×
Ad

ಉಡುಪಿ ನಗರದ 58 ವಾಣಿಜ್ಯ ಕಟ್ಟಡಗಳ ಪಾರ್ಕಿಂಗ್ ಸ್ಥಳ ಅನ್ಯ ಉದ್ದೇಶಕ್ಕೆ ಬಳಕೆ: ಡಿಸಿ ಸ್ವರೂಪ ಟಿ.ಕೆ

Update: 2025-08-18 20:26 IST

ಉಡುಪಿ, ಆ.18: ಉಡುಪಿ ನಗರ ವ್ಯಾಪ್ತಿಯಲ್ಲಿ 58ಕ್ಕೂ ಅಧಿಕ ವಿವಿಧ ವಾಣಿಜ್ಯ ಕಟ್ಟಡಗಳ ಪಾರ್ಕಿಂಗ್ ಸ್ಥಳವನ್ನು ಅನ್ಯ ಉದ್ದೇಶಕ್ಕೆ ಬಳಸುತ್ತಿರುವುದು ಕಂಡುಬಂದಿದ್ದು, ಕಟ್ಟಡಗಳ ಮುಂಭಾಗದ ರಸ್ತೆಯ ಮೇಲೆ ಅಂಗಡಿ ಮಾಲಕರು ಹಾಗೂ ಗ್ರಾಹಕರು ತಮ್ಮ ವಾಹನಗಳನ್ನು ಪಾರ್ಕಿಂಗ್ ಮಾಡುತ್ತಿದ್ದಾರೆ. ಇದರಿಂದ ಸಾರ್ವಜನಿಕ ವಾಹನಗಳ ಸುಗಮ ಸಂಚಾರಕ್ಕೆ ಅಡ್ಡಿ ಉಂಟಾಗುತ್ತಿರುವ ಬಗ್ಗೆ ದೂರುಗಳು ಕೇಳಿ ಬಂದಿವೆ ಎಂದು ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಹೇಳಿದ್ದಾರೆ.

ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ರಸ್ತೆ ಸುರಕ್ಷತಾಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು. ಆದ್ದರಿಂದ ಪಾರ್ಕಿಂಗ್ ನಿಯಮಗಳನ್ನು ಪಾಲಿಸದೇ ಇರುವ ಕಟ್ಟಡ ಮಾಲಕರಿಗೆ ಕೂಡಲೇ ನೋಟಿಸ್ ನೀಡಿ, ನಿಯಮಾನುಸಾರ ಕಾನೂನಿನ ಪ್ರಕಾರ ಕ್ರಮ ಕೈಗೊಳ್ಳುವಂತೆ ಅವರು ಸಂಬಂಧಿತ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಈಗಾಗಲೇ 18 ಬ್ಲ್ಯಾಕ್‌ಸ್ಪಾಟ್‌ಗಳನ್ನು ಗುರುತಿಸಲಾಗಿದೆ. ಇವುಗಳಲ್ಲಿ ಬಹುತೇಕ ಕಾಮಗಾರಿಗಳಲ್ಲಿ ದಾರಿದೀಪ ಅಳವಡಿಕೆ, ರೋಡ್ ಮಾರ್ಕಿಂಗ್, ಪಾದಚಾರಿ ಕ್ರಾಸಿಂಗ್, ಝೀಬ್ರಾ ಕ್ರಾಸಿಂಗ್, ಸೂಚನಾ ಫಲಕ, ಹೈಮಾಸ್ಟ್ ದೀಪ, ಬ್ಲಿಂಕರ್ಸ್‌ ಸೇರಿದಂತೆ ವಿವಿಧ ಸುರಕ್ಷತಾ ವಿಧಾನಗಳನ್ನು ಅಳವಡಿಸದೇ ಇರುವುದು ಕಂಡುಬಂದಿದೆ ಎಂದವರು ಹೇಳಿದರು.

