ಪ್ರಧಾನಿ ಉಡುಪಿ ಭೇಟಿ ಹಿನ್ನೆಲೆ, ದುರಸ್ಥಿ ಕಾರ್ಯ ತಾತ್ಕಾಲಿಕ ಸ್ಥಗಿತ
ಸಾಂದರ್ಭಿಕ ಚಿತ್ರ PC | Grok
ಉಡುಪಿ, ನ.25: ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಇದೇ ನ.28ರಂದು ಉಡುಪಿ ಜಿಲ್ಲೆಗೆ ಭೇಟಿ ನೀಡಲಿರುವ ಸಂದರ್ಭದಲ್ಲಿ ನಿಯಮಾನುಸಾರ ಶಿಷ್ಟಾಚಾರವನ್ನು ಪಾಲಿಸಬೇಕಾಗಿರುವ ಹಿನ್ನೆಲೆಯಲ್ಲಿ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ 2023 ಸೆಕ್ಷನ್ 163ರಂತೆ ಜಿಲ್ಲಾ ದಂಡಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಈ ಕೆಳಗಿನ ಆದೇಶ ಹೊರಡಿಸಿದ್ದಾರೆ.
ಉಡುಪಿ ನಗರ ವ್ಯಾಪ್ತಿಯೊಳಗೆ ಎನ್.ಹೆಚ್-66 ಮತ್ತು ಸಂಪರ್ಕ ರಸ್ತೆಗಳ ಮೇಲೆ ನಡೆಯುತ್ತಿರುವ ಎಲ್ಲಾ ಭೂಮಿ ಅಗೆಯುವ, ಕೊರೆಯುವ, ತೋಡುವ ಹಾಗೂ ಗುಂಡಿ ತೋಡುವ ಕೆಲಸಗಳನ್ನು ತಕ್ಷಣವೇ ನಿಲ್ಲಿಸಬೇಕು. ಈ ನಿರ್ಬಂಧ ಆದೇಶವು ನ. 28ರ ಸಂಜೆ 5ರವರೆಗೆ ಜಾರಿಯಲ್ಲಿರುತ್ತದೆ.
ತುರ್ತು ಪರಿಸ್ಥಿತಿಗಳಲ್ಲಿ ಕಾರ್ಯ ನಿರ್ವಹಿಸಬೇಕಾದಲ್ಲಿ ಜಿಲ್ಲಾಧಿಕಾರಿಗಳ ಕಚೇರಿಯಿಂದ ಪೂರ್ವಾನುಮತಿ ಪಡೆಯುವುದು ಕಡ್ಡಾಯವಾಗಿರುತ್ತದೆ. ಈ ಆದೇಶವನ್ನು ಎನ್.ಹೆಚ್ ವಿಭಾಗೀಯ ಅಧಿಕಾರಿಗಳು, ಪಿ.ಡಬ್ಲ್ಯೂ.ಡಿ, ಪಿ.ಆರ್.ಇ.ಡಿ, ನಗರಸಭೆ, ಬಿಎಸ್ಎನ್ಎಲ್ ಅಧಿಕಾರಿಗಳು ಮತ್ತು ಇತರ ಸಂಬಂಧಿತ ಸಂಸ್ಥೆಗಳು ಕಡ್ಡಾಯವಾಗಿ ಪಾಲಿಸಬೇಕು. ಈ ಆದೇಶವನ್ನು ಉಲ್ಲಂಘಿಸಿದಲ್ಲಿ ಕಾನೂನು ಪ್ರಕಾರ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.