ಉಡುಪಿ: ಗ್ರಾಮ ಲೆಕ್ಕಾಧಿಕಾರಿಗಳಿಗೆ ಲ್ಯಾಪ್ಟಾಪ್ ವಿತರಿಸಿದ ಸಚಿವೆ ಲಕ್ಷ್ಮೀ
ಉಡುಪಿ, ಜೂ.20: ಗ್ರಾಮ ಲೆಕ್ಕಾಧಿಕಾರಿಗಳು (ವಿಎ) ಜನಸ್ನೇಹಿಯಾಗಿ ಕಾರ್ಯನಿರ್ವಹಿಸಿ ಸರಕಾರಕ್ಕೆ ಉತ್ತಮ ಹೆಸರು ತರಬೇಕು ಎಂದು ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.
ಉಡುಪಿ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಜಿಲ್ಲೆಯ ಗ್ರಾಮ ಲೆಕ್ಕಾಧಿಕಾರಿಗಳಿಗೆ ಲ್ಯಾಪ್ ಟಾಪ್ ವಿತರಿಸಿ ಸಚಿವರು ಮಾತನಾಡಿದರು.
ಕಂದಾಯ ಇಲಾಖೆಯಲ್ಲಿ ಜನ ಸಾಮಾನ್ಯರ ಕೆಲಸ ಕಾರ್ಯಗಳು ಮತ್ತಷ್ಟು ಚುರುಕಾಗುವ ದೃಷ್ಟಿಯಿಂದ ಸರಕಾರದ ವತಿಯಿಂದ ವಿಎಗಳಿಗೆ ಲ್ಯಾಪ್ಟಾಪ್ ನೀಡಲಾಗಿದೆ. ಇದರಿಂದ ಅಧಿಕಾರಿ ವರ್ಗ ಜನ ಸಾಮಾನ್ಯರಿಗೆ ಉತ್ತಮ ಸೇವೆ ನೀಡಲಿ ಎಂಬುದೇ ನಮ್ಮ ಆಶಯವಾಗಿದೆ ಎಂದರು.
ಕಂದಾಯ ಇಲಾಖೆ ಸಚಿವ ಕೃಷ್ಣ ಬೈರೇಗೌಡ, ಕೆಲಸದ ಬಗ್ಗೆ ನಿಸ್ವಾರ್ಥ ಇರುವ ವ್ಯಕ್ತಿ. ಹಿಂದಿನ ಸಿದ್ದರಾಮಯ್ಯರ ಸರ್ಕಾರದಲ್ಲಿ ಕೃಷಿ ಮಂತ್ರಿಯಾಗಿ ಕೃಷಿ ವಲಯದಲ್ಲಿ ಕ್ರಾಂತಿ ಮಾಡಿದರು. ಕೃಷಿ ಹೊಂಡ ತೆರೆಯುವ ರೈತರಿಗೆ ಅನುಕೂಲ ಮಾಡಿಕೊಟ್ಟರು. ಹಿಂದಿನ ಕುಮಾರಸ್ವಾಮಿ ಸಂಪುಟದಲ್ಲೂ ಗ್ರಾಮೀಣಾಭಿವೃದ್ಧಿ ಸಚಿವರಾಗಿಯೂ ಅವರು ಕ್ರಾಂತಿಕಾರಿ ಬದಲಾವಣೆ ಮಾಡಿದ್ದರು ಎಂದು ಹೆಬ್ಬಾಳ್ಕರ್ ನೆನಪಿಸಿದರು.
ಈಗ ಕಂದಾಯ ಇಲಾಖೆಯಲ್ಲೂ ಕೃಷ್ಣ ಬೈರೇಗೌಡರು ಉತ್ತಮ ಕೆಲಸ ಮಾಡುತ್ತಿದ್ದಾರೆ ಎಂದರು. ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಸ್ವರೂಪ ಟಿ.ಎಚ್, ಜಿಲ್ಲಾ ಪಂಚಾಯತ್ನ ಸಿಇಒ ಪ್ರತೀಕ್ ಬಾಯಲ್ ಉಪಸ್ಥಿತರಿದ್ದರು.