ಇದರಿಂದಾಗಿ ರಾಷ್ಟ್ರೀಯ ಹೆದ್ದಾರಿಗಳಲ್ಲಿ ರಸ್ತೆ ಅಪಘಾತ ಹಾಗೂ ಸಾವು- ನೋವುಗಳ ಪ್ರಕರಣ ಹೆಚ್ಚಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಶಾಶ್ವತ ಕಾಮಗಾರಿ ಕೈಗೊಳ್ಳುವವರೆಗೆ ತಾತ್ಕಾಲಿಕ ಸುರಕ್ಷತಾ ಕಾಮಗಾರಿಯನ್ನು ಆದ್ಯತೆ ಮೇಲೆ ಕೈಗೊಳ್ಳುವಂತೆ ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಗುರುತಿಸಲಾದ ಅಪಘಾತವಾಗುವ ಕಪ್ಪುಚುಕ್ಕೆ ಪ್ರದೇಶಗಳಲ್ಲಿ ಅಗತ್ಯವಿರುವ ರಸ್ತೆ ಸುಧಾರಣಾ ಅಭಿವೃದ್ಧಿ ಕಾಮಗಾರಿಗಳನ್ನು ವೈಜ್ಞಾನಿಕ ರೀತಿಯಲ್ಲಿ ಕೈಗೊಂಡು, ಆ ಮೂಲಕ ಸಾರ್ವಜನಿಕ ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು.

ಸಾರ್ವಜನಿಕರು ವಾಹನದಲ್ಲಿ ಸಂಚರಿಸುವಾಗ ರಸ್ತೆ ಸುರಕ್ಷತಾ ನಿಯಮ ಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ರಸ್ತೆ ಅಭಿವೃದ್ಧಿ ಕಾಮಗಾರಿಗಳು ನಡೆಯುವ ಸ್ಥಳಗಳಲ್ಲಿ ವಾಹನಗಳನ್ನು ಜಾಗರೂಕತೆಯಿಂದ ಚಾಲನೆ ಮಾಡ ಬೇಕು. ಸಾರಿಗೆ ಪ್ರಾಧಿಕಾರ ಸೂಚಿಸಿರುವ ವೇಗಮಿತಿಯಲ್ಲಿ ಸಂಚರಿಸಿ ಯಾವುದೇ ಅವಘಡಗಳು ಆಗದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದರು.

ನಗರದಲ್ಲಿ ಸಿಗ್ನಲ್‌ಲೈಟ್: ಉಡುಪಿ ನಗರಸಭಾ ವ್ಯಾಪ್ತಿಯ ಪ್ರಮುಖ ಜಂಕ್ಷನ್‌ಗಳಲ್ಲಿ ಟ್ರಾಫಿಕ್ ಸಿಗ್ನಲ್ ಲೈಟ್ ಅಳವಡಿಸಬೇಕು. ರಾಷ್ಟ್ರೀಯ ಹೆದ್ದಾರಿಯ ಅನೇಕ ಕಡೆಗಳಲ್ಲಿ, ರಸ್ತೆಯ ಮಧ್ಯದಲ್ಲಿ ಜಾಹಿರಾತುಗಳನ್ನು ಅಳವಡಿ ಸಲು ಉಪಯೋಗಿಸಿರುವ ಕಂಬಗಳನ್ನು ಆದ್ಯತೆ ಮೇಲೆ ತೆರವು ಗೊಳಿಸಬೇಕು. ರಸ್ತೆ ಬದಿಗಳಲ್ಲಿ ಅನಧಿಕೃತವಾಗಿ ಕಾರ್ಯಾಚರಿಸುತ್ತಿರುವ ಫಾಸ್ಟ್‌ಫುಡ್ ಸೆಂಟರ್, ತಳ್ಳುವ ಗಾಡಿಗಳು ಹಾಗೂ ಗೂಡಂಗಡಿಗಳನ್ನು ಸ್ಥಳಾಂತರಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದರು.

