×
Ad

ಮ್ಯಾನ್ಯುಯಲ್ ಸ್ಕ್ಯಾವೆಂಜರ್ಸ್ ವೃತಿಯವರಿಗೆ ಪುನರ್ವಸತಿ ಕಲ್ಪಿಸಿ: ಅಧಿಕಾರಿಗಳಿಗೆ ಉಡುಪಿ ಡಿಸಿ ನಿರ್ದೇಶನ

Update: 2025-07-10 19:14 IST

ಉಡುಪಿ, ಜು.10: ಈ ಹಿಂದೆ ಸಫಾಯಿ ಕರ್ಮಚಾರಿಗಳಾಗಿ (ಮಾನ್ಯುಯಲ್ ಸ್ಕ್ಯಾವೆಂಜರ್ಸ್)ಕಾರ್ಯ ನಿರ್ವಹಿಸುತಿದ್ದವರಿಗೆ ಸರಕಾರದ ವಿವಿಧ ಸೌಲಭ್ಯಗಳು ಸೇರಿದಂತೆ ಪುನರ್ವಸತಿ ಯೋಜನೆಗಳನ್ನು ಕಲ್ಪಿಸುವಂತೆ ಸಂಬಂಧಿತ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಸೂಚನೆ ನೀಡಿದ್ದಾರೆ.

ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಸಫಾಯಿ ಕರ್ಮಚಾರಿಗಳ ಜಿಲ್ಲಾ ಜಾಗೃತ ಸಮಿತಿಯ ದ್ವಿತೀಯ ತ್ರೈಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.

ಮಾನ್ಯುಯಲ್ ಸ್ಕ್ಯಾವೆಂಜರ್ಸ್ ಪದ್ಧತಿಗೆ ಈಗಾಗಲೇ ದೇಶಾದ್ಯಂತ ನಿಷೇಧವಿದೆ. ನಗರ ಹಾಗೂ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಮಾನ್ಯುಯಲ್ ಸ್ಕ್ಯಾವೆಂಜರ್‌ಗಳನ್ನು ನೇಮಿಸಿಕೊಂಡು ಕೆಲಸ ಮಾಡಿಸಿದಲ್ಲಿ ಅಂತಹವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಬೇಕು ಎಂದರು.

ಸ್ಥಳೀಯ ಸಂಸೆಗಳ್ಥ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪೌರ ಕಾರ್ಮಿಕರಿಗೆ ಪ್ರತೀ ತಿಂಗಳ ವೇತನ ವನ್ನು ಸಕಾಲದಲ್ಲಿ ಪಾವತಿಸಬೇಕು. ಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ ಪೌರ ಕಾರ್ಮಿ ಕರಿಗೆ ವೇತನ ಪಾವತಿ, ಇಎಸ್‌ಐ ಹಾಗೂ ಪಿ.ಎಫ್ ಪಾವತಿ ಆಗುತ್ತಿರುವ ಬಗ್ಗೆ ಅಧಿಕಾರಿಗಳು ಪರಿಶೀಲಿಸಬೇಕು ಎಂದರು.

