ಸುದ್ದಿ ತಿರುಚುವ ಮನಃಸ್ಥಿತಿ ಮಾಧ್ಯಮ ಲೋಕಕ್ಕೆ ಅಪಾಯ: ಜಯಪ್ರಕಾಶ್ ಹೆಗ್ಡೆ
ವಡ್ಡರ್ಸೆ ರಘುರಾಮ ಶೆಟ್ಟಿ ಪತ್ರಿಕೋದ್ಯಮ ಪ್ರಶಸ್ತಿ ಪ್ರದಾನ
ಕೋಟ, ಜ.5: ಮಾಧ್ಯಮಗಳಲ್ಲಿ ಪ್ರಕಟವಾಗುವ ಸುದ್ದಿಗಳು ಸಾರ್ವ ಕಾಲಿಕ ದಾಖಲೆಗಳಾಗಿ ಉಳಿಯುತ್ತದೆ ಹಾಗೂ ಸುದ್ದಿಯಲ್ಲಿ ತಪ್ಪುಗಳು ನಡೆದರೆ ಅದನ್ನು ಸರಿಪಡಿಸುವುದು ಅಷ್ಟು ಸುಲಭವಲ್ಲ. ಹೀಗಾಗಿ ಸುದ್ದಿಗಳನ್ನು ತಿರುಚುವ ಮನಃಸ್ಥಿತಿ ಮಾಧ್ಯಮಲೋಕಕ್ಕೆ ಅಪಾಯವಾಗಲಿದೆ ಹೀಗಾಗಿ ಬರವಣಿಗೆಯಲ್ಲಿ ಜವಾಬ್ದಾರಿ ಮತ್ತು ವಾಸ್ತವಾಂಶ ಇರಬೇಕು ಎಂದು ಮಾಜಿ ಸಚಿವ ಕೆ.ಜಯಪ್ರಕಾಶ ಹೆಗ್ಡೆ ಹೇಳಿದ್ದಾರೆ.
ಬ್ರಹ್ಮಾವರ ತಾಲ್ಲೂಕು ಪತ್ರಕರ್ತರ ಸಂಘದ ಆಶ್ರಯದಲ್ಲಿ ಜ.4ರಂದು ಸಾಸ್ತಾನದ ಪಾಂಡೇಶ್ವರದ ಕೋಸ್ಟಲ್ ಪ್ಯಾರಡೈಸ್ ಅನುಗ್ರಹ ಸಭಾಂಗಣದಲ್ಲಿ ನಡೆದ ವಡ್ಡರ್ಸೆ ರಘುರಾಮ ಶೆಟ್ಟಿ ಪತ್ರಿಕೋದ್ಯಮ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅವರು ಮಾತನಾಡುತ್ತಿದ್ದರು.
ಕಾರ್ಯಕ್ರಮವನ್ನು ಉದ್ಘಾಟಿಸಿದ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮಾತನಾಡಿ, ಪತ್ರಿಕಾರಂಗದ ಬಗ್ಗೆ ಸಮಾಜ ದಲ್ಲಿ ಗೌರವವಿದೆ. ಹೀಗಾಗಿ ಈ ಕ್ಷೇತ್ರದಲ್ಲಿ ಕೆಲಸ ಮಾಡುವವರು ಜವಬ್ದಾರಿಯುತವಾಗಿ ಕಾರ್ಯ ನಿರ್ವಹಿಸಬೇಕು ಎಂದು ತಿಳಿಸಿದರು.
ಈ ಸಂದರ್ಭ ವಡ್ಡರ್ಸೆ ಅವರ ಒಡನಾಡಿ ಹಿರಿಯ ಪತ್ರಕರ್ತ ಚಿದಂಬರ ಬೈಕಂಪಾಡಿಯವರಿಗೆ ವಡ್ಡರ್ಸೆ ರಘುರಾಮ ಶೆಟ್ಟಿ ಪತ್ರಿಕೋದ್ಯಮ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಬೈಕಂಪಾಡಿ, ವಡ್ಡರ್ಸೆಯವರೊಂದಿಗಿನ ಒಡನಾಟ ಒಂದು ವಿಶ್ವವಿದ್ಯಾಲಯದ ಪಾಠವಿದ್ದಂತೆ. ಬಡವರು, ಹಿಂದುಳಿದವರ ಬಗ್ಗೆ ಅವರಿಗಿದ್ದ ಪ್ರೀತಿ, ಸಮಾಜ ಪರಿವರ್ತನೆಯಲ್ಲಿ ಅವರಿಗಿದ್ದ ಕಾಳಜಿ ಅಪಾರವಾದದ್ದು ಎಂದರು.
ಉಡುಪಿ ಶಾಸಕ ಯಶಪಾಲ್ ಸುವರ್ಣ ಶುಭ ಹಾರೈಸಿದರು. ತಾಲ್ಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ರಾಜೇಶ ಗಾಣಿಗ ಅಚ್ಲಾಡಿ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಸಂಘದ ಉಪಾಧ್ಯಕ್ಷರಾಗಿ ಆಯ್ಕೆಯಾದ ಚಿತ್ತೂರು ಪ್ರಭಾಕರ ಆಚಾರ್ಯ, ಜಿಲ್ಲಾ ಸಂಘದ ಕಾರ್ಯಕಾರಿ ಸಮಿತಿಗೆ ಆಯ್ಕೆಯಾದ ಪ್ರವೀಣ್ ಮುದ್ದೂರು, ಮೋಹನ್ ಉಡುಪ ಅವರನ್ನು ಗೌರವಿಸಲಾಯಿತು.
ಬ್ರಹ್ಮಾವರ ಬಂಟರ ಸಂಘದ ಸಂಚಾಲಕ ಬಿ.ಭುಜಂಗ ಶೆಟ್ಟಿ, ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯ ಆಸ್ಟ್ರೋ ಮೋಹನ್, ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ, ಕುಂದಾಪುರ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ನಾಗರಾಜ ರಾಯಪ್ಪನಮಠ ಉಪಸ್ಥಿತರಿದ್ದರು.
ಸಂಘದ ಸ್ಥಾಪಕಾಧ್ಯಕ್ಷ ಚಿತ್ತೂರು ಪ್ರಭಾಕರ ಆಚಾರ್ಯ ಸ್ವಾಗತಿಸಿ, ಕಾರ್ಯಕ್ರಮದ ಸಂಚಾಲಕ ವಸಂತ ಗಿಳಿಯಾರು ಪ್ರಾಸ್ತಾವಿಕವಾಗಿ ಮಾತನಾಡಿದರು. ಉಪಾಧ್ಯಕ್ಷ ಚಂದ್ರಶೇಖರ ಬೀಜಾಡಿ ಕಾರ್ಯಕ್ರಮ ನಿರೂಪಿಸಿದರು. ಪ್ರಧಾನ ಕಾರ್ಯದರ್ಶಿ ಹರೀಶ ಕಿರಣ್ ತುಂಗ ವಂದಿಸಿದರು.