ಜಿಲ್ಲೆಯಲ್ಲಿ ಸಂಚರಿಸುತ್ತಿರುವ ಕೆಲವು ಬಸ್‌ಗಳು ಬಸ್ ನಿಲ್ದಾಣವನ್ನು ಹೊರತುಪಡಿಸಿ, ಆಸ್ಪತ್ರೆ, ಶೈಕ್ಷಣಿಕ ಸಂಸ್ಥೆಗಳ ಮುಂಭಾಗದಲ್ಲಿ ಅನಧಿಕೃತ ವಾಗಿ ನಿಲುಗಡೆಯನ್ನು ನೀಡುತ್ತಿದ್ದು, ಇದರಿಂದ ಸಾರ್ವಜನಿಕರ ಓಡಾಟಕ್ಕೆ ತೊಂದರೆ ಉಂಟಾಗುತ್ತಿದೆ. ಶಾಲೆ ಹಾಗೂ ಆಸ್ಪತ್ರೆಗಳ ಬಳಿ ಬಸ್ ನಿಲ್ಲದೇ ಸೂಕ್ತ ನಿಲ್ದಾಣಗಳನ್ನು ಬಸ್‌ಗಳು ನಿಲ್ಲಿಸಲು ಕ್ರಮಕೈಗೊಳ್ಳಬೇಕು ಎಂದು ಸಾರಿಗೆ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಆಟೋರಿಕ್ಷಾ ತಂಗುದಾಣಗಳಲ್ಲಿ ಎಲ್ಲಾ ಆಟೋರಿಕ್ಷಾ ಚಾಲಕರು ತಮ್ಮ ವಾಹನಗಳನ್ನು ನಿಲ್ಲಿಸಲು ಅನುಮತಿ ನೀಡಬೇಕೆಂದು ಮನವಿ ನೀಡಿದ್ದು, ಈ ಸಂಬಂಧ ಆರ್‌ಟಿಓ, ಪೊಲೀಸ್ ಇಲಾಖೆ ಹಾಗೂ ನಗರಸಭೆ ಆಯುಕ್ತರು ನಿಲ್ದಾಣ ಸಾಮರ್ಥ್ಯದ ಆಧಾರ ಮೇಲೆ ಆಟೋರಿಕ್ಷಾಗಳ ನಿಲುಗಡೆಗೆ ಸೂಕ್ತ ನಿರ್ಧಾರ ಕೈಗೊಳ್ಳಬೇಕೆಂದು ಸೂಚನೆ ನೀಡಿದರು.

ಹೆಬ್ರಿ ತಾಲೂಕಿನ ಪಂಚಾಯತ್ ವ್ಯಾಪ್ತಿಯ ರಿಕ್ಷಾ ನಿಲ್ದಾಣವನ್ನು ಖಾಯಂ ನಿಲ್ದಾಣವಾಗಿ ಮಾಡುವ ಬಗ್ಗೆ ಮನವಿ ಬಂದಿದ್ದು, ಲೋಕೋಪಯೋಗಿ ಹಾಗೂ ಆರ್‌ಟಿಓ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ, ಅವಶ್ಯವಿದ್ದಲ್ಲಿ ಮಾತ್ರ ಖಾಯಂ ನಿಲ್ದಾಣ ಮಾಡಲು ಅನುಮತಿ ನೀಡುವಂತೆ ತಿಳಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್ ಮಾತನಾಡಿ, ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮೀಡಿಯನ್ ಓಪನ್‌ಗಳನ್ನು ಮಾಡುವಾಗ ಸಾರ್ವಜನಿಕರ ರಸ್ತೆ ಸಂಚಾರಕ್ಕೆ ಯಾವುದೇ ಅಡೆತಡೆಯಾಗದಂತೆ, ನಿಯಮಾ ನುಸಾರ ವಾಹನ ದಟ್ಟಣೆ ಆಗದೇ ಇರುವಂತಹ ಸ್ಥಳಗಳನ್ನು ಗುರುತಿಸಿ ಮಾಡಬೇಕೆಂದರು. ಪ್ರಮುಖ ರಸ್ತೆಗಳಲ್ಲಿ ಸುರಕ್ಷತಾ ನಿಯಮಗಳ ಬಗ್ಗೆ ಮಾಹಿತಿನೀಡುವ ಸೂಚನಾ ಫಲಕಗಳನ್ನು ಅಳವಡಿಸುವಂತೆ ತಿಳಿಸಿದರು.

ಸಭೆಯಲ್ಲಿ ಡಿಎಫ್‌ಓ ಗಣಪತಿ, ಜಿಲ್ಲಾ ಪ್ರಾದೇಶಿಕ ಸಾರಿಗೆ ಅಧಿಕಾರಿ ಲಕ್ಷ್ಮೀನಾರಾಯಣ್ ನಾಯಕ್, ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಅಭಿಯಂತರ ಕಿರಣ್ ಎಸ್, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕ ಅಬ್ದುಲ್ಲಾ ಮೊಹಮ್ಮದ್ ಅಜ್ಮಿ, ಪೌರಾಯುಕ್ತ ಮಹಾಂತೇಶ ಹಂಗರಗಿ, ವಿವಿಧ ಜಿಲ್ಲಾ ಮಟ್ಟದ ಅಧಿಕಾರಿ ಗಳು, ತಹಶೀಲ್ದಾರರು ಹಾಗೂ ಇತರರು ಉಪಸ್ಥಿತರಿದ್ದರು.





 


 


Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News