ಎಲ್ಲರಿಗೂ ಮನೆ: ಪೌರ ಕಾರ್ಮಿಕರಿಗೆ ಗೃಹಭಾಗ್ಯ ಯೋಜನೆಯಡಿ ಅರ್ಹರಿಗೆ ವಸತಿ ಸೌಲಭ್ಯಗಳನ್ನು ಆದ್ಯತೆಯ ಮೇಲೆ ನೀಡಬೇಕು. ಜಿಲ್ಲೆಯಲ್ಲಿ ಕೆಲ ಪೌರಕಾರ್ಮಿಕರು ನಗರ ವ್ಯಾಪ್ತಿಯಿಂದ ಹೊರ ಭಾಗದಲ್ಲಿ ನಿವೇಶನವನ್ನು ಹೊಂದಿದ್ದಾರೆ. ಇವರಿಗೆ ವಸತಿ ಸೌಲಭ್ಯವನ್ನು ಕಲ್ಪಿಸಲು ನಿಯಮಾವಳಿಗಳಲ್ಲಿ ಬದಲಾ ವಣೆ ಅವಶ್ಯವಿದ್ದು, ಈ ಬಗ್ಗೆ ಪ್ರಸ್ತಾವನೆಯನ್ನು ಸರಕಾರಕ್ಕೆ ಕಳುಹಿಸಿ, ಅನುಮತಿ ಪಡೆದು ಅವರುಗಳಿಗೆ ವಸತಿ ಸೌಲಭ್ಯ ಕಲ್ಪಿಸಿಕೊಡಲು ಕ್ರಮವಹಿಸಬೇಕು ಎಂದು ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಪೌರ ಕಾರ್ಮಿಕರು ದೈನಂದಿನ ಸ್ವಚ್ಛತಾ ಕಾರ್ಯದ ಕರ್ತವ್ಯ ನಿರ್ವಹಿ ಸುವಾಗ ಸುರಕ್ಷತಾ ಪರಿಕರ ಗಳನ್ನು ಕಡ್ಡಾಯವಾಗಿ ಧರಿಸಿ, ತಮ್ಮ ಕರ್ತವ್ಯವನ್ನು ನಿರ್ವಹಿಸಬೇಕು.ತಪ್ಪಿದ್ದಲ್ಲಿ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆ ಇದ್ದು, ಇವುಗಳ ಬಗ್ಗೆ ಮೇಲುಸ್ತುವಾರಿಯನ್ನು ಅಧಿಕಾರಿ ಗಳು ವಹಿಸಬೇಕು ಎಂದರು.

ವಿಶ್ರಾಂತಿ ಗೃಹ: ಸಫಾಯಿ ಕರ್ಮಚಾರಿಗಳಿಗೆ ವಿಶ್ರಾಂತಿ ಪಡೆಯಲು ಅನುಕೂಲವಾಗುವಂತೆ ವಿಶ್ರಾಂತಿ ಗೃಹಗಳ ನಿರ್ಮಾಣ ಹಾಗೂ ಅವುಗಳ ಬಳಕೆಯ ಕುರಿತಂತೆ ಮಾಹಿತಿ ಪಡೆದ ಜಿಲ್ಲಾಧಿಕಾರಿಗಳು, ಪ್ರತಿ ಮೂರು ತಿಂಗಳಿಗೊಮ್ಮೆ ಅವರಿಗೆ ಆರೋಗ್ಯ ತಪಾಸಣೆ ಹಾಗೂ ಮಾಸ್ಟರ್ ಹೆಲ್ತ್ ಚೆಕ್‌ಅಪ್ ಮಾಡಿಸ ಬೇಕು. ಅವರುಗಳಿಗೆ ವಿತರಿಸುವ ಉಪಾಹಾರವು ಪ್ಟೌಕತೆಯಿಂದ ಕೂಡಿರಬೇಕು ಎಂದರು.

ಪೌರಕಾರ್ಮಿಕರ ಮಕ್ಕಳು ಉತ್ತಮ ಶಿಕ್ಷಣ ಹೊಂದಿ ಉನ್ನತ ಸ್ಥಾನಗಳನ್ನು ಹೊಂದಲು ಅನುಕೂಲವಾಗು ವಂತೆ ವಸತಿ ಶಾಲೆಗಳಿಗೆ ನೇರ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿದೆ. ಈ ಬಗ್ಗೆ ಪೌರ ಕಾರ್ಮಿಕರಲ್ಲಿ ಅರಿವು ಮೂಡಿಸಿ, ಇದರ ಸದ್ಬಳಕೆ ಆಗುವಂತೆ ನೋಡಿಕೊಳ್ಳಬೇಕು. ಮುಂದಿನ ಸಭೆಯಲ್ಲಿ ಸಫಾಯಿ ಕರ್ಮಚಾರಿಗಳ ಎಷ್ಟು ಮಂದಿ ವಿದ್ಯಾರ್ಥಿಗಳು ಇದರ ಸದ್ಭಳಕೆ ಮಾಡಿಕೊಂಡಿದ್ದಾರೆ ಎಂಬ ಬಗ್ಗೆ ತನಗೆ ಮಾಹಿತಿ ನೀಡಬೇಕು ಎಂದು ಸ್ವರೂಪ ಟಿ.ಕೆ. ತಿಳಿಸಿದರು.

