ನೀಟ್ ಹಗರಣ, ಪೊಲೀಸ್ ದೌರ್ಜನ್ಯದ ನೈತಿಕ ಹೊಣೆಹೊತ್ತು ಪ್ರಧಾನಿ ಮೋದಿ, ಅಮಿತ್ ಶಾ, ಪ್ರಧಾನ್ ರಾಜಿನಾಮೆ ನೀಡಲಿ: ಮಂಜುನಾಥ ಭಂಡಾರಿ ಆಗ್ರಹ
ಉಡುಪಿ, ಜು.23: ನೀಟ್ ಪರೀಕ್ಷೆಯಲ್ಲಿನ ಅಕ್ರಮಗಳನ್ನು ಕೇಂದ್ರ ಸರಕಾರ ಗಂಭೀರವಾಗಿ ಪರಿಗಣಿಸದೆ, ವಿದ್ಯಾರ್ಥಿಗಳ ಧ್ವನಿಯನ್ನು ಹತ್ತಿಕ್ಕುವ ಪ್ರಯತ್ನ ನಡೆಸುತ್ತಿದೆ. ನೀಟ್ ಹಗರಣ ಹಾಗೂ ಜು.20ರಂದು ಹೊಸದಿಲ್ಲಿ ಯಲ್ಲಿ ಧರಣಿ ನಿರತ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯದ ನೈತಿಕ ಹೊಣೆ ಹೊತ್ತು ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಹಾಗೂ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡುವಂತೆ ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಆಗ್ರಹಿಸಿದ್ದಾರೆ.
ಉಡುಪಿ ಬ್ರಹ್ಮಗಿರಿಯಲ್ಲಿರುವ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡುತಿದ್ದರು.
ಪ್ರಜಾಪ್ರಭುತ್ವದ ಬುನಾದಿಯೇ ಚರ್ಚೆ ಹಾಗೂ ಸಂವಾದ. ಆದರೆ ಬಿಜೆಪಿ ಹಾಗೂ ನರೇಂದ್ರ ಮೋದಿ ಅಧಿಕಾರಕ್ಕೆ ಬಂದ ನಂತರ ಯಾವುದೇ ವಿಷಯದ ಕುರಿತು ಸಂವಾದ ನಡೆಯುತ್ತಿಲ್ಲ. ಮೋದಿ ಅವರದು ಎಲ್ಲವೂ ಏಕಮುಖ ಚರ್ಚೆ. ಆದರೆ ಕಳೆದ ಆರು ವಾರಗಳಿಂದ ದೇಶದಲ್ಲಿ ನಡೆಯುತ್ತಿರುವ ಎಲ್ಲಾ ಘಟನೆಗಳಿಗೆ ಸರಕಾರ ಚರ್ಚೆಗೆ ಮುಂದಾಗದಿರುವುದೇ ಮೂಲ ಕಾರಣ. ನೀಟ್ ಹಗರಣ, ಪ್ರಶ್ನೆಪತ್ರಿಕೆ ಸೋರಿಕೆಯ ಕುರಿತಂತೆ ವಿದ್ಯಾರ್ಥಿಗಳು ಪ್ರಧಾನಿ ಹಾಗೂ ಸಚಿವ ಧರ್ಮೇಂದ್ರ ಪ್ರಧಾನ್ರನ್ನು ಚರ್ಚೆಗೆ ಆಹ್ವಾನಿಸಿದರೂ ಅದಕ್ಕೆ ಮಾನ್ಯತೆ ನೀಡಲಿಲ್ಲ ಎಂದು ಭಂಡಾರಿ ದೂರಿದರು.
ದೇಶದ ಪ್ರಧಾನಿ ಹಾಗೂ ಶಿಕ್ಷಣ ಸಚಿವರು ವಿದ್ಯಾರ್ಥಿಗಳ ಬೇಡಿಕೆಗಳಿಗೆ ಕಿವಿಗೊಡುತ್ತಿಲ್ಲ. ದೇಶದ ಲಕ್ಷಾಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕುರಿತು ಚಿಂತಿತರಾಗಿದ್ದಾರೆ. ಇಂಥ ಗಂಭೀರ ವಿಷಯದ ಬಗ್ಗೆ ಚರ್ಚೆ ನಡೆಸಲು ಸಹ ಸರ್ಕಾರ ಮುಂದೆ ಬಂದಿಲ್ಲ. ಸಾಮಾಜಿಕ ಕಾರ್ಯಕರ್ತ ಸೋನಂ ವಾಂಗ್ಚುಕ್ ನಡೆಸಿದ ಪ್ರತಿಭಟನೆಗೂ ಸರ್ಕಾರ ಸ್ಪಂದಿಸಿಲ್ಲ. ಸಂಸತ್ ಕಡೆಗೆ ತೆರಳುತ್ತಿದ್ದ ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ನಡೆಸಿ ದೌರ್ಜನ್ಯ ಎಸಗಲಾಗಿದೆ ಎಂದವರು ಟೀಕಿಸಿದರು.
