ ಶ್ರವಣ ದಿನಾಚರಣೆ
ಉಡುಪಿ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ರಾಷ್ಟ್ರೀಯ ಆರೋಗ್ಯ ಅಭಿಯಾನ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾಸ್ಪತ್ರೆ ಉಡುಪಿ ಹಾಗೂ ವಿದ್ಯಾರತ್ನ ಸ್ಕೂಲ್ ಆಂಡ್ ಕಾಲೇಜು ಆಫ್ ನಸಿರ್ಂಗ್ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಶ್ರವಣ ದಿನಾಚರಣೆಯಅಂಗವಾಗಿ ಜಾಥಾ ಕಾರ್ಯಕ್ರಮ, ಮಾಹಿತಿ ಕಾರ್ಯಾಗಾರ ದೊಂದಿಗೆ ಕಿರುಪ್ರಹಸನ ಪ್ರದರ್ಶಿಸಿ ಜನಜಾಗೃತಿ ಮೂಡಿಸಲಾಯಿತು.
ನಗರದ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ನಡೆದ ಸಭಾ ಕಾರ್ಯಕ್ರಮ ವನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ನಾಗರತ್ನ ಉದ್ಘಾಟಿಸಿದರು. ಆಸ್ಪತ್ರೆಯ ಆಡಿಯೋಲಾಜಿಸ್ಟ್ ಶಮೀಕ್ಷಾ ಡಿ.ರಾವ್ ಮಾತನಾಡಿ, ಕಿರಿಯರ ಆರೋಗ್ಯದ ಬಗ್ಗೆ ಎಚ್ಚರವಹಿಸಬೇಕು. ಅದರಲ್ಲೂ ನವಜಾತ ಶಿಶುಗಳಿಗೆ ಸಂಭಂಧಿಸಿದಂತೆ ಯಾವುದೇ ಸಮಸ್ಯೆಗಳನ್ನು ನಿರ್ಲಕ್ಷಿಸಬಾರದು ಎಂದರು.
ವಾಕ್ ಮತ್ತು ಶ್ರವಣ ಶಕ್ತಿ ಒಂದಕ್ಕೊಂದು ಪೂರಕವಾಗಿರುವುದರಿಂದ ಕಿವಿ ಕೇಳಿಸದೇ ಇರುವವರಿಗೆ ಮಾತು ಬಾರದಿ ರುವುದು ಸಾಮಾನ್ಯ ಸಮಸ್ಯೆಯಾಗಿರುತ್ತದೆ. ಈ ಸೂಕ್ಷ್ಮತೆಯನ್ನು ಅರಿಯದ ಬಹಳಷ್ಟು ಮಂದಿ ಶ್ರವಣ ದೋಷವನ್ನು ಗಂಭೀರವಾಗಿ ಪರಿಗಣಿಸುವುದಿಲ್ಲ. ಈ ಕಾರಣದಿಂದ ಸಣ್ಣ ಸಮಸ್ಯೆ ತೀವ್ರಗೊಂಡು ಶಾಶ್ವತ ಕಿವುಡುತನಕ್ಕೆ ದಾರಿಯಾಗಬಹುದು ಎಂದು ಎಚ್ಚರಿಸಿದರು.
ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಹಾಗೂ ರಾಷ್ಟ್ರೀಯ ಶ್ರವಣ ದೋಷ ನಿಯಂತ್ರಣ ಹಾಗೂ ನಿವಾರಣಾ ಕಾರ್ಯಕ್ರಮ ಅನುಷ್ಠಾನಾಧಿಕಾರಿ ಡಾ. ಶ್ರೀರಾಮರಾವ್ ಕೆ. ಪ್ರಾಸ್ತಾವಿಕವಾಗಿ ಮಾತನಾಡಿದರು. ಉಡುಪಿಯ ವಿದ್ಯಾರತ್ನ ಸ್ಕೂಲ್ ಆಂಡ್ ಕಾಲೇಜು ಆಫ್ ನಸಿರ್ಂಗ್ನ ಪ್ರಾಂಶುಪಾಲೆ ಅನಿತಾ ಸಿ ರಾವ್ ಕರಪತ್ರ ಬಿಡುಗಡೆ ಮಾಡಿದರು.
ಕಾರ್ಯಕ್ರಮದಲ್ಲಿ ಸರಕಾರಿ ತಾಯಿ ಮತು ಮಕ್ಕಳ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ರಾಜ್ಗೋಪಾಲ್ ಭಂಡಾರಿ, ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕ ಪ್ರೀತಮ್ ಬಿ.ಎಸ್ ಹಾಗೂ ಇತರರು ಉಪಸ್ಥಿತರಿದ್ದರು.
ಆರೋಗ್ಯ ಶಿಕ್ಷಣಾಧಿಕಾರಿ ಶಶಿಧರ್ ಹೆಚ್. ಸ್ವಾಗತಿಸಿ, ಆರೋಗ್ಯ ಶಿಕ್ಷಣಾಧಿಕಾರಿ ಚಂದ್ರಕಲಾ ಕಾರ್ಯಕ್ರಮ ನಿರೂಪಿಸಿದರು. ಜಿಲ್ಲಾ ಲೆಕ್ಕಪತ್ರ ವ್ಯವಸ್ಥಾಪಕ ಗಿರೀಶ್ ಕಡ್ಡಿಪುಡಿ ವಂದಿಸಿದರು.