ಪ್ರತಿಯೊಬ್ಬ ಪೌರಕಾರ್ಮಿಕರು ಪ್ರಧಾನ ಮಂತ್ರಿ ಜೀವನ್ ಜ್ಯೋತಿ ಬಿಮಾ ಯೋಜನೆ ಹಾಗೂ ಪ್ರಧಾನ ಮಂತ್ರಿ ಸುರಕ್ಷಾ ಬಿಮಾ ಯೋಜನೆಗಳನ್ನು ಕಡ್ಡಾಯವಾಗಿ ಮಾಡಿಸಿಕೊಳ್ಳಬೇಕು. ಇದರಿಂದ ಭವಿಷ್ಯದಲ್ಲಿ ಅವರಿಗೆ ಅನುಕೂಲವಾಗಲಿದೆ ಎಂದರು.

ಸಭೆಯಲ್ಲಿ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ನಾರಾಯಣ ಸ್ವಾಮಿ, ಸಮಿತಿಯ ಸದಸ್ಯ ರಾದ ಪ್ರಶಾಂತಿ ಕೋಂ ವಸಂತ, ನಾಗರಾಜ ಬಿನ್ ರಮಾನಾಥ, ಕೊಟ್ರಿಬಾಯಿ ಹಾಗೂ ಶಂಕರ ಅಲ್ಲದೇ ವಿವಿಧ ಜಿಲ್ಲಾ ಮಟ್ಟದ ಅನುಷ್ಠಾನಾಧಿಕಾರಿಗಳು ಉಪಸ್ಥಿತರಿದ್ದರು.

‘ಮಾನ್ಯುಯಲ್ ಸ್ಕ್ಯಾವೆಂಜಿಂಗ್‌ಗೆ ನಿಷೇಧವಿರುವ ಹಿನ್ನೆಲೆಯಲ್ಲಿ ನಗರ ಹಾಗೂ ಗ್ರಾಮೀಣ ಪ್ರದೇಶ ವ್ಯಾಪ್ತಿಗಳಲ್ಲಿ ಕಡ್ಡಾಯವಾಗಿ ಸಕ್ಕಿಂಗ್ ಹಾಗೂ ಜೆಟ್ಟಿಂಗ್‌ಯಂತ್ರಗಳ ಬಳಕೆಯೊಂದಿಗೆ ಸ್ವಚ್ಛತಾ ಕಾರ್ಯಗಳನ್ನು ಕೈಗೊಳ್ಳಬೇಕು. ಮಲ ತ್ಯಾಜ್ಯ ನಿರ್ವಹಣೆಯನ್ನು ವೈಜ್ಞಾನಿಕ ರೀತಿಯಲ್ಲಿ ಎಫ್‌ಎಸ್‌ಎಂಎಸ್ ಘಟಕಗಳಲ್ಲಿಯೇ ವಿಲೇವಾರಿ ಮಾಡಬೇಕು ಎಂದ ಅವರು, ಜಿಲ್ಲೆಯಲ್ಲಿ ಕೈಗೊಂಡಿ ರುವ ಎಫ್‌ಎಸ್‌ಎಂಎಸ್ ಘಟಕ ಯೋಜನೆಗಳ ಕಾಮಗಾರಿಗಳನ್ನು ಆದ್ಯತೆಯ ಮೇಲೆ ಪೂರ್ಣಗೊಳಿಸಿ ಅವುಗಳ ಬಳಕೆಯಾಗಲು ಸ್ಥಳೀಯ ಸಂಸ್ಥೆಗಳು ಕ್ರಮಕೈಗೊಳ್ಳಬೇಕು.’

-ಸ್ವರೂಪ ಟಿ.ಕೆ., ಜಿಲ್ಲಾಧಿಕಾರಿ ಉಡುಪಿ.



Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News