ತಿರುಗುಬಾಣ: ದೇಶದ ಯುವಜನತೆ ಹಾಗೂ ವಿದ್ಯಾರ್ಥಿಗಳನ್ನು ರಾಷ್ಟ್ರವಿರೋಧಿಗಳಂತೆ ಬಿಂಬಿಸುವ ಪ್ರಯತ್ನವನ್ನು ಬಿಜೆಪಿ ಸರಕಾರ ಮಾಡುತ್ತಿದೆ. ಇದು ಪ್ರಜಾಪ್ರಭುತ್ವ ಮೌಲ್ಯಗಳಿಗೆ ವಿರುದ್ಧವಾಗಿದೆ. ಪ್ರಜಾಪ್ರಭುತ್ವದಲ್ಲಿ ಪ್ರಜೆಗಳ ಧ್ವನಿಯನ್ನು ಹತ್ತಿಕ್ಕುವ ಪ್ರಯತ್ನವನ್ನು ಸರ್ಕಾರ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ ಅವರು, ಈ ಹಿಂದೆ ಕಾಂಗ್ರೆಸ್ ಸರ್ಕಾರದ ಆಡಳಿತವಿದ್ದ ಸಂದರ್ಭ ಕಾಂಗ್ರೆಸ್ ವಿರುದ್ಧ ವಿದ್ಯಾರ್ಥಿ ಸಮುದಾಯವನ್ನು ಬಳಸಿಕೊಳ್ಳಲು ಯತ್ನಿಸಿದ್ದೇ ಈಗ ಬಿಜೆಪಿಗೆ ತಿರುಗುಬಾಣವಾಗಿದೆ ಎಂದು ವ್ಯಂಗ್ಯವಾಡಿದರು.
ಕಳೆದ 12 ವರ್ಷಗಳಲ್ಲಿ ಹಲವು ನೇಮಕಾತಿ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ ಗಳು ನಡೆದಿವೆ. ಈ ಪ್ರಕರಣಗಳಲ್ಲಿ ಎಷ್ಟು ಜನರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ ಎಂಬುದನ್ನು ಸರ್ಕಾರ ಸ್ಪಷ್ಟಪಡಿ ಸಬೇಕು. ನೀಟ್ ಹಗರಣದ ಎಲ್ಲಾ ಬೆಳವಣಿಗೆಗಳಿಗೆ ಹೊಣೆ ಹೊತ್ತು ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ ನೀಡಬೇಕು ಎಂದವರು ಆಗ್ರಹಿಸಿದರು.
ವಿದ್ಯಾರ್ಥಿ ಸಂಘಟನೆಗಳು ಈಗ ನಡೆಸುತ್ತಿರುವ ಧರಣಿ, ಪ್ರತಿಭಟನೆಗೆ ತಮ್ಮ ಪಕ್ಷದ ಸಂಪೂರ್ಣ ಬೆಂಬಲವಿದೆ ಎಂದು ತಿಳಿಸಿದ ಅವರು, ವಿದ್ಯಾರ್ಥಿ ಗಳ ಮೇಲೆ ಲಾಠಿಚಾರ್ಜ್ ನಡೆಸಿದ ಘಟನೆಗೆ ನೈತಿಕ ಹೊಣೆ ಹೊತ್ತು ಪ್ರಧಾನಿ ಹಾಗೂ ಗೃಹ ಸಚಿವರೂ ರಾಜೀನಾಮೆ ನೀಡಬೇಕು ಎಂದು ಮಂಜುನಾಥ್ ಭಂಡಾರಿ ಒತ್ತಾಯಿಸಿದರು.
