ಕುಂದಾಪ್ರ ಕನ್ನಡ ಭಾಷೆಯಲ್ಲ; ಬದುಕು: ಸಂಸದ ಕೋಟ
ಕೋಟ, ಮೇ 5: ಕುಂದಾಪ್ರ ಕನ್ನಡ ಎಂಬ ಗ್ರಾಮೀಣ ಸೊಗಡಿನ ಕನ್ನಡ ಭಾಷೆ ಕೇವಲ ಭಾಷೆಯಾಗಿ ಉಳಿದಿಲ್ಲ. ಬದಲಾಗಿ ಕುಂದಾಪ್ರ ಕನ್ನಡ ಕರಾವಳಿ ಭಾಗದ ಜನರ ಬದುಕಾಗಿ ಜನ ಜೀವನದಲ್ಲಿ ಹಾಸು ಹೊಕ್ಕಿದೆ ಎಂದು ಉಡುಪಿ- ಚಿಕ್ಕಮಗಳೂರು ಕ್ಷೇತ್ರದ ಲೋಕಸಭಾ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.
ಕೋಟ ಶಿವರಾಮ ಕಾರಂತ ಥೀಂ ಪಾರ್ಕಿನಲ್ಲಿ ರವಿವಾರ ನಡೆದ ಕುಂದಾಪ್ರ ಕನ್ನಡದ ‘ಕಾಂಬ’ 5ನೇ ಸಮಾವೇಶದ ಸಮರೋಪ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡುತ್ತಿದ್ದರು.
ಕುಂದಾಪ್ರ ಕನ್ನಡ ಸಮಾವೇಶದ ಅಧ್ಯಕ್ಷತೆ ವಹಿಸಿದ್ದ ಡಾ.ಅಣ್ಣಯ್ಯ ಕುಲಾಲ್ ದಂಪತಿಗಳಿಗೆ ಕುಂದಾಪುರ ಕನ್ನಡಿಗರ ಪರವಾಗಿ ಸನ್ಮಾನಿಸಿ ಮಾತನಾಡಿದ ಕೋಟ, ಮೊದಮೊದಲು ಕುಂದಾಪ್ರ ಕನ್ನಡವನ್ನು ಸಾರ್ವಜನಿಕವಾಗಿ ಮಾತನಾಡಲು ತಡಕಾಡುತ್ತಿದ್ದ ದಿನಗಳಿದ್ದವು. ಇಂದಿನ ದಿನಗಳಲ್ಲಿ ಕುಂದಾಪ್ರ ಕನ್ನಡಕ್ಕೆ ತನ್ನದೇ ಆದ ಗೌರವ ಘನತೆಗಳು ಹೆಚ್ಚುತ್ತಿವೆ. ಆದ್ದರಿಂದ, ಕುಂದಾಪ್ರ ಕನ್ನಡವನ್ನು ಹೆಮ್ಮೆಯಿಂದ ಹಂಚಿಕೊಳ್ಳೋಣ ಎಂದರು.
ಸಭೆಯಲ್ಲಿ ಉದ್ಯಮಿ ಆನಂದ್ ಸಿ. ಕುಂದರ್, ಕೋಟತಟ್ಟು ಪಂಚಾಯತ್ ಅಧ್ಯಕ್ಷ ಸತೀಶ್ ಕುಂದರ್, ನರೇಂದ್ರಕುಮಾರ್ ಕೋಟ ಮುಂತಾದವರು ಉಪಸ್ಥಿತರಿದ್ದರು.