ಸಮಸ್ಯೆಗಳಿಗೆ ಸ್ಪಂದಿಸದ ಉಸ್ತುವಾರಿ ಸಚಿವರ ವಿರುದ್ಧ ಜನಾಂದೋಲನ: ವಿಜಯ ಕೊಡವೂರು
ಉಡುಪಿ: ಉಡುಪಿ ಜಿಲ್ಲೆಯನ್ನು ಕಾಡುತ್ತಿರುವ ಏಕವಿನ್ಯಾಸ ನಕ್ಷೆ (ನಮೂನೆ 9 ಮತ್ತು 11)ಯ ಸಮಸ್ಯೆಯನ್ನು ಅರಿತುಕೊಂಡು ಪರಿಹರಿಸ ಬೇಕಾದ ಜಿಲ್ಲೆಯ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕಾಣೆಯಾಗಿದ್ದು, ಸಮಸ್ಯೆ ಪರಿಹಾರವಾಗದಿದ್ದಲ್ಲಿ ಈ ವಿಚಾರವಾಗಿ ಜಿಲ್ಲೆಯಾದ್ಯಂತ ಬೃಹತ್ ಜನಾಂದೋಲನ ನಡೆಸಲಾಗುವುದು ಎಂದು ಬಿಜೆಪಿ ಉಡುಪಿ ಜಿಲ್ಲಾ ಹಿಂದುಳಿದ ವರ್ಗಗಳ ಮೋರ್ಚಾದ ಅಧ್ಯಕ್ಷ ವಿಜಯ ಕೊಡವೂರು ತಿಳಿಸಿದ್ದಾರೆ.
ಉಡುಪಿಯಲ್ಲಿಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗ್ರಾಪಂ ಮಟ್ಟದಲ್ಲಿ 2 ಸಾವಿರ ರೂ. ಒಳಗೆ ಆಗುತ್ತಿದ್ದ ಏಕ ವಿನ್ಯಾಸ ನಕ್ಷೆ (9/11) ಅನ್ನು ಇಂದಿನ ರಾಜ್ಯ ಕಾಂಗ್ರೆಸ್ ಸರಕಾರವು ನಗರಾಭಿ ವೃದ್ಧಿ ಪ್ರಾಧಿಕಾರದ ಅಡಿಗೆ ತಂದು ಜನರನ್ನು ಸಂಕಷ್ಟಕ್ಕೆ ತಳ್ಳಿದೆ. ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ 11ಸಾವಿರ ಕಡತಗಳು ಬಾಕಿ ಇವೆ. ಇದರಿಂದ ಬಡವರಿಗೆ ಮನೆಕಟ್ಟಲು ಆಗುತ್ತಿಲ್ಲ ಎಂದು ದೂರಿದರು.
ಅದೇ ರೀತಿ ಜಿಲ್ಲೆಯಲ್ಲಿ ಮರಳಿನ ಸಮಸ್ಯೆ, ಕೆಂಪು ಕಲ್ಲಿನ ಸಮಸ್ಯೆ, ಪ್ರಾಕೃತಿಕ ವಿಕೋಪದಿಂದ ಮನೆ ಹಾನಿ, ರೈತರ ಸಮಸ್ಯೆ, ಬಸವ ವಸತಿ ಯೋಜನೆ ಮನೆ ಸ್ಥಗಿತ, ಮೀನುಗಾರಿಕಾ ಮನೆ ಸ್ಥಗಿತ, ಅಧಿಕಾರಿಗಳ ಕೊರತೆ ಸೇರಿದಂತೆ ಹಲವು ಸಮಸ್ಯೆಗಳು ಕಾಡುತ್ತಿವೆ. ಈ ಎಲ್ಲ ಸಮಸ್ಯೆಗಳಿಗೆ ಸ್ಪಂದಿಸಬೇಕಾದ ಉಸ್ತುವಾರಿ ಸಚಿವರು ಕಾಣೆಯಾಗಿದ್ದಾರೆ ಎಂದು ಅವರು ಆರೋಪಿಸಿದರು.
ಈ ಎಲ್ಲ ಸಮಸ್ಯೆಗಳಿಗೆ ಜಿಲ್ಲಾ ಉಸ್ತುವಾರಿ ಸಚಿವರು ಗಮನ ಹರಿಸದೆ ಸಮರ್ಪಕವಾಗಿ ಸ್ಪಂದಿಸದಿದ್ದಲ್ಲಿ ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ತಾಲೂಕು ಕಚೇರಿ ಮುಂಭಾಗದಲ್ಲಿ ಧರಣಿ ನಡೆಸಲಾಗು ವುದು. ಉಸ್ತುವಾರಿ ಸಚಿವರು ಕಾಣೆಯಾಗಿರುವ ಬಗ್ಗೆ ಜನಾಂದೋಲನ ರೂಪಿಸಲಾಗುವುದು ಎಂದು ಅವರು ಎಚ್ಚರಿಕೆ ನೀಡಿದರು.
ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಜ್ಯ ಉಪಾಧ್ಯಕ್ಷ ಐರೋಡಿ ವಿಠಲ ಪೂಜಾರಿ, ಮುಖಂಡರಾದ ಆದರ್ಶ ನಾಯರಿ, ಸುಶಾಂತ್ ಬ್ರಹ್ಮಾವರ, ಸುರೇಂದ್ರ ಕುಲಾಲ್ ಉಪಸ್ಥಿತರಿದ್ದರು.