ಎಸ್ಐಆರ್ಗೆ ಸಮರ್ಥನೆ: ರಾಜ್ಯದಲ್ಲಿ ಈಗ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಯನ್ನು (ಎಸ್ಐಆರ್) ನಾವು ಸಮರ್ಥಿಸುತ್ತೇವೆ ಹಾಗೂ ಸಂಪೂರ್ಣವಾಗಿ ಬೆಂಬಲಿಸುತ್ತೇವೆ. ಆದರೆ ಪಶ್ಚಿಮ ಬಂಗಾಳದಲ್ಲಿ ನಡೆದ ರೀತಿಯ ಪರಿಷ್ಕರಣೆಯನ್ನು ಕರ್ನಾಟಕದಲ್ಲಿ ನಡೆಯಲು ನಾವು ಬಿಡುವುದಿಲ್ಲ. ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಈಗಾಗಲೇ ಈ ಬಗ್ಗೆ ಸ್ಪಷ್ಟ ನಿಲುವನ್ನು ವ್ಯಕ್ತಪಡಿಸಿದ್ದಾರೆ ಎಂದು ಮಂಜುನಾಥ ಭಂಡಾರಿ ಹೇಳಿದರು.
ರಾಜ್ಯದಲ್ಲಿ ಯಾವುದೇ ಅರ್ಹ ಮತದಾರನ ಹೆಸರನ್ನು ಮತದಾರರ ಪಟ್ಟಿಯಿಂದ ಕೈಬಿಡುವುದನ್ನು, ಆತನ ಹಕ್ಕನ್ನು ಕಸಿದುಕೊಳ್ಳುವುದನ್ನು ನಾವು ಒಪ್ಪುವುದಿಲ್ಲ. ಈಗಾಗಲೇ ಕಾಂಗ್ರೆಸ್ ಕಾರ್ಯಕರ್ತರು ಈ ಬಗ್ಗೆ ಪ್ರಕ್ರಿಯೆ ಮೇಲೆ ಎಚ್ಚರಿಕೆ ನಿಗಾ ಇರಿಸಿದ್ದಾರೆ. ಯಾವುದೇ ಮತದಾರನ ಹಕ್ಕು ಮೊಟಕುಗೊಳ್ಳದಂತೆ ಅಧಿಕಾರಿಗಳು ನೋಡಿಕೊಳ್ಳಬೇಕು ಎಂದರು.
ರಾಮಮಂದಿರದ ಹಣ ಕೊಳ್ಳೆಯ ಕುರಿತು ಮಾತನಾಡಿದ ಭಂಡಾರಿ, ರಾಮನ ಹೆಸರು ಹೇಳಿ ಅಧಿಕಾರಕ್ಕೆ ಬಂದ ವರು ಇಂದು ಹುಂಡಿಗೆ ಕೈ ಹಾಕಿದ್ದಾರೆ. ಇಡೀ ಅವ್ಯವಹಾರದ ನೈತಿಕ ಹೊಣೆಗಾರಿಕೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರೇ ಹೊರಬೇಕಾಗಿದೆ. ಏಕೆಂದರೆ ರಾಮನ ಪ್ರತಿಷ್ಠಾಪನೆಯನ್ನು ಮಾಡಿದವರೇ ಅವರು ಎಂದು ಭಂಡಾರಿ ನುಡಿದರು.
ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕಕುಮಾರ್ ಕೊಡವೂರು, ನಾಯಕರಾದ ಕಿಶನ್ ಹೆಗ್ಡೆ ಕೊಳ್ಕೆಬೈಲು, ದಿನೇಶ್ ಹೆಗ್ಡೆ ಮೊಳಹಳ್ಳಿ, ಉದಯಕುಮಾರ್ ಶೆಟ್ಟಿ ಮುನಿಯಾಲು, ಜ್ಯೋತಿ ಹೆಬ್ಬಾರ್, ದಿನೇಶ್ ಪುತ್ರನ್, ಹರೀಶ್ ಕಿಣಿ, ರಮೇಶ್ ಕಾಂಚನ್, ಕೆ.ಸದಾನಂದ ಶೆಟ್ಟಿ, ತಿಮ್ಮ ಪೂಜಾರಿ, ಕಿರಣ್ ಹೆಗ್ಡೆ, ನಾಗೇಶ್ ಉದ್ಯಾವರ ಮುಂತಾದವರು ಉಪಸ್ಥಿತರಿದ್ದರು.